ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ: ಅಗ್ನಿ ಸುರಕ್ಷತಾ ಸರ್ಟಿಫಿಕೇಟ್‌ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶ ರದ್ದು

ಆಕ್ಷೇಪಿತ ಸರ್ಕಾರದ ಸುತ್ತೋಲೆಗಳು 2020-21ಕ್ಕಿಂತ ಮೊದಲು ಕಾರ್ಯನಿರ್ವಹಿಸುತ್ತಿದ್ದ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿ, ಎರಡೂ ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌.
High Court of Karnataka
High Court of Karnataka

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಅಗ್ನಿ ಸುರಕ್ಷತಾ ಸರ್ಟಿಫಿಕೇಟ್‌ ಪಡೆಯಬೇಕು ಎಂದು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ಪ್ರಶ್ನಿಸಿ ಪ್ರಜ್ಞಾ ಎಜುಕೇಷನ್‌ ಸೊಸೈಟಿ ಸೇರಿದಂತೆ 22 ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ಏಸಕದಸ್ಯ ಪೀಠವು ಪುರಸ್ಕರಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ 2020ರ ನವೆಂಬರ್‌ 10ರಂದು ಮತ್ತು 2021ರ ಮಾರ್ಚ್‌ 10ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಡ್ಡಾಯವಾಗಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಆ ಕುರಿತು ಸರ್ಟಿಫಿಕೇಟ್‌ ಪಡೆದುಕೊಳ್ಳಬೇಕು. ಜೊತೆಗೆ ರಾಷ್ಟ್ರೀಯ ಕಟ್ಟಡ ಸಂಹಿತೆ ಪ್ರಕಾರ ಎಂಜಿನಿಯರ್‌ಗಳಿಂದ ಮೌಲ್ಯಮಾಪನ ಮಾಡಿಸಬೇಕು. ಆದರೆ, ಈ ನಿಯಯ ಸರ್ಕಾರಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ ಎಂಬುದಾಗಿ ಹೇಳಿದೆ. ಆ ಮೂಲಕ ತಾರತಮ್ಯ ಎಸಗಲಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ಶಾಲೆಗಳು ಆಕ್ಷೇಪಿಸಿದ್ದವು.

ಅರ್ಜಿ ವಿಚಾರಣೆ ನಡೆಸಿದ ಪೀಠವು 2020-21ಕ್ಕಿಂತ ಮೊದಲು ಕಾರ್ಯನಿರ್ವಹಿಸುತ್ತಿದ್ದ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಸರ್ಕಾರದ ಸುತ್ತೋಲೆಗಳು ಅನ್ವಯಿಸುವುದಿಲ್ಲ ಎಂದು ತಿಳಿಸಿ, ಎರಡೂ ಸುತ್ತೋಲೆಗಳನ್ನು ರದ್ದುಪಡಿಸಿದೆ. ವಿಸ್ತೃತ ಆದೇಶವು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

Related Stories

No stories found.
Kannada Bar & Bench
kannada.barandbench.com