ಜೈಲಿನಲ್ಲಿ ದರ್ಶನ್‌ಗೆ ಕನಿಷ್ಠ ಸೌಲಭ್ಯ: ಆದೇಶದ ಅನುಪಾಲನೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಾಲಯದ ಸೂಚನೆ

ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಅಕ್ಟೋಬರ್‌ 18ರೊಳಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿರುವ ನ್ಯಾಯಾಲಯ.
Darshan, Actor
Darshan, Actor
Published on

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹಾಸಿಗೆ, ಹೊದಿಕೆ ಸೇರಿದಂತೆ ಇನ್ನಿತರ ಸೌಲಭ್ಯ ನೀಡುವಂತೆ ಸೂಚಿಸಿದ ನ್ಯಾಯಾಲಯದ ಆದೇಶ ಪಾಲನೆಯಾಗಿದೆಯೇ ಎಂಬುದನ್ನು ಜೈಲಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶುಕ್ರವಾರ ನಿರ್ದೇಶಿಸಿದೆ.

ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ಹಾಸಿಗೆ, ಹೊದಿಕೆ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸದೆ ಹಿಂಸೆ ನೀಡಲಾಗುತ್ತಿದೆ. ಈ ಕುರಿತು ನ್ಯಾಯಾಧೀಶರು ಜೈಲಿಗೆ ಬಂದು ಪರಿಶೀಲನೆ ನಡೆಸಲು ಆದೇಶಿಸಬೇಕು ಎಂದು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಐ ಪಿ ನಾಯ್ಕ್‌ ಅವರು ಪುರಸ್ಕರಿಸಿದರು.

ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯು (ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೇಣಿಯ ನ್ಯಾಯಾಧೀಶರು) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಬೇಕು. ನ್ಯಾಯಾಲಯದ ಆದೇಶಂತೆ ದರ್ಶನ್‌ಗೆ ಜೈಲು ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಕ್ಟೋಬರ್‌ 18ಕ್ಕೆ ಪರಿಶೀಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ: ತನಗೆ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸುವಂತೆ ಕೋರಿ ದರ್ಶನ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯವು ದರ್ಶನ್‌ಗೆ ಜೈಲು ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ 2025ರ ಸೆಪ್ಟೆಂಬರ್‌ 9ರಂದು ಆದೇಶಿಸಿತ್ತು. ಈ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಹೈಕೋರ್ಟ್‌ಗೆ ಶಿಫಾರಸ್ಸು ಮಾಡಬೇಕು ಎಂದು ಕೋರಿ ದರ್ಶನ್‌ ಅರ್ಜಿ ಸಲ್ಲಿಸಿದ್ದರು. ಆ ಕುರಿತು ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

Also Read
ದರ್ಶನ್‌ಗೆ ಹಾಸಿಗೆ, ಹೊದಿಕೆ, ದಿಂಬು ಕೋರಿಕೆ: ಸೆ.9ಕ್ಕೆ ಆದೇಶ ಕಾಯ್ದಿರಿಸಿದ ಬೆಂಗಳೂರಿನ ನ್ಯಾಯಾಲಯ

ಈ ತೀರ್ಪು ಪ್ರಕಟ ಬಾಕಿಯಿರುವ ಹಂತದಲ್ಲೇ ಅಪರಾಧ ಪ್ರಕ್ರಿಯಾ ಸಂಹಿತೆ-1973ರ (ಸಿಆರ್‌ಪಿಸಿ) ಸೆಕ್ಷನ್‌ 310 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ದರ್ಶನ್‌, ನ್ಯಾಯಾಲಯದ ಆದೇಶದಂತೆ ಜೈಲು ಅಧಿಕಾರಿಗಳು ಸೌಲಭ್ಯ ಕಲ್ಪಿಸಿಲ್ಲ. ನ್ಯಾಯಾಲಯದ ಆದೇಶ ಪಾಲನೆಯಾಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಜೈಲಿಗೆ ಬಂದು ಪರಿಶೀಲಿಸಲು ನ್ಯಾಯಾಧೀಶರೊಬ್ಬರಿಗೆ ನಿರ್ದೇಶಿಸಬೇಕು ಎಂದು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ಗುರುವಾರ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.

Kannada Bar & Bench
kannada.barandbench.com