
ಹಿಂದೂ ಮಹಾಸಭಾ ಮುಖಂಡ ವಿ ಡಿ ಸಾವರ್ಕರ್ ಅವರನ್ನು ಅವಹೇಳನ ಮಾಡಿದ ಪ್ರಕರಣದ ವಿಚಾರಣೆಯನ್ನು ಸಂಕ್ಷಿಪ್ತವಾಗಿ ಆಲಿಸದೆ ಅದನ್ನು ವಿವರವಾದ ಸಮನ್ಸ್ ವಿಚಾರಣೆಯಾಗಿ ಪರಿವರ್ತಿಸುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಣೆಯ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ಅರ್ಜಿಗೆ ಪ್ರತಿಕ್ರಿಯಿಸುವಂತೆ ದೂರುದಾರರಿಗೆ ಸೂಚಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ರಾಹುಲ್ ಅವರಿಗೆ ಶಾಶ್ವತ ವಿನಾಯಿತಿ ನೀಡಿದರು.
ತಮ್ಮ ಹೇಳಿಕೆಗಳು ಐತಿಹಾಸಿಕ ಸಂಗತಿಗಳನ್ನು ಆಧರಿಸಿದ್ದು ವಿವರವಾದ ಪುರಾವೆಗಳು ಅಗತ್ಯವಾಗಿರುವುದರಿಂದ 'ಸಮನ್ಸ್ ವಿಚಾರಣೆ' ಹೆಚ್ಚು ಸೂಕ್ತವಾಗುತ್ತದೆ ಎಂದು ರಾಹುಲ್ ವಾದಿಸಿದರು.
ಮಾರ್ಚ್ 2023ರಲ್ಲಿ ಲಂಡನ್ನಲ್ಲಿ ಮಾಡಿದ ಭಾಷಣದ ವೇಳೆ ದಿವಂಗತ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳು ಮಾನನಷ್ಟ ಸ್ವರೂಪದ್ದಾಗಿವೆ ಎಂದು ಪ್ರಕರಣದ ಅರ್ಜಿದಾರ ಹಾಗೂ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಆರೋಪಿಸಿದ್ದರು.
ವಿ ಡಿ ಸಾವರ್ಕರ್ ಮತ್ತವರ ಗುಂಪು ಮುಸ್ಲಿಮರನ್ನು ಥಳಿಸಿದ್ದಾಗಿಯೂ ಅದರಿಂದ ತಮಗೆ ಸಂತೋಷವಾಗಿದ್ದಾಗಿಯೂ ಸಾವರ್ಕರ್ ಬರೆದುಕೊಂಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಹೇಳಿಕೆಗಳನ್ನು ನಿರಾಕರಿಸಿದ್ದ ಸಾತ್ಯಕಿ ಅವರು ರಾಹುಲ್ ಅವರ ಟೀಕೆಗಳು ಮಾನಹಾನಿಕರ ಎಂದಿದ್ದರು.
ರಾಹುಲ್ ಗಾಂಧಿ ಅವರು ಮಾಡಿರುವ ಕ್ರಿಮಿನಲ್ ಮಾನನಷ್ಟಕ್ಕಾಗಿ ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಗರಿಷ್ಠ ಶಿಕ್ಷೆ ಮತ್ತು ಸಿಆರ್ಪಿಸಿ ಸೆಕ್ಷನ್ 357ರ ಅಡಿ ಅತ್ಯಧಿಕ ಪರಿಹಾರ ನೀಡುವಂತೆ ಸಾತ್ಯಕಿ ಕೋರಿದ್ದರು. ಫೆಬ್ರವರಿ 25 ರಂದು ನ್ಯಾಯಾಲಯ ಮಾನನಷ್ಟ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.