ವಾಜಪೇಯಿ ಪ್ರಾಣಿ ಸಂಗ್ರಹಾಲಯವನ್ನು ಹೊಸಪೇಟೆಯ ಬಿಳಿಕಲ್ಲು ಮೀಸಲು ಅರಣ್ಯಕ್ಕೆ ಸ್ಥಳಾಂತರಿಸಲು ಹೈಕೋರ್ಟ್‌ ಅನುಮತಿ

ಪ್ರಾಣಿ ಸಂಗ್ರಹಾಲಯವನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ 2015ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ‌ ಆದೇಶವನ್ನು ಪ್ರಶ್ನಿಸಿ ಸಂತೋಷ್‌ ಮಾರ್ಟಿನ್‌ ಎಂಬವರು ಮನವಿ ಸಲ್ಲಿಸಿದ್ದರು.
Karnataka HC
Karnataka HC

ಅಟಲ್‌ ಬಿಹಾರಿ ವಾಜಪೇಯಿ ಪ್ರಾಣಿ ಸಂಗ್ರಹಾಲಯವನ್ನು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ಬಿಳಿಕಲ್ಲು ಮೀಸಲು ಅರಣ್ಯಕ್ಕೆ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಈಚೆಗೆ ಅನುಮತಿಸಿದೆ. ಅಲ್ಲದೇ, ಪ್ರಾಣಿ ಸಂಗ್ರಹಾಲಯದ ಸ್ಥಳಾಂತರಕ್ಕೆ ಅಗತ್ಯವಾದ ನಿರ್ಮಾಣ ಚಟುವಟಿಕೆಗಳನ್ನು ಮಾತ್ರ ಮಾಡಬಹುದಾಗಿದೆ. ಯಾವುದೇ ಕಾರಣಕ್ಕೂ ಮನರಂಜನಾ ಚಟುವಟಿಕೆಗಳನ್ನು ನಡೆಸಲು ನಿರ್ಮಾಣ ಕಾಮಗಾರಿ ನಡೆಸುವಂತಿಲ್ಲ ಎಂದು ಸರ್ಕಾರಕ್ಕೆ ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಾಣಿ ಸಂಗ್ರಹಾಲಯವನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ 2015ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ‌ ಆದೇಶವನ್ನು ಪ್ರಶ್ನಿಸಿ ಸಂತೋಷ್‌ ಮಾರ್ಟಿನ್‌ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ‌ ವಿಭಾಗೀಯ ಪೀಠವು ವಿಲೇವಾರಿ ಮಾಡಿದೆ.

ಪ್ರಾಣಿ ಸಂಗ್ರಹಾಲಯವನ್ನು ಸ್ಥಳಾಂತರಿಸುವುದಕ್ಕೂ ಮುನ್ನ ಅಗತ್ಯ ಅನುಮತಿಯನ್ನು ಪಡೆಯಲಾಗಿದೆ ಎಂದು ರಾಜ್ಯ ಸರ್ಕಾರವು ಪೀಠದ ಮುಂದೆ ಮೆಮೊ ಸಲ್ಲಿಸಿತ್ತು. ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರದಿಂದ ಅನುಮತಿ ಪಡೆಯಲಾಗಿದ್ದು, ಫೆಬ್ರವರಿ 17ರಂದು ಅರಣ್ಯ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ಇಲ್ಲಿ ಅರಣ್ಯ ಇಲಾಖೆ/ರಾಜ್ಯ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರವು ಅರಣ್ಯ ಪ್ರದೇಶದಲ್ಲಿ ಪ್ರಾಣಿ ಸಂಗ್ರಹಾಲಯ ಸ್ಥಾಪಿಸಲು ಶಿಫಾರಸ್ಸು ಮಾಡಿದೆ. ಇದಕ್ಕೆ ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ ಒಪ್ಪಿಗೆ ನೀಡಿದೆ” ಎಂದು ಮೆಮೊದಲ್ಲಿ ತಿಳಿಸಲಾಗಿದೆ.

ಹೊಸಪೇಟೆ ತಾಲ್ಲೂಕಿನಲ್ಲಿ 20 ಸಾವಿರ ಚದರ ಮೀಟರ್‌ಗೂ ಕಡಿಮೆ ಪ್ರದೇಶದಲಿ ಅಟಲ್‌ ಬಿಹಾರಿ ವಾಜಪೇಯಿ ಪ್ರಾಣಿ ಸಂಗ್ರಹಾಲಯ ನಿರ್ಮಿಸಲಾಗುತ್ತಿದೆ. ಪರಿಸರ ಸಂರಕ್ಷಣಾ ಕಾಯಿದೆ 1986ರ ಅಧಿನಿಯಮಗಳ ಅಡಿ ಇದಕ್ಕಾಗಿ ಪರಿಸರ ಒಪ್ಪಿಗೆ ಪತ್ರದ ಅಗತ್ಯವಿಲ್ಲ. ಬಳ್ಳಾರಿಯಿಂದ ಹೊಸಪೇಟೆಗೆ ಪ್ರಾಣಿ ಸಂಗ್ರಹಾಲಯವನ್ನು ಸ್ಥಳಾಂತರಿಸಲಾಗಿದ್ದು, ಇದು ಉತ್ತರ ಕರ್ನಾಟಕದಲ್ಲಿ ವನ್ಯ ಪ್ರಾಣಿಗಳ ಸಂರಕ್ಷಣಾ ಕೇಂದ್ರವಾಗಿ ಕೆಲಸ ಮಾಡುತ್ತಿದೆ” ಎಂದು ಹೇಳಲಾಗಿದೆ.

Also Read
ಗೋವಿಗೆ ಮೂಲಭೂತ ಹಕ್ಕು ಕಲ್ಪಿಸಿ, ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು: ಅಲಾಹಾಬಾದ್‌ ಹೈಕೋರ್ಟ್‌

ಅರ್ಜಿದಾರರ ಪರ ವಕೀಲೆ ನಿಮಿಷಾ ಕುಮಾರ್‌ ಅವರು “ಪ್ರಾಣಿ ಸಂಗ್ರಹಾಲಯವನ್ನು ಸ್ಥಳಾಂತರಿಸುವುದಕ್ಕೂ ಮುನ್ನ ಪರಿಸರದ ಮೇಲೆ ಉಂಟಾಗುವ ಪರಿಣಾಮದ ಕುರಿತು ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ” ಎಂದರು.

ಇದಕ್ಕೆ ನ್ಯಾಯಾಲಯವು ರಾಜ್ಯ ಸರ್ಕಾರವು ಈ ಸಂಬಂಧ ಅಗತ್ಯ ಅನುಮತಿ ಪಡೆದಿದೆ. ಇಲ್ಲಿ ಕಾಯಿದೆ, ನಿಯಮಗಳ ಉಲ್ಲಂಘನೆ ಕಾಣುತ್ತಿಲ್ಲ ಎಂದು ಹೇಳಿದ್ದು, ಪ್ರಾಣಿಧಾಮವನ್ನು ಸ್ಥಳಾಂತರಿಸುವುದಕ್ಕೂ ಮುನ್ನ ಸಂಬಂಧಪಟ್ಟವರಿಂದ ಎಲ್ಲಾ ರೀತಿಯ ಅನಮತಿ ಪಡೆಯುವುದು ಅತ್ಯಗತ್ಯ ಎಂದು ಹೇಳಿ ಅರ್ಜಿ ವಿಲೇವಾರಿ ಮಾಡಿತು.

Attachment
PDF
State of Karnataka versus Santosh Martin.pdf
Preview

Related Stories

No stories found.
Kannada Bar & Bench
kannada.barandbench.com