ಪೋಕ್ಸೊ ಪ್ರಕರಣ: ಡಾ. ಶಿವಮೂರ್ತಿ ಮುರುಘಾ ಶರಣರನ್ನು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಚಿತ್ರದುರ್ಗ ನ್ಯಾಯಾಲಯದ ಆದೇಶ

ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ನಡೆಸಿದರು.
Dr. Shivamurthy Murugha Sharanaru
Dr. Shivamurthy Murugha Sharanaru

ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲ ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಶುಕ್ರವಾರ ಮೂರು ದಿನ ಕಾಲ (ಸೆಪ್ಟೆಂಬರ್‌ 5ರವರೆಗೆ) ತನಿಖೆಗಾಗಿ ಪೊಲೀಸ್‌ ವಶಕ್ಕೆ ನೀಡಿದೆ.

ಆರೋಪಿ ಶಿವಮೂರ್ತಿ ಮುರುಘಾ ಶರಣರನ್ನು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರು ನಡೆಸಿದರು.

ಆರೋಪಿ ಶ್ರೀಗಳ ವಿರುದ್ಧ ಪೋಕ್ಸೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಗಂಭೀರ ಪ್ರಕರಣಗಳಿರುವುದರಿಂದ ಹೆಚ್ಚಿನ ತನಿಖೆಗೆ ಪೊಲೀಸ್‌ ವಶಕ್ಕೆ ನಿಡುವಂತೆ ಪೊಲೀಸರು ಕೋರಿದರು. ಅಂತಿಮವಾಗಿ ಶ್ರೀಗಳನ್ನು ಮೂರು ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದರು.

ಸ್ವಾಮೀಜಿ ಅವರನ್ನು ಗುರುವಾರ ರಾತ್ರಿ ಬಂಧಿಸಿ, ವೈದ್ಯಕೀಯ ತಪಾಸಣೆಯ ಬಳಿಕ ಶುಕ್ರವಾರ ಬೆಳಗಿನ ಜಾವ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆಗ ನ್ಯಾಯಾಧೀಶರು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿದ್ದರು.

ಆದರೆ, ಬೆಳಗ್ಗೆ ನ್ಯಾಯಾಲಯ ಮುಂದೆ ಹಾಜರಾಗಿದ್ದ ಪೊಲೀಸರು ಸ್ವಾಮೀಜಿ ಅವರಿಗೆ ಅನಾರೋಗ್ಯವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದರು. ಇದರಿಂದ ಅಸಮಾಧಾನಗೊಂಡ ಪೀಠವು ನ್ಯಾಯಾಲಯದ ಗಮನಕ್ಕೆ ತರದೇ ಹೇಗೆ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಶ್ನಿಸಿತು ಎಂದು ತಿಳಿದು ಬಂದಿದೆ.

Also Read
ಪೋಕ್ಸೊ ಪ್ರಕರಣ: ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರು ಪೊಲೀಸ್‌ ವಶಕ್ಕೆ

ಈ ಸಂಬಂಧ ವೈದ್ಯಕೀಯ ದಾಖಲೆ ಸಲ್ಲಿಸುವಂತೆ ಪೀಠ ಸೂಚಿಸಿತ್ತು. ವೈದ್ಯರ ಅಭಿಪ್ರಾಯವನ್ನು ಪೊಲೀಸರು ಪೀಠಕ್ಕೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯವು ಸ್ವಾಮೀಜಿ ಅವರನ್ನು ಪೀಠದ ಮುಂದೆ ಹಾಜರುಪಡಿಸುವಂತೆ ಆದೇಶಿಸಿತ್ತು. ಅಂತೆಯೇ ಪೊಲೀಸರು ಸ್ವಾಮೀಜಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಅಂತಿಮವಾಗಿ ಸ್ವಾಮೀಜಿ ಅವರನ್ನು ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿತು.

ಇದಕ್ಕೂ ಮುನ್ನ, ಬಂಧಿತರಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಆಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗುತ್ತದೆ ಎಂದು ಚಿತ್ರದುರ್ಗದ ಜಿಲ್ಲಾ ವೈದ್ಯಾಧಿಕಾರಿ ಡಾ ಬಸವರಾಜ್‌ ಹೇಳಿದ್ದರು.

Related Stories

No stories found.
Kannada Bar & Bench
kannada.barandbench.com