
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಎರಡು ವಾರಗಳ ಮಧ್ಯಂತರ ಜಾಮೀನು ಕೋರಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಮಾಜಿ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದೆಹಲಿ ಗಲಭೆ ಪಿತೂರಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕಡ್ಕಡ್ಡೂಮ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೈ ಅವರೆದುರು ಅಕ್ಟೋಬರ್ 15 ರಿಂದ ಅಕ್ಟೋಬರ್ 29ರವರೆಗೆ ಇಮಾಮ್ ಮಧ್ಯಂತರ ಜಾಮೀನು ಕೋರಿದರು.
ಗಮನಾರ್ಹ ಅಂಶವೆಂದರೆ, ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ವಿರುದ್ಧದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಶಾರ್ಜಿಲ್ ಇಮಾಮ್ ವಿರುದ್ಧ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರಿಗೆ ಬೇರೆ ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದ್ದರೂ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಜಾಮೀನು ದೊರೆಯುವುದು ಕ್ಲಿಷ್ಟಕರ ಎನಿಸುವ ಯುಎಪಿಎ ಕಾಯಿದೆಯಡಿ ದೂರು ದಾಖಲಿಸಿಕೊಂಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 2 ರಂದು ದೆಹಲಿ ಹೈಕೋರ್ಟ್ ಅವರಿಗೆ ನಿಯಮಿತ ಜಾಮೀನು ನಿರಾಕರಿಸಿತ್ತು . ಆ ಆದೇಶದ ವಿರುದ್ಧ ಅವರು ಸಲ್ಲಿಸಿರುವ ಮೇಲ್ಮನವಿ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ.
ತಮ್ಮ ಮಧ್ಯಂತರ ಜಾಮೀನು ಅರ್ಜಿಯಲ್ಲಿ, ಇಮಾಮ್ ತಾವೊಬ್ಬ ರಾಜಕೀಯ ಕೈದಿ ಮತ್ತು ವಿದ್ಯಾರ್ಥಿ ಹೋರಾಟಗಾರ ಎಂದು ಹೇಳಿದ್ದಾರೆ. ಬಹದ್ದೂರ್ಗಂಜ್ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಇಮಾಮ್ ಹೇಳಿದ್ದಾರೆ.