ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರರಿಂದ ಜೀವ ಬೆದರಿಕೆ ಎಂದು ವರ್ಮಾ ಆರೋಪ

ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದ ವೇಳೆ ನಾಗೇಂದ್ರ ಅವರ ಆಪ್ತ ನೆಕ್ಕುಂಡಿ ನಾಗರಾಜ್‌ ತಮ್ಮ ಮೇಲೆ ಹಲ್ಲೆ ನಡೆಸುವ ಪ್ರಯತ್ನ ಮಾಡಿದ್ದರು ಎಂದು ಹೇಳಿಕೆ ನೀಡಿದ ವರ್ಮಾ.
B Nagendra
B Nagendra
Published on

ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತರ ಕಡೆಯಿಂದ ತಮ್ಮ ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಇದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿ ಸತ್ಯನಾರಾಯಣ ವರ್ಮಾ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಪೊಲೀಸರು ಬುಧವಾರ ಬೆಂಗಳೂರಿನ 3ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ (ಎಸಿಎಂಎಂ) ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಶ್ರೇಯಾಂಶ್‌ ದೊಡ್ಡಮನಿ ಅವರ ಮುಂದೆ ಹಾಜರುಪಡಿಸಿದ್ದರು.

ವಿಚಾರಣೆ ವೇಳೆ ಆರೋಪಿ ಸತ್ಯನಾರಾಯಣ ವರ್ಮಾ ಅವರು ಎಸ್‌ಐಟಿ ಪೊಲೀಸರು ತಮ್ಮನ್ನು ಬಂಧಿಸುವುದಕ್ಕೂ ಮುನ್ನ ನಾಗೇಂದ್ರ ಅವರ ಸಹಚರರು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದರು. ಅಂತೆಯೇ, ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದ ವೇಳೆ ನಾಗೇಂದ್ರ ಅವರ ಆಪ್ತ ನೆಕ್ಕುಂಡಿ ನಾಗರಾಜ್‌ ತಮ್ಮ ಮೇಲೆ ಹಲ್ಲೆ ನಡೆಸುವ ಪ್ರಯತ್ನ ಮಾಡಿದ್ದರು ಎಂದು ಆರೋಪಿಸಿದರು.

ಈ ಹೇಳಿಕೆ ದಾಖಲು ಮಾಡಿಕೊಂಡ ನ್ಯಾಯಾಧೀಶರು “ವರ್ಮಾ ಅವರ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಸಲ್ಲಿಸಿ” ಎಂದು ಹಲಸೂರು ಗೇಟ್‌ ಠಾಣೆಯ ಪೊಲೀಸರಿಗೆ ಆದೇಶಿಸಿದ್ದಾರೆ. ಅಂತೆಯೇ, ಸತ್ಯನಾರಾಯಣ ವರ್ಮಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹಗರಣದ 13ನೇ ಆರೋಪಿಯಾಗಿರುವ ವರ್ಮಾ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಿ ಅವರಿಂದ ₹ 8.21 ಕೋಟಿ ನಗದು ಜಪ್ತಿ ಮಾಡಲಾಗಿದೆ. ರಾಜ್ಯದ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಜೊತೆ ಒಡನಾಟ ಇಟ್ಟುಕೊಂಡಿದ್ದ ವರ್ಮಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನಕಲಿ ಕಂಪನಿಗಳ ಹೆಸರಿನಲ್ಲಿನ ಖಾತೆಗಳಿಗೆ ಹಾಕಿಸಿಕೊಂಡು ಲಾಭ ಮಾಡಿಕೊಳ್ಳುವ ಕೃತ್ಯದಲ್ಲಿ ತೊಡಗಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.

Kannada Bar & Bench
kannada.barandbench.com