ಮುಡಾ ಪ್ರಕರಣ: ಸಿಎಂ ಪತ್ನಿ ಪಾರ್ವತಿ, ಸಹೋದರ ಮಲ್ಲಿಕಾರ್ಜುನ ಸ್ವಾಮಿಗೆ ನೋಟಿಸ್‌; ಸೆ.4ಕ್ಕೆ ವಿಚಾರಣೆ ಮುಂದೂಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿಸಿದ್ದ ಆದೇಶವನ್ನು ಏಕಸದಸ್ಯ ಪೀಠವು 2024ರ ಸೆಪ್ಟೆಂಬರ್‌ 24ರಂದು ಎತ್ತಿ ಹಿಡಿದಿತ್ತು.
CM Siddaramaiah and Gov Thawar Chand Gehlot, Karnataka HC
CM Siddaramaiah and Gov Thawar Chand Gehlot, Karnataka HC
Published on

ಮುಡಾ ಪ್ರಕರಣದ ಮೇಲ್ಮನವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಅವರ ಸಹೋದರ ಬಿ ಎಂ ಮಲ್ಲಿಕಾರ್ಜುನ ಸ್ವಾಮಿ, ಪೊಲೀಸ್‌ ಮಹಾನಿರ್ದೇಶಕರು ಮತ್ತು ಮೈಸೂರಿನ ವಿಜಯನಗರ ಠಾಣಾಧಿಕಾರಿಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿಗೊಳಿಸಿದೆ.

ಮೂಲ ದೂರುದಾರ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ನಡೆಸಿತು.

ಸ್ನೇಹಮಯಿ ಕೃಷ್ಣ ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಜಿ ರಾಘವನ್‌ ಪ್ರಕರಣದ ಬೆಳವಣಿಗೆಯ ಬಗ್ಗೆ ಪೀಠಕ್ಕೆ ಮಾಹಿತಿ ನೀಡಿದರು.

ಇದನ್ನು ಆಲಿಸಿದ ಪೀಠವು ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿಯಲ್ಲಿ ಬಿ ಎಂ ಪಾರ್ವತಿ ಅವರಿಗೆ ನೋಟಿಸ್‌ ಜಾರಿಯಾಗಿಲ್ಲ. ಅಂತೆಯೇ ರಾಜ್ಯಪಾಲರ ಆದೇಶ ಎತ್ತಿ ಹಿಡಿಯುವಾಗ ಏಕಸದಸ್ಯ ಪೀಠವು ಕಟು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣ ಎದುರಿಸುವಂತೆ ಮಾಡಿರುವ ಆದೇಶ ಬದಿಗೆ ಸರಿಸಲು ಕೋರಿ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಯಲ್ಲಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮೈಸೂರಿನ ವಿಜಯನಗರ ಠಾಣಾಧಿಕಾರಿಗೆ ನೋಟಿಸ್‌ ಜಾರಿಯಾಗಿಲ್ಲ. ಹೀಗಾಗಿ, ಎಲ್ಲರಿಗೂ ನೋಟಿಸ್‌ ಮತ್ತು ಹ್ಯಾಂಡ್‌ ಸಮನ್ಸ್‌ ಜಾರಿ ಮಾಡುವಂತೆ ನಿರ್ದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್‌ 4ಕ್ಕೆ ಮುಂದೂಡಿದೆ.

Also Read
ಮುಡಾ ಪ್ರಕರಣ: ಮೇಲ್ಮನವಿಗಳ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿಸಿದ್ದ ಆದೇಶವನ್ನು ಏಕಸದಸ್ಯ ಪೀಠವು 2024ರ ಸೆಪ್ಟೆಂಬರ್‌ 24ರಂದು ಎತ್ತಿ ಹಿಡಿದಿತ್ತು. ಆನಂತರ ಒಂದು ತಿಂಗಳ ಬಳಿಕ ಸಿದ್ದರಾಮಯ್ಯ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಏಕಸದಸ್ಯ ಪೀಠದ ಆದೇಶ ಹೊರಬಿದ್ದು ಹತ್ತು ತಿಂಗಳಾಗಿದ್ದು ಮೇಲ್ಮನವಿಗಳ ವಿಚಾರಣೆ ಇನ್ನಷ್ಟೇ ಆರಂಭವಾಗಬೇಕಿದೆ. ಪ್ರಕರಣದ ಸಂಬಂಧ ಒಟ್ಟಾರೆ ನಾಲ್ಕು ಮೇಲ್ಮನವಿಗಳು ಸಲ್ಲಿಕೆಯಾಗಿವೆ.

Kannada Bar & Bench
kannada.barandbench.com