ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೆಎಸ್‌ಎಟಿ

ಕೆಪಿಎಸ್‌ಸಿ ಸಲ್ಲಿಸಿರುವ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಈಗಾಗಲೇ ಒಮ್ಮೆ ಪರೀಕ್ಷೆ ರದ್ದುಗೊಳಿಸಿ, ಮರು ಪೂರ್ವಭಾವಿ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ ಮರು ಪ್ರಾಥಮಿಕ ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ ಎಂದಿರುವ ಕೆಎಸ್‌ಎಟಿ.
ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೆಎಸ್‌ಎಟಿ
Published on

ಗೆಜೆಟೆಡ್‌ ಪ್ರೊಬೆಷನರಿ ಅಧಿಕಾರಿಗಳ 384 ಗ್ರೂಪ್‌ ‘ಎ' ಮತ್ತು ‘ಬಿ' ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಮರು ಪರೀಕ್ಷೆಗೆ ಆದೇಶಿಸಲು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಸ್‌ಎಟಿ) ನಿರಾಕರಿಸಿದೆ.

ಬೆಂಗಳೂರಿನ ಮಾಯಗಾನಹಳ್ಳಿಯ ಎಂ ಕೃಷ್ಣ, ಕೋಲಾರದ ಡಿ ಪವಿತ್ರಾ ಹಾಗೂ ಚಳ್ಳಕೆರೆಯ ಎಸ್‌ ರಮೇಶ್ ಸೇರಿದಂತೆ ಒಟ್ಟು 80 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಂಗ ಸದಸ್ಯ ಎಸ್‌ ವೈ ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್‌ ಅವರ ದ್ವಿಸದಸ್ಯ ಪೀಠ ಪ್ರಕಟಿಸಿದೆ.

“ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಲ್ಲಿಸಿರುವ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಈಗಾಗಲೇ ಒಮ್ಮೆ ಪರೀಕ್ಷೆ ರದ್ದುಗೊಳಿಸಿ, ಮರು ಪೂರ್ವಭಾವಿ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ ಮರು ಪ್ರಾಥಮಿಕ ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ. ಪ್ರಶ್ನೆ ಪತ್ರಿಕೆಯ ಅನುವಾದದಲ್ಲಿ ಆಗಿರುವ ಲೋಪಗಳ ಬಗ್ಗೆ ತಜ್ಞರ ಸಮಿತಿ ಮರು ಪರಿಶೀಲನೆ ನಡೆಸಿ ತೀರ್ಮಾನಿಸಬಹುದು” ಎಂದು ಪೀಠವು ಆದೇಶದಲ್ಲಿ ವಿವರಿಸಿದೆ. ಈಗಾಗಲೇ ಕೆಪಿಎಸ್‌ಸಿ ನಿಗದಿಪಡಿಸಿರುವಂತೆ ಮುಖ್ಯ ಪರೀಕ್ಷೆಗಳು ಮಾರ್ಚ್‌ 28ರಿಂದ ಆರಂಭವಾಗಬೇಕಿದೆ.

Also Read
ಕೆಪಿಎಸ್‌ಸಿ 384 ಹುದ್ದೆಗಳ ನೇಮಕ ಪ್ರಕ್ರಿಯೆ ಅಮಾನತು ಆದೇಶದಲ್ಲಿ ಮಾರ್ಪಾಡು: ಮುಖ್ಯ ಪರೀಕ್ಷೆಗೆ ಅರ್ಜಿ ತುಂಬಲು ಅವಕಾಶ

ಪ್ರಕರಣದ ಹಿನ್ನೆಲೆ: ಕರ್ನಾಟಕ ಲೋಕಸೇವಾ ಆಯೋಗ ಮೊದಲು 2024ರ ಆಗಸ್ಟ್‌ 27ಕ್ಕೆ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆಗ ಪ್ರಶ್ನೆಪತ್ರಿಕೆಯನ್ನು ಆಂಗ್ಲ ಭಾಷೆಗೆ ಅನುವಾದ ಮಾಡುವಾಗ ಭಾರಿ ಲೋಪಗಳಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಆನಂತರ ಕೆಪಿಎಸ್‌ಸಿ 2024ರ ಡಿಸೆಂಬರ್‌ 29ಕ್ಕೆ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ 553 ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಾಭಾವಿ ಮರು ಪರೀಕ್ಷೆ ನಡೆಸಿತ್ತು. 2.10 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 1.05 ಲಕ್ಷ (ಶೇ.47.7) ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆ ಪರೀಕ್ಷೆಯಲ್ಲೂ ಸುಮಾರು 59 ಪ್ರಶ್ನೆಗಳ ಅನುವಾದದಲ್ಲಿ ದೋಷಗಳಾಗಿವೆ.

ಹೀಗಾಗಿ, ಪರೀಕ್ಷೆ ರದ್ದುಗೊಳಿಸಬೇಕು ಎಂದು ಅಭ್ಯರ್ಥಿಗಳು ಕೆಎಸ್‌ಎಟಿ ಮೊರೆ ಹೋಗಿದ್ದರು. ಆಯೋಗವು ಫೆಬ್ರವರಿ 10ರಂದು ಪೂರ್ವಭಾವಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿ 1:15ರ ಅನುಪಾತದಲ್ಲಿಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಿದೆ.

Kannada Bar & Bench
kannada.barandbench.com