ಮುಜರಾಯಿ ದೇವಾಲಯಗಳಿಗೆ ನಿರ್ವಹಣಾ ಸಮಿತಿ ರಚನೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಹೈಕೋರ್ಟ್‌ನ ವಿಭಾಗೀಯ ಪೀಠ ಹೊರಡಿಸಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಈಗಾಗಲೇ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ತಿದ್ದುಪಡಿ ಕಾಯಿದೆಯಂತೆ ನಿರ್ವಹಣಾ ಸಮಿತಿಗಳನ್ನು ರಚಿಸುವ ಅಧಿಕಾರ ಸರ್ಕಾರಕ್ಕಿದೆ ಎಂದಿರುವ ನ್ಯಾಯಾಲಯ.
Karnataka High Court
Karnataka High Court
Published on

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ‘ಬಿʼ ಮತ್ತು ‘ಸಿ’ ವರ್ಗದ ದೇವಾಲಯಗಳಿಗೆ ನಿರ್ವಹಣಾ ಸಮಿತಿ ರಚಿಸುವ ಸಂಬಂಧ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಆಯುಕ್ತರು 2016ರ ಜುಲೈ 12ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ದೇವಸ್ಥಾನಗಳ ನಿರ್ವಹಣಾ ಸಂಘದ ಟ್ಟಸ್ಟಿಯಾದ ಉಡುಪಿಯ ವೈ ಭರತ್‌ ಹೆಗಡೆ 2016ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

“ಈ ಹಿಂದೆ ಹೈಕೋರ್ಟ್‌ನ ವಿಭಾಗೀಯ ಪೀಠ ಹೊರಡಿಸಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಈಗಾಗಲೇ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ತಿದ್ದುಪಡಿ ಕಾಯಿದೆಯಂತೆ ನಿರ್ವಹಣಾ ಸಮಿತಿಗಳನ್ನು ರಚಿಸುವ ಅಧಿಕಾರ ಸರ್ಕಾರಕ್ಕಿದೆ” ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಕಾಯಿದೆ ಸೆಕ್ಷನ್‌ 25ಕ್ಕೆ 2011 ಹಾಗೂ 2012ರಲ್ಲಿ ತಿದ್ದುಪಡಿ ತಂದು ನಿರ್ವಹಣಾ ಸಮಿತಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವು ದೇವಾಲಯಗಳ ಪಾರಂಪರಿಕ ಟ್ರಸ್ಟ್‌ಗಳು ಹೈಕೋರ್ಟ್ ಮೆಟ್ಟಿಲೇರಿದ್ದವು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು ತಿದ್ದುಪಡಿ ಕಾಯಿದೆಯನ್ನು ಅನೂರ್ಜಿತಗೊಳಿಸಿ 2015ರ ನವೆಂಬರ್ 17ರಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ತೀರ್ಪಿಗೆ 2016ರ ಏಪ್ರಿಲ್ 8ರಂದು ತಡೆ ನೀಡಿತ್ತು. ತದನಂತ ಸರ್ಕಾರ ತಿದ್ದುಪಡಿ ಕಾಯಿದೆಗೆ ಅನುಗುಣವಾಗಿ ‘ಬಿ' ಮತ್ತು ‘ಸಿ’ ದೇವಸ್ಥಾನಗಳಿಗೆ ನಿರ್ವಹಣಾ ಸಮಿತಿಗಳನ್ನು ರಚಿಸುವ ನಿಟ್ಟಿನಲ್ಲಿ 2016ರ ಜುಲೈ 12ರಂದು ಅಧಿಸೂಚನೆ ಹೊರಡಿಸಿತ್ತು.

Kannada Bar & Bench
kannada.barandbench.com