ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ: 3,644 ಹುದ್ದೆಗಳ ನೇಮಕಾತಿ‌ಗೆ ಸರ್ಕಾರಕ್ಕೆ ಅನುಮತಿಸಿದ ಹೈಕೋರ್ಟ್‌

ಈಗಾಗಲೇ ಆರಂಭಿಸಿರುವ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆ ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿ ಪತ್ರದಲ್ಲಿ ಉಲ್ಲೇಖಿಸಬೇಕು ಎಂದು ಆದೇಶಿಸಿದ ಹೈಕೋರ್ಟ್‌.
ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ: 3,644 ಹುದ್ದೆಗಳ ನೇಮಕಾತಿ‌ಗೆ ಸರ್ಕಾರಕ್ಕೆ ಅನುಮತಿಸಿದ ಹೈಕೋರ್ಟ್‌
Published on

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಡಗಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ-2022ರ ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ‌ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳ ಪೈಕಿ 3,644  ಹುದ್ದೆಗಳ ನೇಮಕಾತಿ‌ಗೆ ಅನುಮತಿ ದೊರೆತಂತಾಗಿದೆ.

ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯಿದೆ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

“ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ. ಕಾಯಿದೆಯ ಅನ್ವಯ ಈಗಾಗಲೇ ಆರಂಭಿಸಿರುವ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆಯು ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಈ ವಿಚಾರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಹಕ್ಕು ದೊರೆಯುವುದಿಲ್ಲ. ಈ ಮಾರ್ಪಾಡು 19-11-2025ರ ಮಧ್ಯಂತರ ಆದೇಶಕ್ಕೆ ಮಾತ್ರ ಅನ್ವಯಿಸುತ್ತದೆ” ಎಂದು ನ್ಯಾಯಾಲಯ ಆದೇಶಿಸಿದೆ.

ಅಲ್ಲದೇ, ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ್ದು, ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಕಾಯಿದೆ ಅನ್ವಯ ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಆರಂಭಿಸಿದ್ದು, ಅಂತಿಮ ಹಂತದಲ್ಲಿದೆ. ಒಟ್ಟು 3,644 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸುವುದಿಲ್ಲ. ಹೊಸ ಕಾಯಿದೆ ಅಡಿ ಈಗಾಗಲೇ ನೇಮಕಾತಿ ಮಾಡಿರುವುದಕ್ಕೆ ಮಧ್ಯಂತರ ಆದೇಶ ಅನ್ವಯಿಸಲ್ಲ ಎಂದು ಆದೇಶಿಸಬೇಕು. ಅರ್ಜಿದಾರರು ಸರ್ಕಾರದ ಅಧಿಸೂಚನೆಗಳನ್ನು ಪ್ರಶ್ನಿಸಿಲ್ಲ. ಹೀಗಾಗಿ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಮತ್ತು ಬಡ್ತಿ ನೀಡಲು ಸರ್ಕಾರಕ್ಕೆ ಅನುಮತಿಸಬೇಕು” ಎಂದು ಕೋರಿದರು.

ಅಭ್ಯರ್ಥಿ ಮಧು ಎಂಬವರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪಿ ಎಸ್‌ ರಾಜಗೋಪಾಲ್‌ ಅವರು “ನೇಮಕಾತಿ ಪ್ರಕ್ರಿಯೆ ನಡೆಯಲಿ, ಆದರೆ, ಫಲಿತಾಂಶವನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಪ್ರಕಟಿಸಬಾರದು. ಬಿಬಿಎಂಪಿ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ಪ್ರಶ್ನಿಸಿದ್ದೇವೆ. ಆಯ್ಕೆಯಾದ ಮೇಲೆ ನೇಮಕಾತಿ ಆದೇಶ ನೀಡಲು ಮೂರು ತಿಂಗಳಾಗುತ್ತದೆ. ಜಾತಿ ಪ್ರಮಾಣ ಪತ್ರ ಮತ್ತಿತರ ದಾಖಲೆಗಳನ್ನು ಪರಿಶೀಲಿಸಬೇಕಾಗುತ್ತದೆ. ನಿವೃತ್ತ ನ್ಯಾ. ಎಚ್‌ ಎನ್‌ ನಾಗಮೋಹನ್‌ ದಾಸ್‌ ಸಮಿತಿಯ ವರದಿ ಅನುಸಾರ ಮೀಸಲಾತಿ ಹೆಚ್ಚಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ನ್ಯಾ. ನಾಗಮೋಹನ್‌ ದಾಸ್‌ ಸಮಿತಿಯು ಅಗತ್ಯ ಪ್ರಾತಿನಿಧ್ಯ ಪರೀಕ್ಷೆ ಅನ್ವಯಿಸುವಲ್ಲಿ ಮೂಲಭೂತವಾಗಿ ಎಡವಿದೆ. ಅದು ಅನುಪಾತದ ಪ್ರಾತಿನಿಧ್ಯ ಕಲ್ಪಿಸಿದೆ” ಎಂದು ಆಕ್ಷೇಪಿಸಿದರು.

Also Read
ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯಿದೆ ಅನ್ವಯ ನೇಮಕಾತಿ: ಮುಂದಿನ ವಿಚಾರಣೆವರೆಗೆ ಕ್ರಮಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ

ಅರ್ಜಿದಾರರ ಪರ ವಕೀಲರಾದ ನಚಿಕೇತ್‌ ಮತ್ತು ರಂಗನಾಥ್‌ ಜೋಯಿಷ್‌ ಅವರು “ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬಾರದು. ಅರ್ಜಿಗಳನ್ನು ಅಂತಿಮವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ವಾದಿಸಲು ಸಿದ್ಧರಾಗಿದ್ದು, ಅದಕ್ಕೆ ಆದ್ಯತೆ ನೀಡಬೇಕು” ಎಂದರು. 

‘ಪರಿಶಿಷ್ಟ ಜಾತಿಗೆ ಶೇ 15ರಿಂದ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 3 ರಿಂದ ಶೇ7ರ ವರೆಗೂ ಮೀಸಲಾತಿ ಹೆಚ್ಚಳ ಮಾಡಿ ಒಟ್ಟು ಮೀಸಲಾತಿಯನ್ನು 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ 2023ರ ಜನವರಿ 12ರಂದು ಅಧಿಸೂಚನೆ ಹೊರಡಿಸಿದೆ. ಸರ್ಕಾರ ಅನುಮತಿ ಪಡೆಯದೇ ಮೀಸಲಾತಿ ಹೆಚ್ಚಳ ಮಾಡಿರುವುದು ಸಂವಿಧಾನ ಬಾಹಿರ. ಆದ್ದರಿಂದ, ಕಾಯಿದೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. 

Kannada Bar & Bench
kannada.barandbench.com