

ಆಡಳಿತ ಮತ್ತು ಪ್ರತಿಪಕ್ಷ ಶಾಸಕರ ನಡುವೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಕೆ ವೆಂಕಟಶಿವಾರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನಿರ್ದಿಷ್ಟ ಅನುದಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ವೆಂಕಟಶಿವಾರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ನಡೆಸಿತು.
ಶ್ರೀನಿವಾಸಪುರ ಪುರಸಭೆ ವ್ಯಾಪ್ತಿಯ ಗ್ರಾಮಗಳಿಗೆ 2019ರ ಜನವರಿ 23ರಂದು 5 ಕೋಟಿ ರೂಪಾಯಿ ಹಾಗೂ ಪುರಸಭೆಗೆ ಹೊಸದಾಗಿ ಸೇರ್ಪಡೆಗೊಂಡ ವಾರ್ಡ್ಗಳ ಅಭಿವೃದ್ಧಿಗೆ ಜುಲೈ 20ರಂದು 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಆದರೆ, ಈವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸೀಮಿತವಾಗಿ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ನೋಟಿಸ್ ಜಾರಿಗೊಳಿಸಿದೆ.
ಅನುದಾನ ತಾರತಮ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರ್ಜಿಯೊಂದು ಸಲ್ಲಿಕೆಯಾಗಿದ್ದು, ಅಂತಹದ್ದೇ ಮನವಿಯನ್ನು ಮತ್ತೊಂದು ಪ್ರತ್ಯೇಕ ಅರ್ಜಿಯಲ್ಲಿ ಪರಿಗಣಿಸುವುದು ಸೂಕ್ತವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಲ್ಲದೇ, ಮಂಜೂರಾದ ಅನುದಾನ ಈವರೆಗೆ ಯಾಕೆ ಬಿಡುಗಡೆ ಆಗಿಲ್ಲ ಎಂಬ ಬಗ್ಗೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ನಿರ್ದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು 2026 ಜನವರಿ 21ಕ್ಕೆ ಮುಂದೂಡಿತು.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಾರಿಗೆ ತರಲಾಗಿರುವ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಸಿಎಂಐಡಿಪಿ) ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಹಾಗೂ ವಿರೋಧ ಪಕ್ಷದ ಶಾಸಕರಿಗೆ ₹25 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧವೂ ಈಚೆಗೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.