ಚನ್ನಪಟ್ಟಣ ಉಪಚುನಾವಣೆಗೆ ₹50 ಕೋಟಿ ಬೇಡಿಕೆ ಆರೋಪ: ಎಚ್ಡಿಕೆ ವಿರುದ್ಧ ಯಾವುದೇ ಆತುರದ ಕ್ರಮಕೈಗೊಳ್ಳದಂತೆ ಆದೇಶ
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವ ಆರೋಪದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ ಮಾಡಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಜೆಡಿಎಸ್ ಮಾಜಿ ಮುಖಂಡ ವಿಜಯ್ ಟಾಟಾ ದೂರಿನ ಮೇರೆಗೆ ಅಮೃತಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಎಚ್ ಡಿ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎ ವಿ ನಿಶಾಂತ್ ಅವರು “ಇದೇ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜೆಡಿಎಸ್ ನಗರದ ಘಟಕದ ಅಧ್ಯಕ್ಷ ರಮೇಶ್ ಗೌಡ ವಿರುದ್ಧ ಯಾವುದೇ ಬಲವಂತ ಕ್ರಮಕೈಗೊಳ್ಳದಂತೆ ಆದೇಶ ಮಾಡಲಾಗಿದೆ” ಎಂದು ಪೀಠದ ಗಮನಕ್ಕೆ ತಂದರು.
ಇದನ್ನು ಆಲಿಸಿದ ಪೀಠವು ಇಲ್ಲಿಯೂ ಯಾವುದೇ ಬಲವಂತದ ಕ್ರಮಕೈಗೊಳ್ಳಬಾರದು ಎಂಬ ಆದೇಶ ಅನ್ವಯಿಸಲಿದೆ ಎಂದು ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿತು.
ಅಕ್ಟೋಬರ್ 23ರಂದು ರಮೇಶ್ ಗೌಡ ಅರ್ಜಿ ವಿಚಾರಣೆ ನಡೆಸಿದ್ದ ಪೀಠವು “ಅಮೃತಹಳ್ಳಿ ಠಾಣಾಧಿಕಾರಿಯು ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂಬ ದೂರಿಗೆ ಸಂಬಂಧಿಸಿದಂತೆ ಮೊದಲಿಗೆ ಎನ್ಸಿಆರ್ ದಾಖಲಿಸಿ, ಆನಂತರ ಎಫ್ಐಆರ್ ಮಾಡಿರುವುದು ಏಕೆ ಎಂಬುದಕ್ಕೆ ಮುಂದಿನ ವಿಚಾರಣೆ ವೇಳೆಗೆ ವಿವರಣೆ ಸಲ್ಲಿಸಬೇಕು.ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಪೂರಿತ ಕ್ರಮಕೈಗೊಳ್ಳಬಾರದು” ಎಂದು ಆದೇಶಿಸಿತ್ತು.
ವಿಜಯ್ ಟಾಟಾ ದೂರು ಆಧರಿಸಿ ಅಕ್ಟೋಬರ್ 3ರಂದು ರಮೇಶ್ ಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ಗಳಾದ 308(2), 351(2), 3(5) ಅಡಿ ಪ್ರಕರಣ ದಾಖಲಿಸಲಾಗಿದೆ.


