ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಕ ವಿಳಂಬ: ಬಾಕಿ ಪ್ರಕರಣ ಹೆಚ್ಚಳಕ್ಕೆ ಸರ್ಕಾರ ಕಾರಣ ಎಂದ ಹೈಕೋರ್ಟ್‌

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಡ ಮಾಡದೇ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಕಾತಿಯನ್ನು ಖಾತರಿಪಡಿಸಬೇಕು. ಯಾವಾಗಿನಿಂದ ನ್ಯಾಯಾಧಿಕರಣ ಕಾರ್ಯಾರಂಭ ಮಾಡಲಿದೆ ಎಂಬ ಕಾಲಾನುಕ್ರಮವನ್ನು ಎಜಿ ಸಲ್ಲಿಸಬೇಕು ಎಂದಿರುವ ಹೈಕೋರ್ಟ್‌.
Justice M Nagaprasanna and Karnataka HC
Justice M Nagaprasanna and Karnataka HC

ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಕಾತಿ ವಿಳಂಬಿಸುವ ಮೂಲಕ ಮೇಲ್ನೋಟಕ್ಕೆ ರಾಜ್ಯ ಸರ್ಕಾರವು ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ಅಸಮಾಧಾನ ದಾಖಲಿಸಿದೆ.

ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಖ್ಯಸ್ಥರನ್ನು ನೇಮಿಸುವಂತೆ ಕೋರಿ ಬೆಂಗಳೂರಿನ ಮ್ಯಾಥ್ಯೂ ಥಾಮಸ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಿಸಲು ಹಾಗೂ ಅಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿಲ್ಲ. ರೇರಾದ ಸೆಕ್ಷನ್‌ 22ರ ಪ್ರಕಾರ ರಾಜ್ಯ ಸರ್ಕಾರ ಹುದ್ದೆಗಳನ್ನು ತುಂಬಿದರೆ ಪ್ರಕ್ರಿಯೆ ಮುಂದುವರಿಯಲಿದೆ. ರೇರಾ ಹೊರಡಿಸಿದ ಆದೇಶಗಳನ್ನು ಕಾಯಿದೆಯ ಸೆಕ್ಷನ್‌ 44(5)ರ ಅಡಿ ಪ್ರಶ್ನಿಸಬಹುದಾಗಿದೆ. ಮೇಲ್ಮನವಿ ನ್ಯಾಯಾಧಿಕರಣವು 60 ದಿನಗಳ ಒಳಗಾಗಿ ಮೇಲ್ಮನವಿ ಇತ್ಯರ್ಥಪಡಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ನ್ಯಾಯಾಧಿಕರಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ಸಕ್ಷಮ ಪ್ರಾಧಿಕಾರ ಮಾಡಿದ ಆದೇಶಗಳನ್ನು ಪ್ರವರ್ತಕರು ಪ್ರಶ್ನಿಸಿದ್ದು, ಸಾಕಷ್ಟು ಅರ್ಜಿಗಳು ಹೈಕೋರ್ಟ್‌ಗೆ ಸಲ್ಲಿಕೆಯಾಗಿವೆ. ಇವೆಲ್ಲವನ್ನೂ ನ್ಯಾಯಾಧಿಕರಣದ ಮುಂದೆ ಸಲ್ಲಿಸಬೇಕಾಗಿದೆ. ನ್ಯಾಯಾಧಿಕರಣ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕೆ ಈ ನ್ಯಾಯಾಲಯದಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ರಾಜ್ಯ ಸರ್ಕಾರವು ಅಧ್ಯಕ್ಷರನ್ನು ನೇಮಕ ಮಾಡದಿರುವುದರಿಂದ ನ್ಯಾಯಾಧಿಕರಣ ಕೆಲಸ ಮಾಡುತ್ತಿಲ್ಲ. ಹೀಗಾಗಿ, ಮೇಲ್ನೋಟಕ್ಕೆ ಹೈಕೋರ್ಟ್‌ನಲ್ಲಿ ಬಾಕಿ ಪ್ರಕರಣ ಹೆಚ್ಚಲು ಸರ್ಕಾರ ಕಾರಣವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಡ ಮಾಡದೇ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಕಾತಿಯನ್ನು ಖಾತರಿಪಡಿಸಬೇಕು. ಯಾವಾಗಿನಿಂದ ನ್ಯಾಯಾಧಿಕರಣ ಕಾರ್ಯಾರಂಭ ಮಾಡಲಿದೆ ಎಂಬ ಕಾಲಾನುಕ್ರಮವನ್ನು ಅಡ್ವೊಕೇಟ್‌ ಜನರಲ್‌ ಸಲ್ಲಿಸಬೇಕು ಎಂದು ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಪೀಠ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: 17.03.2021ರಂದು ನಿರ್ಮಾಣ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ರೇರಾ ಪ್ರವರ್ತಕರಿಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಪ್ರವರ್ತಕರು ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಅದನ್ನು ಪುರಸ್ಕರಿಸಿ ಪ್ರಕರಣವನ್ನು ರೇರಾಕ್ಕೆ ಮರಳಿಸಲಾಗಿತ್ತು. ಆನಂತರ ರೇರಾ ಮತ್ತೆ 2022ರ ಸೆಪ್ಟೆಂಬರ್‌ 2ರಂದು ಅರ್ಜಿದಾರರ ಪರವಾಗಿ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ 2023ರ ಫೆಬ್ರವರಿ 2ರಂದು ಪ್ರವರ್ತಕರು ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಾಧಿಕರಣ ರಚನೆಯಾಗದಿರುವುದರಿಂದ ಅದು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ನ್ಯಾಯಾಧಿಕರಣದಲ್ಲಿ ಬಾಕಿ ಇರುವ ಹುದ್ದೆಗಳನ್ನು ತುಂಬುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. 02.06.2023ರಿಂದ ನ್ಯಾಯಾಧಿಕರಣವು ಖಾಲಿಯಿದ್ದು, ಅರ್ಜಿದಾರರು ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್‌ ಕದತಟ್ಟಿದ್ದಾರೆ ಎಂದು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ.

Related Stories

No stories found.
Kannada Bar & Bench
kannada.barandbench.com