

ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
“ಬೆಂಗಳೂರು ಹೋಟೆಲುಗಳ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರವು ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ” ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಆದೇಶಿಸಿತು.
ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ನೋಟಿಸ್ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ. ವಿಚಾರಣೆಯನ್ನು ಹೈಕೋರ್ಟ್ನ ಚಳಿಗಾಲದ ರಜೆ ಮುಗಿದ ಬಳಿಕ ವಿಚಾರಣೆಗೆ ಪಟ್ಟಿ ಮಾಡಲು ಪೀಠ ನಿರ್ದೇಶಿಸಿದೆ.
ಇದಕ್ಕೂ ಮುನ್ನ, ಬೆಂಗಳೂರು ಹೋಟೆಲುಗಳ ಸಂಘ ಪರ ವಕೀಲ ಬಿ ಕೆ ಪ್ರಶಾಂತ್ ಅವರು “ಕಾರ್ಮಿಕ ಇಲಾಖೆಯು 18-52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡಲು ಕಡ್ಡಾಯಗೊಳಿಸಿದೆ. ಫ್ಯಾಕ್ಟರಿ ಕಾಯಿದೆ, ಬೀಡಿ ಮತ್ತು ಸಿಗರೇಟು, ಪ್ಲಾಂಟೇಶನ್ ಕಾರ್ಮಿಕರು, ಅಂಗಡಿ ಮತ್ತು ವಾಣಿಜ್ಯ, ಮೋಟಾರ್ ಟ್ರಾನ್ಸ್ಪೋರ್ಟ್ ಸ್ಥಾಪನಾ ಕಾಯಿದೆ ಅಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ರಾಜ್ಯ ಸರ್ಕಾರ ಕಾರ್ಯಕಾರಿ ಆದೇಶ ಮಾಡಿದೆ. ಮೇಲಿನ ಎಲ್ಲಾ ಕಾಯಿದೆಗಳು ಸಮಗ್ರ ರಜೆ ನೀತಿಯನ್ನು ಹೊಂದಿವೆ. ಫ್ಯಾಕ್ಟರಿ ಕಾಯಿದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರ ಪ್ರಕಾರ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ಕಮರ್ಷಿಯಲ್ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯ ರಜೆ ನೀಡುತ್ತಿವೆ. 12 ಕ್ಯಾಷುವಲ್ ರಜೆಯೂ ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯಿದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದರು.
ಮುಂದುವರಿದು, “ಋತುಚಕ್ರದ ರಜೆ ನೀಡಲು ಕಾಯಿದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ ಎಂಬುದೂ ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದರು.
ಆಗ ಪೀಠವು “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದಿತು. ಇದಕ್ಕೆ ಪ್ರಶಾಂತ್ ಅವರು ʼಇಲ್ಲʼ ಎಂದರು.
ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಾಲಯವು ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆ ಮುಂದೂಡಿತು.
ಕಾರ್ಮಿಕರು ಅಥವಾ ನೌಕರರ ಆರೋಗ್ಯ, ಯೋಗಕ್ಷೇಮ, ಸುರಕ್ಷತೆ ಕೆಲಸದ ಅವಧಿ, ವಾರದ ರಜೆ, ಒಟ್ಟು ರಜೆ ದಿನಗಳು, ವೇತನ ಸಹಿತ ರಜೆ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಕಾಯಿದೆ-ಕಾನೂನುಗಳಿದ್ದು, ಅದರಂತೆ ಉದ್ದಿಮೆ, ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಈಗ ಏಕಾಏಕಿ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ಸೌಲಭ್ಯ ಒದಗಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದ ಉದ್ದಿಮೆಗಳ ಕಾರ್ಯನಿರ್ವಹಣೆಯಲ್ಲಿ ಅಡಚಣೆ ಆಗಲಿದೆ, ಆರ್ಥಿಕ ಹೊರೆ ಸಹ ಬೀಳಲಿದೆ ಎಂದು ಬೆಂಗಳುರು ಹೋಟೆಲ್ ಸಂಘವು ಆಕ್ಷೇಪಿಸಿದೆ.
ಕಾಯಿದೆಗೆ ತಿದ್ದುಪಡಿ ಇಲ್ಲದೆ, ಕಾರ್ಯಕಾರಿ ಆದೇಶದ ಮೂಲಕ ಇಂತಹ ಸೌಲಭ್ಯ ಜಾರಿಗೊಳಿಸಲು ಅವಕಾಶವಿಲ್ಲ. ಇದೊಂದು ಕಾನೂನು ಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದ್ದು, ಸರ್ಕಾರದ ಅಧಿಸೂಚನೆ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.