
ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ನ್ಯಾಯಮೂರ್ತಿ ರವಿ ಎಂ. ಹೊಸಮನಿ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿಯು ನಾಳೆ ವಿಚಾರಣೆಗೆ ನಿಗದಿಯಾಗಿದೆ.
ಏಕರೂಪ ದರ ಜಾರಿಗೆ ತರುವ ಸಂಬಂಧ ಸೆಪ್ಟಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ಅನ್ನು ರದ್ದುಪಡಿಸಬೇಕು ಎಂದು ಕೋರಿ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ನ ಷೇರುದಾರ ಸಂತನು ಪೈ ಅರ್ಜಿ ಸಲ್ಲಿಸಿದ್ದಾರೆ.
ತಿದ್ದುಪಡಿ ನಿಯಮಗಳು ವ್ಯಾಪ್ತಿ ಮೀರಿದ ಹಾಗೂ ಸಂವಿಧಾನ ಖಾತಪರಿಡಿಸುವ ಮೂಲಭೂತ ಮತ್ತು ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ. ನಿಯಮಗಳು ಜಾರಿಗೆ ಬಂದಲ್ಲಿ ಮಲ್ಟಿಪ್ಲೆಕ್ಸ್ಗಳ ವಹಿವಾಟಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ. ಅಲ್ಲದೇ ಸರ್ಕಾರಕ್ಕೂ ಭಾರಿ ನಷ್ಟ ಉಂಟಾಗಲಿದೆ. ಆದ್ದರಿಂದ ತಿದ್ದುಪಡಿ ನಿಯಮಗಳನ್ನು ರದ್ದುಪಡಿಸಬೇಕು. ಅರ್ಜಿಯು ಅಂತಿಮ ಇತ್ಯರ್ಥವಾಗುವ ತನಕ ತಿದ್ದುಪಡಿ ನಿಯಮಗಳಿಗೆ ತಡೆ ನೀಡಬೇಕು ಎಂದು ಕೋರಲಾಗಿದೆ.