Lokayukta and Karnataka HC
Lokayukta and Karnataka HC

ಉಪ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ವಿರೋಧ ಪಕ್ಷದ ನಾಯಕರ ನೇಮಕವಾಗದಿದ್ದರಿಂದ ಉಪಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಈಗ ಪ್ರಕ್ರಿಯೆ ಆರಂಭವಾಗಿದೆ ಎಂದು ಸರ್ಕಾರದ ವಕೀಲರು ಪೀಠಕ್ಕೆ ತಿಳಿಸಿದರು.
Published on

ಉಪಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ.

ಎರಡು ಉಪಲೋಕಾಯುಕ್ತ ಹುದ್ದೆಗಳ ಪೈಕಿ ಒಂದು ಹುದ್ದೆ ಭರ್ತಿಯಾಗಿರುವುದರಿಂದ ಅವರಿಗೆ ಕಾರ್ಯಭಾರ ಹೆಚ್ಚಿದೆ. ಹೀಗಾಗಿ, ಇನ್ನೊಂದು ಉಪಲೋಕಾಯುಕ್ತರ ಹುದ್ದೆಗೆ ಅರ್ಹರನ್ನು ನೇಮಕ ಮಾಡಬೇಕು ಎಂದು ಕೋರಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ. ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಹಿರಿಯ ವಕೀಲ ಎಸ್‌ ಬಸವರಾಜ್‌ ಉಲ್ಲೇಖಿಸಿದರು.

ವಿರೋಧ ಪಕ್ಷದ ನಾಯಕರ ನೇಮಕವಾಗದಿದ್ದರಿಂದ ಉಪಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಈಗ ಪ್ರಕ್ರಿಯೆ ಆರಂಭವಾಗಿದೆ ಎಂದು ಸರ್ಕಾರದ ವಕೀಲರು ಪೀಠಕ್ಕೆ ತಿಳಿಸಿದರು.

ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎನ್ನುವ ಅಂಶವನ್ನು ಪರಿಗಣಿಸಿದ ಪೀಠ ಅರ್ಜಿಯ ವಿಚಾರಣೆಯನ್ನು ಫೆಬ್ರವರಿಗೆ ಮುಂದೂಡಿತು.

ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಬಿ ಎಸ್‌ ಪಾಟೀಲ್‌, ಉಪ ಲೋಕಾಯುಕ್ತ-2 ಹುದ್ದೆಯಲ್ಲಿ ನಿವೃತ್ತ ನ್ಯಾ. ಕೆ ಎನ್‌ ಫಣೀಂದ್ರ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Kannada Bar & Bench
kannada.barandbench.com