ರಾಹುಲ್ ಪೌರತ್ವ: ಸುಬ್ರಮಣಿಯನ್ ಸ್ವಾಮಿ ಹೇಳಿಕೆಗೆ ಕೇಂದ್ರ ಏಕೆ ಪ್ರತಿಕ್ರಿಯಿಸಿಲ್ಲ ಎಂದು ಕೇಳಿದ ದೆಹಲಿ ಹೈಕೋರ್ಟ್

ಪ್ರಕರಣದ ಕುರಿತು ಸೂಚನೆಗಳನ್ನು ಪಡೆಯುವಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಚೇತನ್ ಶರ್ಮಾ ಅವರಿಗೆ ನ್ಯಾಯಾಲಯ ಸೂಚಿಸಿತು.
Subramanian Swamy and Rahul Gandhi
Subramanian Swamy and Rahul Gandhi
Published on

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಏಕೆ ಪ್ರತಿಕ್ರಿಯೆ ನೀಡಿಲ್ಲ ಎಂದು ದೆಹಲಿ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

ಪ್ರಕರಣದ ಕುರಿತು ಸೂಚನೆಗಳನ್ನು ಪಡೆಯುವಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಚೇತನ್ ಶರ್ಮಾ ಅವರಿಗೆ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ವಿಭಾಗೀಯ ಪೀಠ ಸೂಚಿಸಿತು.

Also Read
ರಾಹುಲ್‌ ಗಾಂಧಿ ಪೌರತ್ವ ವಿಚಾರ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

ರಾಹುಲ್‌ ಅವರ ಬ್ರಿಟಿಷ್ ಪೌರತ್ವದ ಬಗ್ಗೆ ವಿವರಣೆ ನೀಡುವಂತೆ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಆದರೆ ರಾಹುಲ್‌ ಅದಕ್ಕೆ ಪ್ರತಿಕ್ರಿಯಿಸಲಿಲ್ಲ ನಂತರ ಸರ್ಕಾರ ಕೂಡ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸ್ವಾಮಿ ಅವರು ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ಪೀಠ ಕೇಂದ್ರವನ್ನು ಪ್ರಶ್ನಿಸಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿದ ನ್ಯಾಯಾಲಯ ಸ್ವಾಮಿ ಅವರು ಕೇಂದ್ರಕ್ಕೆ ಬರೆದ ಪತ್ರದ ಸ್ಥಿತಿಗತಿ ಕುರಿತು ಸೂಚನೆಗಳನ್ನು ಪಡೆಯಲು ಎಎಸ್‌ಜಿ ಅವರಿಗೆ ಸೂಚಿಸಿತು.

ರಾಹುಲ್‌ ಗಾಂಧಿ ಅವರು ಬ್ರಿಟನ್‌ನಲ್ಲಿ 2003 ರಲ್ಲಿ ನೊಂದಾಯಿಸಿರುವ ಬ್ಯಾಕ್‌ಆಪ್ಸ್‌ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸ್ವಾಮಿ 2019 ರಲ್ಲಿ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಅಕ್ಟೋಬರ್ 10, 2005 ಮತ್ತು ಅಕ್ಟೋಬರ್ 31, 2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದರು.

ಮುಂದುವರೆದು, ಫೆಬ್ರವರಿ 17, 2009ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಇದು ಭಾರತದ ಸಂವಿಧಾನ ಮತ್ತು ಭಾರತೀಯ ಪೌರತ್ವ ಕಾಯಿದೆ, 1955ರ ಅನುಚ್ಛೇದ 9 ಅನ್ನು ಉಲ್ಲಂಘಿಸುತ್ತದೆ ಎನ್ನುವುದು ಸ್ವಾಮಿ ಅವರ ವಾದ.

Also Read
ರಾಹುಲ್ ಪೌರತ್ವ ವಿವಾದ ಕುರಿತ ಪತ್ರ: ಡಿ.19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ಅಲಾಹಾಬಾದ್ ಹೈಕೋರ್ಟ್ ಸೂಚನೆ

ಸ್ವಾಮಿ ಅವರ ಪತ್ರದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಏಪ್ರಿಲ್ 29, 2019 ರಂದು ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ "ವಾಸ್ತವ ಸ್ಥಿತಿಯನ್ನು ತಿಳಿಸುವಂತೆ" ಕೇಳಿಕೊಂಡಿತ್ತು.

ತಾವು ಗೃಹ ಇಲಾಖೆಗೆ ಪತ್ರ ಬರೆದು ಐದು ವರ್ಷಗಳಿಗಿಂತ ಹೆಚ್ಚು ಸಮಯವೇ ಸಂದಿದ್ದರೂ ಈ ಕುರಿತು ಯಾವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನುವ ಬಗ್ಗೆ ಗೃಹ ಇಲಾಖೆಯಿಂದ ಯಾವುದೇ ಸ್ಪಷ್ಟನೆ ದೊರೆತಿಲ್ಲ ಎಂದು ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Kannada Bar & Bench
kannada.barandbench.com