ಆಂತರಿಕ ಸಮಿತಿಯಿಂದ ಅಧಿಕೃತ ಆರೋಪ: ನ್ಯಾ. ಯಶವಂತ್ ವರ್ಮಾ ಮೇಲೆ ರಾಜೀನಾಮೆಯ ತೂಗುಗತ್ತಿ

ಸಿಜೆಐಗೆ ಪ್ರತಿಕ್ರಿಯೆ ನೀಡಲು ನ್ಯಾ. ವರ್ಮಾ ಅವರಿಗೆ ಮೇ 9ರವರೆಗೆ (ಶುಕ್ರವಾರ) ಗಡುವು ನೀಡಲಾಗಿದೆ.
Justice Yashwant Varma
Justice Yashwant Varma
Published on

ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟು ಕರಕಲಾದ ನಗದು ರಾಶಿ ಪತ್ತೆಯಾದ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ಆಂತರಿಕ ಸಮಿತಿ ನ್ಯಾ. ವರ್ಮಾ ಅವರ ವಿರುದ್ಧ ಅಧಿಕೃತವಾಗಿ ಆರೋಪ ಹೊರಿಸಿದೆ.

ಅವರ ಮುಂದಿರುವ ಮೊದಲ ಆಯ್ಕೆ ರಾಜೀನಾಮೆ ನೀಡುವುದು. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಅವರ ವಿರುದ್ಧ ವಾಗ್ದಂಡನೆಗೆ ಶಿಫಾರಸು ಮಾಡುವ ವರದಿಯನ್ನು ರಾಷ್ಟ್ರಪತಿಗಳಿಗೆ ಕಳಿಸಲಾಗುತ್ತದೆ ಎಂದು ನ್ಯಾಯಾಂಗದ ಉನ್ನತ ಮೂಲಗಳು ಬಾರ್‌ ಅಂಡ್‌ ಬೆಂಚ್‌ಗೆ ತಿಳಿಸಿವೆ.

Also Read
ನ್ಯಾ. ವರ್ಮಾ ಮನೆಯಲ್ಲಿ ನಗದು ದೊರೆತ ವಿವಾದ: ಸಿಜೆಐ ಖನ್ನಾ ಅವರಿಗೆ ವರದಿ ಸಲ್ಲಿಸಿದ ಆಂತರಿಕ ಸಮಿತಿ

ಸಿಜೆಐ ಸಂಜೀವ್‌ ಖನ್ನಾ ಅವರಿಗೆ ಪ್ರತಿಕ್ರಿಯೆ ನೀಡಲು ನ್ಯಾ. ವರ್ಮಾ ಅವರಿಗೆ ಮೇ 9ರವರೆಗೆ (ಶುಕ್ರವಾರ) ಗಡುವು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಗಳ ತನಿಖೆ ನಡೆಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜಿ ಎಸ್ ಸಂಧವಾಲಿಯಾ ಹಾಗೂ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಅನು ಶಿವರಾಮನ್‌ ಅವರನ್ನೊಳಗೊಂಡ ಸಮಿತಿಯನ್ನು ಸಿಜೆಐ ರಚಿಸಿದ್ದರು.

ಮಾರ್ಚ್ 25ರಂದು ತನಿಖೆ ಆರಂಭಿಸಿದ್ದ ಸಮಿತಿ ಮೇ 3 ರಂದು ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐ ಅವರಿಗೆ ಸಲ್ಲಿಸಲಾಗಿತ್ತು.

ಮಾರ್ಚ್ 14 ರ ಸಂಜೆ ಅಗ್ನಿ ಅವಗಢಕ್ಕೆ ತುತ್ತಾದ ನ್ಯಾ.ವರ್ಮಾ ಅವರ ದೆಹಲಿ ನಿವಾಸದಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿದ್ದು ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ ಈ ಆರೋಪಗಳನ್ನು ನಿರಾಕರಿಸಿದ್ದ ನ್ಯಾ. ವರ್ಮಾ, ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ ಎಂದು ಪ್ರತಿಕ್ರಿಯಿಸಿದ್ದರು.

Also Read
[ನಗದು ಪತ್ತೆ ಪ್ರಕರಣ] ನ್ಯಾ. ಯಶವಂತ್ ವರ್ಮಾ ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಅಲಾಹಾಬಾದ್ ಹೈಕೋರ್ಟ್

ಘಟನೆಯ ಬೆನ್ನಿಗೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಅದು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸುಪ್ರೀಂ ಕೋರ್ಟ್‌ ಆಂತರಿಕ ಸಮಿತಿ ರಚಿಸಿದ ಸಂದರ್ಭದಲ್ಲಿಯೇ ನ್ಯಾಯಮೂರ್ತಿ ವರ್ಮಾ ಅವರು ನುರಿತ ವಕೀಲರಿಂದ ಕಾನೂನು ಸಲಹೆ ಪಡೆದಿದ್ದರು.

ಅತ್ತ ವರ್ಗಾವಣೆಗೆ ಕಾನೂನು ಕ್ಷೇತ್ರದ ವಿವಿಧ ವಲಯಗಳಿಂದ ಅಪಸ್ವರಗಳು ಕೇಳಿಬಂದಿದ್ದವು. ರಹಸ್ಯವಾಗಿ ನ್ಯಾ. ವರ್ಮಾ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಅಲಾಹಾಬಾದ್‌ ಹೈಕೋರ್ಟ್‌ ವಕೀಲರ ಸಂಘ ಖಂಡಿಸಿತ್ತು ಅವರನ್ನು ಅಲಾಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡದಂತೆ ಹಾಗೂ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ಕೋರಿದ್ದ ಅರ್ಜಿಯನ್ನು ನಂತರ ಅಲಾಹಾಬಾದ್‌ ಹೈಕೋರ್ಟ್‌ ತಿರಸ್ಕರಿಸಿತ್ತು. 

ಘಟನೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ಇತ್ತೀಚೆಗೆ ಅದರ ಅನೇಕ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದರು. ಜೊತೆಗೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿ ಕುರಿತ ಸಂಪೂರ್ಣ ಪ್ರಕ್ರಿಯೆಯನ್ನು ಸರ್ವೋಚ್ಚ ನ್ಯಾಯಾಲಯ ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು.

Kannada Bar & Bench
kannada.barandbench.com