ಗ್ಯಾರಂಟಿ ಯೋಜನೆಗಳನ್ನು ಕೊನೆಗೊಳಿಸದಿದ್ದರೆ ರಾಜ್ಯದ ಜನ ಸುರಕ್ಷಿತವಲ್ಲ: ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ
“ಜಗತ್ತಿನ ಅನೇಕ ದೇಶಗಳು ಅಧಿಕಾರಿಗಳು ಅಥವಾ ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿ ತಲುಪಿವೆ. ಕಾಂಗ್ರೆಸ್ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಕೊನೆಗೊಳಿಸದಿದ್ದರೆ ನಮ್ಮ ರಾಜ್ಯದ ಜನರು ಸುರಕ್ಷಿತವಾಗಿರುವುದಿಲ್ಲ” ಎಂದು ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು ಶನಿವಾರ ಕರ್ನಾಟಕ ಹೈಕೋರ್ಟ್ನಲ್ಲಿ ಆತಂಕ ವ್ಯಕ್ತಪಡಿಸಿದರು.
ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ ಎಂ ಶಂಕರ್ ಸಲ್ಲಿಸಿರುವ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ನಡೆಸಿತು.
ಪ್ರತ್ಯುತ್ತರ ವಾದ ಆರಂಭಿಸಿರುವ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು “ಗ್ಯಾರಂಟಿ ಯೋಜನೆಗಳು ಮೂಲಭೂತ ಹಕ್ಕುಗಳು ಮತ್ತು ಸಂವಿಧಾನದ ನಿರ್ದೇಶಕ ತತ್ವಗಳಿಗೆ ವಿರುದ್ಧವಾಗಿವೆ. ಆ ಯೋಜನೆಗಳನ್ನು ಒಳಗೊಂಡ ಪ್ರಣಾಳಿಕೆಯು ನೋಂದಾಯಿತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಪಕ್ಷದ ಪ್ರಣಾಳಿಕೆ ಅಲ್ಲ. ಅದು ಕೆಪಿಸಿಸಿಯ ಪ್ರಣಾಳಿಕೆಯಾಗಿದೆ. ಕೆಪಿಸಿಸಿಯು ನೋಂದಾಯಿತ ಪಕ್ಷವಲ್ಲ. ಹೀಗಾಗಿ, ಅದರ ಹೆಸರಿನಲ್ಲಿ ರೂಪಿಸಿರುವ ಪ್ರಣಾಳಿಕೆಯು ಭ್ರಷ್ಟಾಚಾರಕ್ಕೆ ಸಮ” ಎಂದು ಆರೋಪಿಸಿದರು.
“ಗ್ಯಾರಂಟಿ ಯೋಜನೆಗಳ ಕಾರ್ಡ್ಗೆ ಸಹಿ ಮಾಡಿರುವುದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಪ್ರಣಾಳಿಕೆ ರೂಪಿಸಿ, ಪ್ರಚಾರ ಮಾಡಿದ್ದಾರೆ. ಆ ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ. ಹೀಗಾಗಿ, ಅವರ ಆಯ್ಕೆ ಅನೂರ್ಜಿತಗೊಳಿಸಬೇಕು. ಭ್ರಷ್ಟಾಚಾರದ ಮೂಲಕ ಚುನಾವಣೆ ಜಯಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಅನೂರ್ಜಿತಗೊಳಿಸಬೇಕು” ಎಂದು ಕೋರಿದರು.
“ಕ್ರೋಢೀಕೃತ ನಿಧಿಯನ್ನು ಉಚಿತ ಯೋಜನೆಗೆ ಬಳಸಲಾಗದು. ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ನಾನು ಹೇಳುವುದಿಲ್ಲ, ಆದರೆ ವಿಶೇಷ ಮಸೂದೆಯನ್ನು ಹಣಕಾಸು ಮಸೂದೆಯ ಪ್ರಕಾರ ಅಂಗೀಕರಿಸಬೇಕು. ಹಾಲಿ ಪ್ರಕರಣದಲ್ಲಿ ಯಾವುದೇ ಹಣಕಾಸು ಮಸೂದೆಯನ್ನು ಅಂಗೀಕರಿಸಲಾಗಿಲ್ಲ, ಇದು ತೆರಿಗೆದಾರರ ಹಣದ ದುರ್ಬಳಕೆಯಾಗಲಿದೆ” ಎಂದರು.
“ಪ್ರಕರಣದಲ್ಲಿ ಸಿದ್ದರಾಮಯ್ಯ ಅಪರಾಧಿಯಾಗಿದ್ದಾರೆ. ಹೀಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು. ನ್ಯಾಯಾಲಯವು ಉಚಿತ ಯೋಜನೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಪ್ರಣಾಳಿಕೆ ಮತ್ತು ಅದರಲ್ಲಿನ ಅಂಶಗಳನ್ನು ಒಪ್ಪಿದರೆ ಅದನ್ನು ಕೆಪಿಸಿಸಿ ರೂಪಿಸಬಹುದೇ ಎನ್ನುವ ಪ್ರಶ್ನೆಯಿದೆ. ಹಾಗೆ ಮಾಡುವುದು ಭ್ರಷ್ಟಾಚಾರವಾಗುತ್ತದೆಯೇ ಎಂಬುದನ್ನು ನ್ಯಾಯಾಲಯ ನಿರ್ಧರಿಸಬೇಕು” ಎಂದರು.
“ಇನ್ನು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿರುವ ಸೇವೆಯನ್ನು ಪುರುಷರಿಗೆ ವಿಸ್ತರಿಸದಿರುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಅಗತ್ಯವಿರುವವರಿಗೆ ನೀಡಬಹುದಿತ್ತು. ಅದನ್ನು ಎಲ್ಲರಿಗೂ ವಿಸ್ತರಿಸಲಾಗದು. ಇಲ್ಲಿ ಕರ್ನಾಟಕದ ಮತದಾರರನ್ನು ಲಘುವಾಗಿ ಪರಿಗಣಿಸಲಾಗಿದೆ” ಎಂದು ಆಕ್ಷೇಪಿಸಿದರು.
ಇಡೀ ದಿನ ವಾದ ಆಲಿಸಿದ ಪೀಠವು ನೇಸರ್ಗಿ ಅವರನ್ನು ಕುರಿತು “ನಿಮ್ಮ ವಾದವು ಆಸಕ್ತಿಕರವಾಗಿತ್ತು. ನ್ಯಾಯಾಲಯವು ಮುಕ್ತ ಮನಸ್ಸಿನಿಂದ ಎಲ್ಲಾ ವಿಚಾರಗಳನ್ನು ಪರಿಶೀಲಿಸಲಿದೆ. ದಸರಾ ರಜೆಯ ಬಳಿಕ ವಿಚಾರಣೆ ನಡೆಸಲಾವುದು” ಎಂದು ವಿಚಾರಣೆ ಮುಂದೂಡಿತು.