ಹೈಕೋರ್ಟ್‌ ಕಟ್ಟಡ ವಿಸ್ತರಣೆ: ನಾಲ್ಕು ವಾರ ಕಾಲಾವಕಾಶ ಕಲ್ಪಿಸಿದ ನ್ಯಾಯಾಲಯ

ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
Karnataka High Court
Karnataka High Court

ಕರ್ನಾಟಕ ಹೈಕೋರ್ಟ್‌ ಕಟ್ಟಡ ವಿಸ್ತರಣೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳ ಕುರಿತು ಹೈಕೋರ್ಟ್‌ ಕಟ್ಟಡದ ಸಮಿತಿಯ ಅಭಿಪ್ರಾಯ ತಿಳಿಸಲು ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ವಿಭಾಗೀಯ ಪೀಠ ನಾಲ್ಕು ವಾರ ಕಾಲಾವಕಾಶ ಕಲ್ಪಿಸಿದೆ.

ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್ ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಕೋರಿ ಶರಣ ದೇಸಾಯಿ ಎಂಬುವವರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ಸೋಮವಾರ ನಡೆಸಿತು.

ಹೈಕೋರ್ಟ್‌ ಆಡಳಿತ ವಿಭಾಗದ ಪರ ಹಾಜರಾದ ಹಿರಿಯ ವಕೀಲ ಎಸ್‌ ಎಸ್‌ ನಾಗಾನಂದ್‌ ಅವರು ಹೈಕೋರ್ಟ್‌ ವಿಸ್ತರಣೆಗೆ ಸ್ಥಳಾವಕಾಶ ಒದಗಿಸುವ ಸಂಬಂಧ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳು ಹೈಕೋರ್ಟ್‌ ಕಟ್ಟಡ ಸಮಿತಿಯ ಪರಿಶೀಲನೆಯಲ್ಲಿದೆ. ಸಮಿತಿಯಲ್ಲಿ ಕೆಲವೊಂದು ಬದಲಾವಣೆಗಳು ನಡೆದಿದೆ. ಇದರಿಂದ ಸರ್ಕಾರದ ಪ್ರಸ್ತಾವನೆಗಳ ಮೇಲೆ ಸಮಿತಿಯ ಅಭಿಪ್ರಾಯ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿದ ವಿಭಾಗೀಯ ಪೀಠ ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿಯು 2023ರ ಸೆಪ್ಟೆಂಬರ್‌ 21ರಂದು ವಿಚಾರಣೆಗೆ ಬಂದಿದ್ದ ವೇಳೆ ರಾಜ್ಯ ಸರ್ಕಾರ ಪರ ವಕೀಲರು, ಕಬ್ಬನ್‌ ಪಾರ್ಕ್‌ನಲ್ಲಿರುವ ಚುನಾವಣಾ ಆಯೋಗದ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ಅಲ್ಲಿಯೇ ಹೈಕೋರ್ಟ್‌ ಆಡಳಿತ ವ್ಯವಹಾರಗಳ ನಿರ್ವಹಣೆಗಾಗಿ 10 ಮಹಡಿ ಮತ್ತು ಮೂರು ಮಹಡಿಯ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ಹೈಕೋರ್ಟ್‌ ಆವರಣದಲ್ಲಿರುವ ಕ್ಯಾಂಟೀನ್‌ ಕಟ್ಟಡದ ಮೇಲೆ ಕಟ್ಟಡವೊಂದನ್ನು ನಿರ್ಮಾಣ ಮಾಡಲು ಸರ್ಕಾರ ಉದ್ದೇಶಿಸಿದೆ. ಇದಲ್ಲದೇ ಇತರೆ ಮೂರು ಪ್ರಸ್ತಾವನೆಗಳನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದರು.

Related Stories

No stories found.
Kannada Bar & Bench
kannada.barandbench.com