ದರ್ಶನ್‌ಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು?

ಹಾಲಿ ಪ್ರಕರಣದಲ್ಲಿ ದರ್ಶನ್‌ ಬಂಧನವಾಗುವುದಕ್ಕೂ ಮುಂಚೆಯಿಂದಲೂ ಅವರು ಪ್ರಸಕ್ತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಂಧನದ ಬಳಿಕ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯದಿರುವುದು ನೋವು ಉಲ್ಬಣಕ್ಕೆ ಕಾರಣವಾಗಿರಬಹುದು ಎಂದಿರುವ ನ್ಯಾಯಾಲಯ.
Darshan and Karnataka HC
Darshan and Karnataka HC
Published on

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಎಂಟು ಷರತ್ತುಗಳನ್ನು ವಿಧಿಸಿ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್‌, ಬೆಂಗಳೂರಿನಲ್ಲಿ ದರ್ಶನ್‌ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಆದೇಶಿಸಿದೆ.

ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದೆ. ಹೀಗಾಗಿ, ತನ್ನ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿ ಕೋರಿ ದರ್ಶನ್‌ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಬೇಕು ಎಂಬುದು ತಮ್ಮ ಅಭಿಪಾಯವಾಗಿದೆ ಎಂದು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಹೇಳಿದೆ.

ನ್ಯಾಯಾಲಯ ವಿಧಿಸಿರುವ ಷರತ್ತುಗಳು ಇಂತಿವೆ:

  1. ದರ್ಶನ್‌ ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು.

  2. ಬೆಂಗಳೂರಿನಲ್ಲಿ ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್‌ಗೆ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಬೇಕು. ವೈದ್ಯಕೀಯ ತಪಾಸಣೆಗೆ ಒಳಗಾಗಿ, ಶಸ್ತ್ರಚಿಕಿತ್ಸೆಯ ಸಂಭಾವ್ಯ ದಿನಾಂಕ, ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ, ಆನಂತರದ ಚಿಕಿತ್ಸೆ ಏನಾದರೂ ಇರಲಿದೆಯೇ ಎಂಬ ಮಾಹಿತಿಯನ್ನು ಜೈಲಿನಿಂದದ ಬಿಡುಗಡೆಯಾದ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು.

  3. ಪ್ರಾಸಿಕ್ಯೂಷನ್‌ ಸಾಕ್ಷಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆದರಿಕೆ/ತಿರುಚಬಾರದು.

  4. ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಆ ಚಿಕಿತ್ಸೆಯ ಮುನ್ನೋಟವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.

  5. ಮಧ್ಯಂತರ ಜಾಮೀನು ಅವಧಿಯಲ್ಲಿ ತಮ್ಮ ಆರೋಗ್ಯದ ಸ್ಥಿತಿ ಸೇರಿದಂತೆ ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಅಥವಾ ಸಾಮಾಜಿಕ ಮಾಧ್ಯಮಕ್ಕೆ ಹೇಳಿಕೆ ನೀಡಬಾರದು.

  6. ಹೈಕೋರ್ಟ್‌ನ ಮುಂದಿನ ಆದೇಶಕ್ಕೆ ಒಳಪಟ್ಟಂತೆ, ಮಧ್ಯಂತರ ಜಾಮೀನು ಅವಧಿ ಮುಗಿದ ತಕ್ಷಣ ವಿಚಾರಣಾಧೀನ ನ್ಯಾಯಾಲಯಕ್ಕೆ ದರ್ಶನ್‌ ಶರಣಾಗಬೇಕು.

  7. ದರ್ಶನ್‌ ಅವರು ತಮ್ಮ ಪಾಸ್‌ಪೋರ್ಟ್‌ ಅನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇದು ಹೈಕೋರ್ಟ್‌ನ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ.

  8. ಮಧ್ಯಂತರ ಜಾಮೀನು ಅವಧಿಯಲ್ಲಿ ದರ್ಶನ್‌ ಅವರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ.

Also Read
ನಟ ದರ್ಶನ್‌ಗೆ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಬಿಎಂಸಿಆರ್‌ಸಿ ತಜ್ಞರ ವರದಿ ನಂಬದಿರಲು ಕಾರಣಗಳಿಲ್ಲ  

ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನಲ್ಲಿ ಆರೋಗ್ಯದ ಹಕ್ಕೂ ಸೇರಿದೆ. ವ್ಯಕ್ತಿಯೊಬ್ಬರ ಆರೋಗ್ಯ ಪರಿಸ್ಥಿತಿಯು ಅವರ ಜೀವನದ ಅವಿಭಾಜ್ಯ ಅಂಗವಾಗಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸುವುದರಲ್ಲಿ ವಿಳಂಬವಾಗುವುದು ಗಂಭೀರ ಪರಿಣಾಮಕ್ಕೆ ನಾಂದಿಯಾಗಬಹುದು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ.

ಮುಂದುವರಿದು, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ (ಬಿಎಂಸಿಆರ್‌ಸಿ) ನರರೋಗ ವಿಭಾಗದ ಮುಖ್ಯಸ್ಥರು ದರ್ಶನ್‌ಗೆ ಶಸ್ತ್ರಚಿಕಿತ್ಸೆ ಮಾಡದಿದ್ದರೆ ಆಗಬಹುದಾದ ಪರಿಣಾಮಗಳ ಬಗ್ಗೆ ತಿಳಿಸಿದ್ದಾರೆ. ಇದರಿಂದ ಮೇಲ್ನೋಟಕ್ಕೆ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ. ಅಲ್ಲಿಯವರೆಗೆ ಫಿಸಿಯೋಥೆರಪಿ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಲಿ ಪ್ರಕರಣದಲ್ಲಿ ದರ್ಶನ್‌ ಬಂಧನವಾಗುವುದಕ್ಕೂ ಮುಂಚೆಯಿಂದಲೂ ಅವರು ಪ್ರಸಕ್ತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಂಧನದ ಬಳಿಕ ಅವರಿಗೆ ಸೂಕ್ತ ಚಿಕಿತ್ಸೆ ದೊರಯದಿರುವುದು ನೋವು ಉಲ್ಬಣಕ್ಕೆ ಕಾರಣವಾಗಿರಬಹುದು. 24.10.2024ರ ಮತ್ತು ಹಿಂದಿನ ವೈದ್ಯಕೀಯ ವರದಿಗಳನ್ನು ನೋಡಿದಾಗ ದರ್ಶನ್‌ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎನ್ನುವುದು ತಿಳಿದು ಬರುತ್ತದೆ ಎಂದು ವಿವರಿಸಿದೆ.

ನ್ಯಾಯಾಲಯವು ದರ್ಶನ್‌ ಅವರ ವೈದ್ಯಕೀಯ ವರದಿ ಸಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಅವರನ್ನು ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು, ಬಿಎಂಸಿಆರ್‌ಸಿಯ ತಜ್ಞ ವೈದ್ಯರ ವರದಿಯನ್ನು ನಂಬದಿರಲು ಯಾವುದೇ ಸಕಾರಣಗಳು ಇಲ್ಲ ಎಂದು ನ್ಯಾಯಾಲಯ ಹೇಳಿದೆ.

Attachment
PDF
Darshan Medical Bail
Preview
Kannada Bar & Bench
kannada.barandbench.com