ಗಲಾಟೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

“ನಾಲ್ಕನೇ ಆರೋಪಿ ಅಶುತೋಷ್‌ ವಿರುದ್ಧ ಮೇಲ್ನೋಟಕ್ಕೆ ಅಪರಾಧವಾಗುವಂಥ ಆರೋಪಗಳಿಲ್ಲ. ಮುಂದಿನ ವಿಚಾರಣೆಗೆ ಒಳಪಟ್ಟು ಮುಂದಿನ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ನಾಲ್ಕನೇ ಆರೋಪಿಗೆ ಮಾತ್ರ ಮಧ್ಯಂತರ ಆದೇಶ ಸೀಮೀತವಾಗಿದೆ” ಎಂದಿರುವ ನ್ಯಾಯಾಲಯ.
Ananth Kumar Hegde & Karnataka HC
Ananth Kumar Hegde & Karnataka HC
Published on

ಮುಸ್ಲಿಂ ಕುಟುಂಬದೊಂದಿಗಿನ ಗಲಾಟೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆ ನೀಡಿದೆ.

ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ ಕೈಬಿಡುವಂತೆ ಕೋರಿ ಅಶುತೋಷ್‌ ಹೆಗಡೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠ ನಡೆಸಿತು.

“ನಾಲ್ಕನೇ ಆರೋಪಿ ಅಶುತೋಷ್‌ ವಿರುದ್ಧ ಮೇಲ್ನೋಟಕ್ಕೆ ಅಪರಾಧವಾಗುವಂಥ ಆರೋಪಗಳಿಲ್ಲ. ಮುಂದಿನ ವಿಚಾರಣೆಗೆ ಒಳಪಟ್ಟು ಮುಂದಿನ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ನಾಲ್ಕನೇ ಆರೋಪಿಗೆ ಮಾತ್ರ ಮಧ್ಯಂತರ ಆದೇಶ ಸೀಮೀತವಾಗಿದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅಶುತೋಷ್‌ ಪರ ವಕೀಲ ಪವನ್‌ಚಂದ್ರ ಶೆಟ್ಟಿ ಅವರು “ಎಫ್‌ಐಆರ್‌ ಅಥವಾ ಆರೋಪ ಪಟ್ಟಿಯಲ್ಲಿ ಅಶುತೋಷ್‌ ಹೆಸರಿಲ್ಲ. ತನ್ನ ಅಜ್ಜನನ್ನು ನೋಡಲು ಅವರು ಭಾರತಕ್ಕೆ ಬಂದಿದ್ದರು. ತಂದೆಯ ಅಧಿಕೃತ ಕಾರಿನಲ್ಲಿ ವಾಪಸ್‌ ಬರುವಾಗ ಕೃತ್ಯ ನಡೆದಿದ್ದು, ಅದರಲ್ಲಿ ಅಶುತೋಷ್‌ ಪಾತ್ರವಿಲ್ಲ” ಎಂದಿದ್ದರು.

ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಅರ್ಜಿಯಲ್ಲಿ ಮೊದಲಿಗೆ ಅಶುತೋಷ್‌ ಪಕ್ಷಕಾರರಾಗಿಲ್ಲ. ಹೀಗಾಗಿ, ತಿದ್ದುಪಡಿ ಅಥವಾ ಪ್ರತ್ಯೇಕ ಅರ್ಜಿ ಸಲ್ಲಿಸಿದರೆ ನ್ಯಾಯಾಲಯದ ಅದನ್ನು ಪರಿಗಣಿಸಬಹುದು” ಎಂದರು.

Also Read
ವಿದೇಶದಲ್ಲಿ ಓದುತ್ತಿರುವ ಪುತ್ರ ಅಶುತೋಷ್‌ನನ್ನು ಗಲಾಟೆ ಪ್ರಕರಣದಿಂದ ಕೈಬಿಡಲು ಬಿಜೆಪಿಯ ಅನಂತಕುಮಾರ್‌ ಹೆಗಡೆ ಮನವಿ

ಪ್ರಕರಣದ ಹಿನ್ನೆಲೆ: ತುಮಕೂರಿನಲ್ಲಿ ಮದುಗೆ ಹೋಗಿ, ಮುಸ್ಲಿಂ ಸಮುದಾಯದ ಏಳು ಮಂದಿ ಇನ್ನೋವಾ ಕಾರಿನಲ್ಲಿ ಹಳೇ ನಿಜಗಲ್‌ ಬಳಿ ಬರುತಿದ್ದಾಗ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಕಾರಿನ ಚಾಲಕ ನಮ್ಮ ಕಾರನ್ನು ನಿಲ್ಲಿಸುವಂತೆ ಹೇಳಿದರು. ಕಾರು ನಿಲುಗಡೆ ಮಾಡುತ್ತಿದ್ದಂತೆಯೇ ಮುಖಕ್ಕೆ ಗುದ್ದಿದರು. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದರು. ಇದರಿಂದ‌ ಕಾರಿನಲ್ಲಿದ್ದ ಸಲ್ಮಾನ್‌ ಖಾನ್‌ ಅವರ ಮೂರು ಹಲ್ಲುಗಳು ಮುರಿದಿವೆ ಎಂದು ಗಾಯಾಳು, ಹಾಲೇನಹಳ್ಳಿಯ ಸೈಫ್‌ ಖಾನ್‌ ದೂರು ನೀಡಿದ್ದರು.

ಅನಂತ್‌ ಕುಮಾರ್‌ ಹೆಗಡೆ ಕಾರಿನಲ್ಲಿದ್ದರು. ಅವರು ಕರೆದ ತಕ್ಷಣವೇ ಉಳಿದವರು ಬಂದು ನಮ್ಮ ಮೇಲೆ ಹಲ್ಲೆ ಮಾಡಿದರು. ನಮ್ಮ ತಾಯಿ ಮೇಲೆ ಅನಂತ್‌ ಕುಮಾರ್‌ ಹಲ್ಲೆ ನಡೆಸಿದರು. ಭದ್ರತಾ ಸಿಬ್ಬಂದಿ ಪಿಸ್ತೂಲ್‌ ತೋರಿಸಿ ಜೀವ ಬೆದರಿಕೆ ಹಾಕಿದರು ಎಂದು ಅವರು ದೂರು ನೀಡಿದ್ದರು. ಇದನ್ನು ಆಧರಿಸಿ ದಾಬಸ್‌ ಠಾಣೆಯ ಪೊಲೀಸರು ಅನಂತ್‌ ಕುಮಾರ್‌ ಹೆಗಡೆ, ಭದ್ರತಾ ಸಿಬ್ಬಂದಿ ಶ್ರೀಧರ್‌ ಹಾಗೂ ಕಾರು ಚಾಲಕ ಮಹೇಶ್‌ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 117, 126, 74, 351(4) ಪ್ರಕರಣ ದಾಖಲಿಸಿದ್ದಾರೆ.

Kannada Bar & Bench
kannada.barandbench.com