ಅವಧಿ ಪೂರ್ಣಗೊಳಿಸಿದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರಾವಧಿಗೆ ಪರಿಗಣಿಸಬಾರದು ಹಾಗೂ ಈಗ ಅವಧಿ ಮುಗಿದ ಕಾರಣ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ರಾಜ್ಯದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ಆಡಳಿತಾಧಿಕಾರಿ ನೇಮಕದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ್ದ 71 ಅರ್ಜಿಗಳನ್ನು ಇತ್ಯರ್ಥಪಡಿಸಿದೆ.
ಸರ್ಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು “ಕ್ಷೇತ್ರ ಪುನರ್ ವಿಂಗಡಣೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಸಂವಿಧಾನದ 243(ಯು) ವಿಧಿಯಂತೆ ಸದಸ್ಯರ ಅವಧಿ 5 ವರ್ಷ ನಿಗದಿಯಾಗಿದೆ. ಅವಧಿ ಮುಗಿದ ಮೇಲೆ ಹಾಲಿ ಸದಸ್ಯ, ಅಧ್ಯಕ್ಷರನ್ನು ಮುಂದುವರಿಸಲಾಗದು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿದೆ” ಎಂದರು.
2025ರ ಅಕ್ಟೋಬರ್ 18ರಿಂದ ನವೆಂಬರ್ 6ರವರೆಗೆ ಐದು ವರ್ಷದ ಅಧಿಕಾರಾವಧಿ ಮುಕ್ತಾಯಗೊಂಡಿರುವ 42 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಗಳು ಸೇರಿ ರಾಜ್ಯದ ಒಟ್ಟು 118 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ನವೆಂಬರ್ 5ರಂದು ಆದೇಶ ಹೊರಡಿಸಿತ್ತು. ಅದನ್ನು ಅರ್ಜಿದಾರರು ಪ್ರಶ್ನಿಸಿದ್ದರು.