ಸ್ಥಳೀಯ ನ್ಯಾಯಮೂರ್ತಿಗಳನ್ನು ಅನ್ಯ ರಾಜ್ಯಗಳಿಗೆ ವರ್ಗಾವಣೆ ಮಾಡುವುದು ಸಲ್ಲ: ಎಎಬಿ ಆಕ್ಷೇಪ

ಸ್ಥಳೀಯ ನ್ಯಾಯಮೂರ್ತಿಗಳು ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಅರ್ಥೈಸಿಕೊಂಡು ಸೂಕ್ತ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಎಬಿ ಹೇಳಿದೆ.
Vakeelara Bhavana, AAB
Vakeelara Bhavana, AAB
Published on

ರಾಜ್ಯ ಹೈಕೋರ್ಟ್‌ನ ಸ್ಥಳೀಯ ನ್ಯಾಯಮೂರ್ತಿಗಳನ್ನು ಅನ್ಯ ರಾಜ್ಯಗಳಿಗೆ ವರ್ಗಾವಣೆ ಮಾಡುವ ಪದ್ಧತಿ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಬೆಂಗಳೂರು ವಕೀಲರ ಸಂಘ (ಎಎಬಿ) ಆತಂಕ ವ್ಯಕ್ತಪಡಿಸಿದೆ.

ಈ ಸಂಬಂಧ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ, ಉಪಾಧ್ಯಕ್ಷ ಸಿ ಎಸ್ ಗಿರೀಶ್, ಪ್ರಧಾನ ಕಾರ್ಯದರ್ಶಿ ಎಚ್‌ ವಿ ಪ್ರವೀಣ್‌ ಗೌಡ ಮತ್ತು ಖಜಾಂಚಿ ಶ್ವೇತಾ ರವಿಶಂಕರ್ ಸಹಿ ಮಾಡಿರುವ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

ಅನ್ಯ ರಾಜ್ಯದ ನ್ಯಾಯಮೂರ್ತಿಗಳನ್ನು ನಾವು ಸ್ವಾಗತಿಸುತ್ತೇವೆ ನಿಜ. ಆದರೆ, ಸ್ಥಳೀಯ ನ್ಯಾಯಮೂರ್ತಿಗಳು ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಅರ್ಥೈಸಿಕೊಂಡು ಸೂಕ್ತ ನ್ಯಾಯ ಒದಗಿಸಲು ಅನುಕೂಲವಾಗುತ್ತದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಘವು ಈಗಾಗಲೇ ಇಂತಹ ವರ್ಗಾವಣೆ ನೀತಿಗೆ ವಿರುದ್ಧವಾಗಿದೆ ಎಂಬುದನ್ನು ಈಗ ಮತ್ತೊಮ್ಮೆ ಗಮನಕ್ಕೆ ತರಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವ ಇಂದಿನ ದಿನಗಳಲ್ಲಿ ಅನ್ಯ ರಾಜ್ಯದ ನ್ಯಾಯಮೂರ್ತಿಗಳಿಗೆ ಸ್ಥಳೀಯ ಭಾಷೆಯ ತೊಡಕುಂಟಾಗುತ್ತದೆ. ಸರ್ಕಾರದ ಅಧಿಸೂಚನೆ, ಸುತ್ತೋಲೆ, ಆದೇಶಗಳನ್ನು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದ ಮಾಡುವ ಪ್ರಕ್ರಿಯೆಗೆ ಹೆಚ್ಚಿನ ಸಮಯ ತಗಲುತ್ತದೆ. ಅಂತೆಯೇ, ಇದು ಕಕ್ಷಿದಾರರ ಮೇಲೆ ಆರ್ಥಿಕ ಹೊರೆಯನ್ನು ಹೇರುತ್ತದೆ ಎಂದು ಎಎಬಿ ಕಳವಳ ವ್ಯಕ್ತಪಡಿಸಿದೆ.

Kannada Bar & Bench
kannada.barandbench.com