ಕರ್ನಾಟಕ ಹೈಕೋರ್ಟ್‌ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ

ನ್ಯಾ. ಅನಿಲ್‌ ಕಟ್ಟಿ ಅಧಿಕಾರ ವಹಿಸಿಕೊಳ್ಳುವ ದಿನದಿಂದ 2024ರ ಏ.16ರವರೆಗೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ. ಉಳಿದವರು ಅಧಿಕಾರ ಸ್ವೀಕರಿಸಿದ ದಿನದಿಂದ ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ.
ಕರ್ನಾಟಕ ಹೈಕೋರ್ಟ್‌ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಿಸಿ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ

ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಟಿ ಜಿ ಶಿವಶಂಕರೇಗೌಡ ಮತ್ತು ಹಾಲಿ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿರುವ ಚಂದ್ರಶೇಖರ ಮೃತ್ಯುಂಜಯ ಜೋಶಿ ಹಾಗೂ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಅನಿಲ್‌ ಭೀಮಸೇನ ಕಟ್ಟಿ ಸೇರಿದಂತೆ ಐವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗುರುಸಿದ್ದಯ್ಯ ಬಸವರಾಜ ಮತ್ತು ರಾಜ್ಯ ಕೈಗಾರಿಕಾ ನ್ಯಾಯ ಮಂಡಳಿಯ ಮೇಲುಸ್ತುವಾರಿ ಅಧಿಕಾರಿ ಹಾಗೂ ಹಿಂದಿನ ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿದ್ದ ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ ಅವರನ್ನೂ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ನ್ಯಾ. ಅನಿಲ್‌ ಕಟ್ಟಿ ಅವರು ತಾವು ಅಧಿಕಾರ ವಹಿಸಿಕೊಳ್ಳುವ ದಿನದಿಂದ 2024ರ ಏಪ್ರಿಲ್‌ 16ರವರೆಗೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ. ನ್ಯಾಯಾಧೀಶರಾದ ಜಿ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ್‌ ಮಂಜುನಾಥ್‌ಭಟ್‌ ಅಡಿಗ ಮತ್ತು ಟಿ ಜಿ ಶಿವಶಂಕರೇಗೌಡ ಅವರು ಅಧಿಕಾರವಹಿಸಿಕೊಂಡ ದಿನದಿಂದ ಎರಡು ವರ್ಷಗಳವರೆಗೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ. ಸಂವಿಧಾನದ 224ನೇ ವಿಧಿಯ ಕಲಂ (1)ರ ಅಡಿ ದೊರೆತಿರುವ ಅಧಿಕಾರ ಬಳಸಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಐವರ ನ್ಯಾಯಾಧೀಶರನ್ನು ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಜುಲೈ 19ರಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

Also Read
ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಐವರ ಹೆಸರು ಶಿಫಾರಸ್ಸು ಮಾಡಿದ ಸುಪ್ರೀಂ ಕೋರ್ಟ್‌ ಕೊಲಿಜಿಯಂ

ಚಂದ್ರಶೇಖರ ಮೃತ್ಯುಂಜಯ ಜೋಶಿ ಅವರು 2022ರ ಮೇ 4ರಂದು ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ್ದರು. ಇದಕ್ಕೂ ಮುನ್ನ ಅವರು ಬೆಳಗಾವಿ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿದ್ದರು. ಅನಿಲ್‌ ಭೀಮಸೇನ ಕಟ್ಟಿ ಅವರು 2020ರ ಮೇ 11ರಿಂದ 2022ರ ಏಪ್ರಿಲ್‌ 30ರವರೆಗೆ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿದ್ದರು. ನಿವೃತ್ತ ನ್ಯಾ. ಕಟ್ಟಿ ಅವರು ಸೇವೆಯಲ್ಲಿರುವಾಗಲೇ ಅವರ ಹೆಸರನ್ನು ಒಳಗೊಂಡ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್‌ಗೆ ಕಳುಹಿಸಿಕೊಡಲಾಗಿತ್ತು.

ಕರ್ನಾಟಕ ಹೈಕೋರ್ಟ್‌ 2022ರ ಆಗಸ್ಟ್‌ 10ರವರೆಗೆ 44 ನ್ಯಾಯಮೂರ್ತಿಗಳನ್ನು ಹೊಂದಿದ್ದು, ಈ ಐವರ ಸೇರ್ಪಡೆಯೊಂದಿಗೆ ಈ ಸಂಖ್ಯೆಯು 49ಕ್ಕೆ ಏರಿಕೆಯಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿವೆ.

Related Stories

No stories found.
Kannada Bar & Bench
kannada.barandbench.com