ಬಿಜೆಪಿ ಶಾಸಕ ಓಲೇಕಾರ್‌ಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆ ಅಮಾನತಿನಲ್ಲಿರಿಸಿದ ಹೈಕೋರ್ಟ್‌

ಸ್ವಜನ ಪಕ್ಷಪಾತ, ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಓಲೇಕಾರ್ ಮತ್ತು ಅವರ ಇಬ್ಬರು ಪುತ್ರರಾದ ದೇವರಾಜ್‌, ಮಂಜುನಾಥ್‌ ಹಾಗೂ ಐವರು ಅಧಿಕಾರಿಗಳಿಗೆ ತಲಾ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಫೆ.13ರಂದು ವಿಶೇಷ ನ್ಯಾಯಾಲಯವು ಆದೇಶಿಸಿತ್ತು.
BJP MLA Nehru Olekar and Karnataka HC
BJP MLA Nehru Olekar and Karnataka HC

ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರೂ ಓಲೇಕಾರ್‌ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ರದ್ದು ಕೋರಿ ನೆಹರು ಓಲೇಕಾರ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ವಿಚಾರಣಾಧೀನ ನ್ಯಾಯಾಲಯದ ಆದೇಶ ಅಮಾನತಿನಲ್ಲಿರಿಸಿ, ನೆಹರು ಓಲೇಕಾರ್‌ ಅವರಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್‌ ಆದೇಶಿಸಿದೆ.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲ ಆರ್ ಸ್ವರೂಪ ಆನಂದ್ ಅವರು, ಅರ್ಜಿದಾರರ ವಿರುದ್ಧ ದೂರು ದಾಖಲಿಸಲು ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನಮತಿಯ ಪಡೆದಿಲ್ಲ. ಪೂರ್ವಾನುಮತಿ ಪಡೆಯದೇ ಸಲ್ಲಿಸಿದ್ದ ದೂರನ್ನು ವಿಚಾರಣೆ ನಡೆಸಿ ಅರ್ಜಿ*/7ದಾರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ವಿಚಾರಣಾಧೀನ ನ್ಯಾಯಾಲಯದ ಕ್ರಮ ಕಾನೂನುಬಾಹಿರ. ಪ್ರಕರಣದ ಇತರೆ ಆರೋಪಗಳ ಜೊತೆಗೆ ಅರ್ಜಿದಾರ ಶಾಸಕರು ಅಪರಾಧಿಕ ಒಳಸಂಚು ರೂಪಿಸಿಲ್ಲ. ಆದ್ದರಿಂದ, ಅರ್ಜಿದಾರರನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಶಿಕ್ಷೆ ವಿಧಿಸಿ ವಿಚಾರಣಾಧೀನ ನ್ಯಾಯಾಲಯದ ಹೊರಡಿಸಿದ ಆದೇಶವನ್ನು ಅಮಾನತ್ತಿನಲ್ಲಿರಿಸಬೇಕು. ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಶಾಸಕ ನೆಹರೂ ಓಲೇಕಾರ್‌ ಮತ್ತು ಅವರ ಇಬ್ಬರು ಪುತ್ರರಾದ ದೇವರಾಜ್‌ ಮತ್ತು ಮಂಜುನಾಥ್‌ ಹಾಗೂ ಐವರು ಅಧಿಕಾರಿಗಳಿಗೆ ತಲಾ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಫೆಬ್ರವರಿ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿತ್ತು.

2013ರಲ್ಲಿ ಹಾವೇರಿಯ ಶಶಿಧರ್‌ ಹಳ್ಳಿಕೇರಿ ಅವರು ದೂರು ದಾಖಲಿಸಿ, 2008 ಮತ್ತು 2013ರ ಅವಧಿಯಲ್ಲಿ ಶಾಸಕರಾಗಿದ್ದ ಓಲೇಕಾರ್‌ ಅವರು ಸರ್ಕಾರದ ಸಿವಿಲ್‌ ಕೆಲಸಗಳನ್ನು ಬೇರೆಯವರಿಗೆ ದಕ್ಕದಂತೆ ತಮ್ಮ ಇಬ್ಬರು ಪುತ್ರರಿಗೆ ಕೊಡಿಸಿದ್ದರು ಎಂದು ಆರೋಪಿಸಿದ್ದರು. ಈ ಖಾಸಗಿ ದೂರನ್ನು ಆಧರಿಸಿ ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು.

ಇದರ ಅನ್ವಯ ಐಪಿಸಿ ಸೆಕ್ಷನ್‌ಗಳಾದ 197, 198, 409 ಮತ್ತು 420 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 13(1)(ಡಿ) ಜೊತೆಗೆ 13(2) ಅಡಿ ಪ್ರಕರಣ ದಾಖಲಿಸಿ, ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆಯ ಜೊತೆಗೆ ಶಾಸಕ ಓಲೇಕಾರ್‌ಗೆ ₹2,000 ದಂಡ ವಿಧಿಸಿದ್ದು, ಅವರ ಇಬ್ಬರು ಪುತ್ರರಿಗೆ ತಲಾ ₹6,000 ಹಾಗೂ 4,5,7,8 ಮತ್ತು 9ನೇ ಆರೋಪಿಗಳಿಗೆ ತಲಾ ₹8,000 ದಂಡ ವಿಧಿಸಿತ್ತು. ದೋಷಿಗಳ ಪೈಕಿ ಓಲೇಕಾರ್‌ ಮಾತ್ರ ಹೈಕೋರ್ಟ್‌ ಕದತಟ್ಟಿದ್ದಾರೆ.

Related Stories

No stories found.
Kannada Bar & Bench
kannada.barandbench.com