ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಣೆ; ಕೋಕಾ ಅನ್ವಯ ಆದೇಶ ವಜಾ

ಕೊಲೆ ಪ್ರಕರಣದಲ್ಲಿ ತನಿಖೆ ಇನ್ನಷ್ಟೇ ಪೂರ್ಣಗೊಳ್ಳಬೇಕಿದ್ದು, ಹೀನ ಕೃತ್ಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ನುಡಿದಿರುವ ನ್ಯಾಯಾಲಯ.
Byrati Basavaraj and Karnataka HC
Byrati Basavaraj and Karnataka HCFB
Published on

ಬೆಂಗಳೂರಿನ ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜು ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ–2000 (ಕೋಕಾ) ಅನ್ವಯಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಆದರೆ, ಇದೇ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸ್ಪಷ್ಟವಾಗಿ ನಿರಾಕರಿಸಿರುವುದರಿಂದ ಅವರಿಗೆ ಬಂಧನ ಭೀತಿ ಎದುರಾಗಿದೆ.

ಬಿಕ್ಲು ಶಿವ ಕೊಲೆಗೆ ಸಂಬಂಧಿಸಿದಂತೆ ಭಾರತೀನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿನ ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಸೆಕ್ಷನ್‌ 3 ಮತ್ತು 4 ಅನ್ವಯಿಸಲು ತನಿಖಾಧಿಕಾರಿಗೆ ಸಿಐಡಿ ಪೊಲೀಸ್‌ ಮಹಾನಿರ್ದೇಶಕರು 12.8.2025ರಂದು ಅನುಮತಿಸಿದ್ದರು. ಈ ಆದೇಶ ಪ್ರಶ್ನಿಸಿ ಬೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ 2025ರ ನವೆಂಬರ್‌ 20ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿತು.

Justice S Sunil Dutt Yadav
Justice S Sunil Dutt Yadav

ಇದೇ ಅರ್ಜಿಯ ಭಾಗವಾಗಿ ನಿರೀಕ್ಷಣಾ ಜಾಮೀನು ಕೋರಿದ್ದ ಮಧ್ಯಂತರ ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೇ, ಭಾರತೀನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೈರತಿ ಬಸವರಾಜು ಹಿಂಪಡೆದಿರುವುದರಿಂದ ಅದನ್ನು ನ್ಯಾಯಾಲಯ ವಜಾಗೊಳಿಸಿದೆ.

“ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಅನ್ವಯಿಸಿ ಮಾಡಿರುವ ಆದೇಶವನ್ನು ಬದಿಗೆ ಸರಿಸಲಾಗಿದೆ. ಪ್ರಕರಣದ ಆರೋಪಿಗಳೆಲ್ಲರಿಗೂ ಕೋಕಾ ಕಾಯಿದೆ ಅನ್ವಯಿಸಿರುವ ಆದೇಶ ವಜಾಗೊಳಿಸಿರುವುದು ಅನ್ವಯಿಸಲಿದೆ. ಕೊಲೆ ಪ್ರಕರಣದಲ್ಲಿ ತನಿಖೆ ಇನ್ನಷ್ಟೇ ಪೂರ್ಣಗೊಳ್ಳಬೇಕಿದ್ದು, ಹೀನ ಕೃತ್ಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಹೀಗಾಗಿ, ನಿರೀಕ್ಷಣಾ ಜಾಮೀನು ಕೋರಿರುವ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಆನಂತರ ಬೈರತಿ ಬಸವರಾಜು ಪರ ಹಿರಿಯ ವಕೀಲ ಸಂದೇಶ್‌ ಚೌಟ ಅವರು “ಕೋಕಾ ಕಾಯಿದೆ ಅನ್ವಯಿಸಿರುವ ಆದೇಶ ವಜಾಗೊಂಡಿರುವುದರಿಂದ ವಿಚಾರಣಾಧೀನ ನ್ಯಾಯಾಲಯದಲ್ಲಿ ಬೈರತಿ ಬಸವರಾಜು ಅವರು ನಿರೀಕ್ಷಣಾ ಜಾಮೀನು ಕೋರುವವರೆಗೆ ರಕ್ಷಣೆ ಒದಗಿಸಬೇಕು” ಎಂದು ಕೋರಿದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿತು.

ವಿಚಾರಣೆಯ ವೇಳೆ ಸಂದೇಶ್‌ ಚೌಟ ಅವರು “ಸಂಘಟಿತ ಅಪರಾದದ ಅಡಿ ಕೋಕಾ ಕಾಯಿದೆ ಅನ್ವಯಿಸಲು ಅಗತ್ಯವಾದ ಬಾಕಿ ಪ್ರಕರಣಗಳು ಇಲ್ಲದೆ ಹೋದರೂ ಬಸವರಾಜು ಮತ್ತು ಇತರರ ವಿರುದ್ಧ ಕೋಕಾ ಕಾಯಿದೆ ಅನ್ವಯಿಸಲಾಗಿದೆ. ಹೀಗಾಗಿ, ಸಿಐಡಿ ಪೊಲೀಸ್‌ ಮಹಾನಿರ್ದೇಶಕರ ಆದೇಶವನ್ನು ವಜಾಗೊಳಿಸಬೇಕು” ಎಂದು ಕೋರಿದ್ದರು.

“ಕೋಕಾ ಅನ್ವಯಿಸಿರುವುದಕ್ಕೆ ಬಾಕಿ ಆರು ಎಫ್‌ಐಆರ್‌ಗಳಿವೆ ಎಂದು ಪ್ರಾಸಿಕ್ಯೂಷನ್‌ ಹೇಳಿದೆ. ಈ ಪೈಕಿ ಮೂರು ಆಸ್ತಿ ವಿವಾದಕ್ಕೆ ಸಂಬಂಧಿಸಿವೆ ಎಂದು ಪ್ರಾಸಿಕ್ಯೂಷನ್‌ ಹೇಳಿದೆ. ಆದರೆ, ಯಾವುದೇ ಎಫ್‌ಐಆರ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿಲ್ಲ. ಸಂಘಟಿತ ಅಪರಾಧ ಸಿಂಡಿಕೇಟ್‌ ಆರೋಪದ ಅಡಿ ಮೂರು ವರ್ಷ ಶಿಕ್ಷೆ ವಿಧಿಸಬಹುದಾದ ಎರಡು ಪ್ರಕರಣಗಳು ಬಾಕಿ ಇದ್ದಾಗ ಕೋಕಾ ಅನ್ವಯಿಸಬಹುದು. ಈ ಪ್ರಕರಣದಲ್ಲಿ ಒಂದೇ ಒಂದು ಪ್ರಕರಣ ಇರುವುದರಿಂದ ಕೋಕಾ ಅನ್ವಯಿಸಿರುವ ಆದೇಶ ವಜಾಗೊಳ್ಳಬೇಕು” ಎಂದು ಕೋರಿದ್ದರು.

“ಕೋಕಾ ಕಾಯಿದೆ ಸೆಕ್ಷನ್‌ 22(3)ರ ಅಡಿ ವಿಚಾರಣಾಧೀನ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಲು ನಿರ್ಬಂಧವಿದೆ. ಹೀಗಾಗಿ, ಹೈಕೋರ್ಟ್‌ಗೆ ಬರಲಾಗಿದೆ. ಕೋಕಾ ಕಾಯಿದೆ ಅನ್ವಯಿಸಿರುವುದು ಸರಿಯೋ, ತಪ್ಪೋ ಎನ್ನುವ ಪ್ರಶ್ನೆಯೂ ಇದೆ. ರಿಟ್‌ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದರೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ರಕ್ಷಣೆ ಒದಗಿಸಬಹುದು. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೂ ಅದು ಜಾರಿಯಲ್ಲಿರಲಿದೆ” ಎಂದಿದ್ದರು.

“ತನಿಖೆಗೆ ಸಹಕರಿಸುತ್ತಿಲ್ಲ ಅಥವಾ ಪ್ರಾಸಿಕ್ಯೂಷನ್‌ಗೆ ಪೂರಕವಾಗಿ ಹೇಳಿಕೆ ನೀಡುತ್ತಿಲ್ಲ ಎಂದು ಜಾಮೀನು ಅಥವಾ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಲಾಗದು. ಕೋಕಾ ಕಾಯಿದೆ ಅನ್ವಯಿಸಿರುವ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದರೆ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಬಹುದು” ಎಂದಿದ್ದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಬೈರತಿ ಬಸವರಾಜು ಅವರು ಉತ್ತರ ಪ್ರದೇಶದಲ್ಲಿ ನಡೆದಿದ್ದ ಕುಂಭಮೇಳಕ್ಕೆ ತೆರಳಿದ್ದರು. ಅವರ ಜೊತೆ ಇತರೆ ಆರೋಪಿಗಳೂ ಹೋಗಿದ್ದರು. ಇದಕ್ಕೆ ಪೂರಕವಾದ ವಿಮಾನದ ಟಿಕೆಟ್‌ ಇವೆ. ಒಟ್ಟಿಗೆ ಜನ್ಮ ದಿನ ಆಚರಿಸಿರುವ ಚಿತ್ರಗಳಿವೆ. ಆದರೆ, ಬಸವರಾಜು ಅವರಾರೂ ನನಗೆ ಗೊತ್ತಿಲ್ಲ ಎಂದಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದ ಮೊದಲನೇ ಆರೋಪಿ ವಿದೇಶಕ್ಕೆ ಹೋಗಿದ್ದು, ಮೊಬೈಲ್‌ ನಾಶಪಡಿಸಿದ್ದಾರೆ. ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಿ, ಆತನನ್ನು ಶ್ರೀಲಂಕಾದಲ್ಲಿ ಬಂಧಿಸಲಾಗಿದೆ. ಆತನ ಜೊತೆ ಹೋಗಿದ್ದ ಇನ್ನೊಬ್ಬ ವ್ಯಕ್ತಿಯನ್ನು ಇದುವರೆಗೆ ಪತ್ತೆ ಮಾಡಲಾಗಿಲ್ಲ” ಎಂದಿದ್ದರು.

Also Read
[ಬಿಕ್ಲು ಶಿವ ಕೊಲೆ] ಸಂಘಟಿತ ಅಪರಾಧ ಪ್ರಕರಣಗಳು ಬಾಕಿ ಇಲ್ಲದಿದ್ದರೂ ಕೋಕಾ ಅನ್ವಯ: ಬೈರತಿ ಪರ ಹೈಕೋರ್ಟ್‌ನಲ್ಲಿ ವಾದ

“ಬೈರತಿ ಬಸವರಾಜು ಅವರು ಇಡೀ ತನಿಖೆಯನ್ನು ಹಾದಿ ತಪ್ಪಿಸಿದ್ದಾರೆ. ಅವರನ್ನು ಕಸ್ಟಡಿಗೆ ಪಡೆಯದೇ ತನಿಖೆ ಮುಂದುವರಿಸಲಾಗದು. ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಅಥವಾ ಹೈಕೋರ್ಟ್ ಪರಿಗಣಿಸಲು ಅವಕಾಶವಿಲ್ಲ. ಬೈರತಿ ಬಸವರಾಜು ಅವರು ತನಿಖೆಗೆ ಹಿಂದೆಯೂ ಸಹಕರಿಸಿಲ್ಲ. ಹೀಗಾಗಿ, ಬೈರತಿ ಬಸವರಾಜು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಅಲಿಯಾಸ್‌ ಶಿವಪ್ರಕಾಶ್‌ ಕೊಲೆ ಆರೋಪದ ಮೇಲೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್‌ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 103, 190 ಅಡಿ ಪ್ರಕರಣ ದಾಖಲಾಗಿದೆ.

Kannada Bar & Bench
kannada.barandbench.com