'ಮೋದಿ ಆಶೀರ್ವಾದಿಂದ ಕರ್ನಾಟಕ ವಂಚಿತವಾಗದಂತೆ ನೋಡಿಕೊಳ್ಳಿʼ ಎಂದಿದ್ದ ನಡ್ಡಾ ವಿರುದ್ಧದ ಪ್ರಕರಣ ವಜಾ ಮಾಡಿದ ಹೈಕೋರ್ಟ್‌

ಚುನಾವಣಾಧಿಕಾರಿಯಾಗಿದ್ದ ಲಕ್ಷ್ಮಣ್‌ ನಂದಿ ಅವರು ಶಿಗ್ಗಾವಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜೆ ಪಿ ನಡ್ಡಾ ಅವರು ಮತದಾರರ ಮೇಲೆ ಅನುಚಿತ ಪ್ರಭಾವ ಬೀರುವ ಮೂಲಕ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿದ್ದರು.
JP Nadda and Karnataka HC
JP Nadda and Karnataka HC
Published on

ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಅನುಚಿತವಾಗಿ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ.

ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ” ಎಂದು ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ಹಾವೇರಿ ಪ್ರಧಾನ ಸಿವಿಲ್‌ ನ್ಯಾಯಾಲಯದ ಮುಂದಿರುವ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಜೆ ಪಿ ನಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ನಡ್ಡಾ ಅವರನ್ನು ಪ್ರತಿನಿಧಿಸಿದ್ದ ವಕೀಲ ಎಂ ವಿನೋದ್‌ ಕುಮಾರ್‌ ಅವರು “ಚುನಾವಣಾ ಸಮಾವೇಶದಲ್ಲಿ ಭಾಷಣವನ್ನು ಪರಿಶೀಲಿಸಿದರೆ ಅದರಲ್ಲಿ ಐಪಿಸಿ ಸೆಕ್ಷನ್‌ಗಳಾದ 171ಸಿ (ಚುನಾವಣೆಯ ಮೇಲೆ ಪ್ರಭಾವ ಬೀರುವುದು) ಮತ್ತು 171ಎಫ್‌ (ಚುನಾವಣೆಯ ಮೇಲೆ ಪ್ರಭಾವ ಬೀರಿದ್ದಕ್ಕೆ ಶಿಕ್ಷೆ) ಅಡಿ ಯಾವುದೇ ಅಪರಾಧ ಕಾಣಸಿಗುವುದಿಲ್ಲ. ಇದರಲ್ಲಿ ಪ್ರಭಾವ ಬೀರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಕರಣದಲ್ಲಿ ಯಾವುದೇ ತಿರುಳಿಲ್ಲ” ಎಂದರು.

ಆಗ ಪೀಠವು ಮೌಖಿಕವಾಗಿ ಭಾಷಣ ಮತ್ತು ಪ್ರಕರಣದಲ್ಲಿ ಏನೂ ಇಲ್ಲ ಎಂದು ಎಫ್‌ಐಆರ್‌ ವಜಾ ಮಾಡಿತು.

Also Read
ಮತದಾರರಿಗೆ ಆಮಿಷ ಪ್ರಕರಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಏಪ್ರಿಲ್‌ 19ರಂದು ಮಧ್ಯಾಹ್ನ 1.15ರಿಂದ 1.50ರ ಅವಧಿಯಲ್ಲಿ ಶಿಗ್ಗಾವಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಜೆ ಪಿ ನಡ್ಡಾ ಅವರು “ಕರ್ನಾಟಕದ ಜನತೆ ಬಿಜೆಪಿಗೆ ಮತ ನೀಡಿ, ಪ್ರಧಾನಿ ನರೇಂದ್ರ ಮೋದಿಯವರ ಒಲವು ಗಳಿಸಿರಿ. ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ” ಎಂದು ಹೇಳಿಕೆ ನೀಡಿದ್ದರು ಎಂದು ಚುನಾವಣಾಧಿಕಾರಿಯಾಗಿದ್ದ ಲಕ್ಷ್ಮಣ್‌ ನಂದಿ ಅವರು ಶಿಗ್ಗಾವಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜೆ ಪಿ ನಡ್ಡಾ ಅವರು ಮತದಾರರ ಮೇಲೆ ಅನುಚಿತ ಪ್ರಭಾವ ಬೀರುವ ಮೂಲಕ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ದೂರು ಸ್ವೀಕರಿಸಿದ್ದ ಪೊಲೀಸರು, ನಡ್ಡಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 171(ಸಿ), 171(ಎಫ್) ಮತ್ತು ಜನಪ್ರತಿನಿಧಿಗಳ ಕಾಯಿದೆಯ ಸೆಕ್ಷನ್‌ 123(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

Kannada Bar & Bench
kannada.barandbench.com