ಮಂಗಗಳ ಮಾರಣ ಹೋಮ ಪ್ರಕರಣ: ಹಾಸನ ಎಸ್‌ಪಿ, ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಜರಾತಿಗೆ ಹೈಕೋರ್ಟ್‌ ಸೂಚನೆ

“ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನಿರ್ದಿಷ್ಟ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿರುವ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲು ಸೂಚಿಸಿ. ಆರೋಪಿಗಳಿಗೆ ಸಂಬಂಧಿಸಿದಂತೆ ರಿಮ್ಯಾಂಡ್‌ ವರದಿ ಸಲ್ಲಿಸಲು ತಿಳಿಸಿ” ಎಂದ ನ್ಯಾಯಾಲಯ.
ಮಂಗಗಳ ಮಾರಣ ಹೋಮ ಪ್ರಕರಣ: ಹಾಸನ ಎಸ್‌ಪಿ, ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಜರಾತಿಗೆ ಹೈಕೋರ್ಟ್‌ ಸೂಚನೆ

ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯ ಚೌಡನಹಳ್ಳಿ ಬಳಿಯಲ್ಲಿ ಮಂಗಗಳ ಮಾರಣಹೋಮ ನಡೆಸಿ ಮೂಟೆಯಲ್ಲಿ ಕಟ್ಟಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಬುಧವಾರ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಹಾಜರಿರುವಂತೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಸೂಚಿಸಿದೆ.

ಮಂಗಗಳ ಮಾರಣ ಹೋಮದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರಿದ್ದ ವಿಭಾಗೀಯ ಪೀಠವು ನಡೆಸಿತು.

“ಕಲಾಪದ ಕುರಿತ ಮಾಹಿತಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನೀಡಿ. ನಿರ್ದಿಷ್ಟ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿರುವ ಕುರಿತು ಅವರು ಪೀಠಕ್ಕೆ ಮಾಹಿತಿ ನೀಡಬೇಕು. ಆರೋಪಿಗಳಿಗೆ ಸಂಬಂಧಿಸಿದಂತೆ ರಿಮ್ಯಾಂಡ್‌ ವರದಿ ಸಲ್ಲಿಸಬೇಕು. ಘಟನೆಗೆ ಕಾರಣವಾದ ಅಂಶಗಳನ್ನು ಒಳಗೊಂಡ ಅಂತಿಮ ವರದಿಯನ್ನು ಸಲ್ಲಿಸಬೇಕು” ಎಂದು ನ್ಯಾಯಾಲಯ ಹೇಳಿತು.

Also Read
ಮಂಗಗಳ ಮಾರಣಹೋಮ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಿರುವ ಬಗ್ಗೆ ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

“ಆರೋಪಿಗಳ ವಿರುದ್ಧ ವನ್ಯ ಜೀವಿ ರಕ್ಷಣೆ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 429ರ ಅಡಿ ಪ್ರಕರಣ ದಾಖಲಿಸಿರುವುದರ ಕುರಿತು ಸರ್ಕಾರಿ ವಕೀಲರನ್ನು ಪೀಠವು ಮೌಖಿಕವಾಗಿ ಪ್ರಶ್ನಿಸಿತು. ಐಪಿಸಿ 429ರ ಅಡಿಯ ಆರೋಪಕ್ಕೆ ಜಾಮೀನು ಸಿಗುತ್ತದಲ್ಲವೇ ಎಂದು ಕೇಳಿತು. ಜಿಲ್ಲಾ ದಂಡಾಧಿಕಾರಿ ಮಾಡಿರುವ ಆದೇಶವನ್ನೂ ನಾವು ಪರಿಶೀಲಿಸಬೇಕಿದೆ ಎಂದ ನ್ಯಾಯಾಲಯವು ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ವಿಚಾರಣೆಯಲ್ಲಿ ಭಾಗಿಯಾಗಿ ಘಟನೆಯ ಬಗ್ಗೆ ಸಂಪೂರ್ಣ ವಿವರ ನೀಡಬೇಕು” ಎಂದು ಸೂಚಿಸಿತು. ಪ್ರಕರಣದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ ತನಿಖೆ ನಡೆಸಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಲಾಗಿದೆ. ಎಸ್‌ಐಟಿಯು ಇದಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಿದೆ ಎಂದು ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

Related Stories

No stories found.
Kannada Bar & Bench
kannada.barandbench.com