ತಮಿಳುನಾಡು ಸಚಿವನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಮದ್ರಾಸ್ ಹೈಕೋರ್ಟ್: ಖಾಸಗಿ ಆಸ್ಪತ್ರೆಗೆ ದಾಖಲಾಗಲು ಅನುಮತಿ

ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಬಾಲಾಜಿ ಅವರನ್ನು ಬುಧವಾರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇ ಡಿ ಬಂಧಿಸಿತ್ತು.
Senthil Balaji, Madras High Court
Senthil Balaji, Madras High Court

ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ತಮಿಳುನಾಡು ವಿದ್ಯುತ್ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ.

ಆದಾಗ್ಯೂ ಅವರು ಈಗ ದಾಖಲಾಗಿರುವ ತಮಿಳುನಾಡು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಶಿಫಾರಸಿನಂತೆ ತುರ್ತು ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಲು ನ್ಯಾಯಾಲಯ ಅನುಮತಿಸಿದೆ.

Also Read
ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ: ಮದ್ರಾಸ್ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಸಚಿವರ ಪತ್ನಿ

ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು, "ಅವರಿಗೆ ಜಾಮೀನು ನೀಡುವ ಪ್ರಶ್ನೆಯೇ ಇಲ್ಲ. ಅವರು ನ್ಯಾಯಾಂಗ ಬಂಧನದಲ್ಲಿ ಮುಂದುವರಿಯಬೇಕು. ನಗರದ ಖಾಸಗಿ ಕಾವೇರಿ ಆಸ್ಪತ್ರೆಯಲ್ಲಿ ತಮಗೆ ನಿಯಮಿತವಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿದ್ದಾರೆ ಎಂದು ಅರ್ಜಿದಾರರು ಮನವಿ ಮಾಡಿರುವುದರಿಂದ, ಸರ್ಕಾರಿ ಆಸ್ಪತ್ರೆಯಿಂದ ಅಲ್ಲಿಗೆ ಸ್ಥಳಾಂತರಿಸಬೇಕೆಂಬ ಅವರ ಪ್ರಾರ್ಥನೆಯನ್ನು ಪುರಸ್ಕರಿಸಬಹುದು," ಎಂದು ಹೇಳಿತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚವನ್ನು ಬಾಲಾಜಿ ಅವರೇ ಭರಿಸಬೇಕು ಎಂದು ನ್ಯಾಯಮೂರ್ತಿಗಳಾದ ಜೆ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರಿದ್ದ ಪೀಠ ಸ್ಪಷ್ಟಪಡಿಸಿತು.

ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಬಾಲಾಜಿ ಅವರನ್ನು ಬುಧವಾರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇ ಡಿ ಬಂಧಿಸಿತ್ತು.

Related Stories

No stories found.
Kannada Bar & Bench
kannada.barandbench.com