ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್‌ ನೋಟಿಸ್‌

ಸರ್ಕಾರದ ಮುಖ್ಯ ಕಾರ್ಯದರ್ಶಿ, ಪಿಎಂಒ ಪ್ರಧಾನ ಕಾಯದರ್ಶಿ, ದೇವಸ್ಥಾನದ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರೂ ಆದ ಕಲಬುರ್ಗಿ ಜಿಲ್ಲಾಧಿಕಾರಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಿಗೆ ನೋಟಿಸ್‌ ಜಾರಿ ಮಾಡಲಾಗಿದೆ.
High Court of Karnataka
High Court of Karnataka

ಕಲಬುರಗಿ ಜಿಲ್ಲೆಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಶ್ರೀ ದತ್ತಾತ್ರೇಯ ದೇವಾಲಯಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ವಿಚಾರ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ.

ದೇವಾಲಯದ ಆವರಣ ಮತ್ತು ದೇವಾಲಯ ಇರುವ ಗ್ರಾಮ ಗಾಣಗಪುರದಲ್ಲಿ ಯಾತ್ರಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ನಿರ್ದೇಶಿಸುವಂತೆ ಕೋರಿ ವಾಸ್ತುಶಿಲ್ಪಿ ಹಾಗೂ ಸಾಮಾಜಿಕ ಕಾರ್ಯಕರ್ತ ಎಂ ಶರಣ್‌ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಮಂತ್ರಿಗಳ ಪ್ರಧಾನ ಕಾಯದರ್ಶಿ, ದೇವಸ್ಥಾನದ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರೂ ಆದ ಕಲಬುರ್ಗಿ ಜಿಲ್ಲಾಧಿಕಾರಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾಯದರ್ಶಿಗೆ ನೋಟಿಸ್‌ ಜಾರಿ ಮಾಡಿತು. ಅರ್ಜಿಯಲ್ಲಿ ಅಫ್ಜಲಪುರ ಶಾಸಕ ಎಂ ವೈ ಪಾಟೀಲ್‌ ಅವರನ್ನೂ ಪ್ರತಿವಾದಿಯಾಗಿಸಲಾಗಿದೆ.

ಶ್ರೀ ದತ್ತಾತ್ರೇಯ ದೇವಸ್ಥಾನವು ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿದ್ದು, ಪವಿತ್ರ ಪೂಜಾ ಸ್ಥಳವಾಗಿದೆ. 21 ವರ್ಷಗಳ ಕಾಲ ಗಾಣಗಪುರವನ್ನು ಆಳಿದ ನರಸಿಂಹ ಸರಸ್ವತಿ ಅವರ ರೂಪದಲ್ಲಿ ದತ್ತ ಮಹಾರಾಜರು ಪುನರ್ಜನ್ಮ ಪಡೆದಿದ್ದಾರೆ ಎಂಬುದು ಇಲ್ಲಿನ ಜನರ, ಭಕ್ತರ ನಂಬಿಕೆಯಾಗಿದೆ. 2023ರ ಜಲೈ 22ರಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವಸ್ಥಾನದಲ್ಲಿ ಆವರಣದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಇಲ್ಲ. ದೇವಸ್ಥಾನದ ಅಧಿಕಾರಿಗಳು ಸಹ ಯಾತ್ರಿಕರಿಗೆ ಹೊಸ ವಸತಿ ಕಟ್ಟಡಗಳನ್ನು ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಮಾತ್ರ ಈವರೆಗೂ ವಸತಿ, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಯೋಜನೆ ಕೈಗೊಂಡಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಗಾಣಗಾಪುರದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲೂ ಅನಾರೋಗ್ಯಕ್ಕೆ ಈಡಾದ ಯಾತ್ರಿಕರಿಗೆ, ಸ್ಥಳೀಯರು, ಹಿರಿಯ ನಾಗರಿಕರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಗಾಣಗಾಪುರ ಗ್ರಾಮದಲ್ಲಿ ಸೂಕ್ತ ಆಡಳಿತ ವ್ಯವಸ್ಥೆಯೇ ಇಲ್ಲ. ಸ್ಥಳೀಯ ಅಧಿಕಾರಿಗಳು, ದೇವಾಲಯ ಆಡಳಿತದ ಅಧಿಕಾರಿಗಳು, ಅರ್ಚಕರು ಮತ್ತು ರಾಜಕೀಯ ನಾಯಕರು ರಾಜ್ಯ ಸರ್ಕಾರವು ದೇವಸ್ಥಾನದ ಅಭಿವೃದ್ಧಿಗೆ ನೀಡಿದ ಅನುದಾನದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ, ಶ್ರೀ ದತ್ತಾತ್ರೇಯ ದೇವಸ್ಥಾನದ ಆವರಣ ಮತ್ತು ಗಾಣಗಾಪುರ ಗ್ರಾಮದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು. ಇದರಿಂದ ಗಾಣಗಾಪುರ ಗ್ರಾಮ ಮತ್ತು ದೇವಸ್ತಾನಕ್ಕೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆ ಹೆಚ್ಚಾಗಿ, ಪ್ರವಾಸೋಧ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದು ಅರ್ಜಿದಾರರು ಕೋರಿದ್ದಾರೆ.

Kannada Bar & Bench
kannada.barandbench.com