ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸಲು ಕೋರಿದ್ದ ಪ್ರಜ್ವಲ್‌ ರೇವಣ್ಣ ಅರ್ಜಿಗಳು ವಜಾ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಪೀಠದಿಂದ ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಪ್ರಜ್ವಲ್‌ ಕೋರಿದ್ದರು.
Prajwal Revanna & Karnataka HC
Prajwal Revanna & Karnataka HC
Published on

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದಿಂದ (ಹಾಲಿ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ) ಬೇರೊಂದು ಸತ್ರ ನ್ಯಾಯಾಲಯಕ್ಕೆ ವರ್ಗಾಯಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ನಿರಾಕರಿಸಿತು.

ಪ್ರಕರಣಗಳನ್ನು ವಿಶೇಷ‌ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಪೀಠದಿಂದ ಬೇರೆ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿದ್ದ ಬೆಂಗಳೂರು ನಗರ ಪ್ರಧಾನ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ವಜಾಗೊಳಿಸಿತು.

“ವಿಚಾರಣಾ‌ ನ್ಯಾಯಾಲಯವು ದಿನನಿತ್ಯದ ಆಧಾರದಲ್ಲಿ ವಿಚಾರಣೆ ನಡೆಸಲು ಉದ್ದೇಶಿಸಿದಂತಿದ್ದು, ಈ ಪ್ರಕ್ರಿಯೆಯಲ್ಲಿ ಅರ್ಜಿದಾರರು ವಿಚಾರಣೆ ಮುಂದೂಡುವಂತೆ ಮಾಡಿರುವ ಮನವಿಗಳನ್ನು ತಿರಸ್ಕರಿಸಿರಬಹುದು. ತೀರ್ಪಿನಲ್ಲಿನ ಕೆಲ ಅವಲೋಕನಗಳು ಕಠಿಣವೆಂದೆನಿಸಿದರೂ, ಅದನ್ನು ನ್ಯಾಯಾಧೀಶರ ಪಕ್ಷಪಾತ ನಡೆ ಎಂದು ಅರ್ಥೈಸಲಾಗದು. ಅರ್ಜಿದಾರರು ಪ್ರಕರಣದ ವಿಚಾರಣೆ ವಿಳಂಬ ಮಾಡಲು ಯತ್ನಿಸಿದ್ದು, ಇದನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಇದನ್ನೇ ವರ್ಗಾವಣೆಗೆ ಆಧಾರವೆನ್ನುವುದಾದರೆ, ಬಹುತೇಕ ಎಲ್ಲ ಕ್ರಿಮಿನಲ್ ಪ್ರಕರಣಗಳಲ್ಲಿ ಇಂತಹ ಅರ್ಜಿಗಳು ಇರುತ್ತವೆ. ಇದನ್ನು‌ ನ್ಯಾಯಾಲಯ ಅನುಮತಿಸಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್‌ ದವೆ ಅವರು “ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ವಿಳಂಬಗೊಳಿಸಲು ಅರ್ಜಿದಾರರು ಯಾವುದೇ ಸಂದರ್ಭದಲ್ಲಿ ಪ್ರಯತ್ನಿಸಿಲ್ಲ. ಆದರೆ, ನ್ಯಾಯಾಧೀಶರು ಅವರ ವಿರುದ್ಧ ಪಕ್ಷಪಾತ ಧೋರಣೆ ಹೊಂದಿದ್ದಾರೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿದ್ದರು. ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರು ವರ್ಗಾವಣೆ ಅರ್ಜಿಯಲ್ಲಿನ ಮೆರಿಟ್ ಮೇಲೆ ತಮ್ಮ ವಿವೇಚನೆ ಬಳಸಿಲ್ಲ ಬದಲಿಗೆ, ವಿಚಾರಣಾ‌ ಮಾನ್ಯತೆಯ ಆಧಾರದಲ್ಲಿ ಅರ್ಜಿ ವಜಾಗೊಳಿಸಿದ್ದಾರೆ” ಎಂದು ಪೀಠಕ್ಕೆ ತಿಳಿಸಿದರು.

ರಾಜ್ಯ ಸರ್ಕಾರದ ಪರವಾಗಿ ಹೆಚ್ಚುವರಿ ಸರ್ಕಾರಿ ವಿಶೇಷ ಅಭಿಯೋಜಕ ಬಿ ಎನ್‌ ಜಗದೀಶ್‌ ಹಾಜರಿದ್ದರು.

Kannada Bar & Bench
kannada.barandbench.com