ಶಿರೂರು ಮಠಕ್ಕೆ ಬಾಲ ಸನ್ಯಾಸಿ ಪೀಠಾಧಿಪತಿ ಮಾಡಿರುವುದನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌

ಧಾರ್ಮಿಕ ವಿಧಿವಿಧಾನ ಮತ್ತು ಧರ್ಮದಲ್ಲಿ ಅಸ್ತಿತ್ವದಲ್ಲಿರುವ ನಂಬಿಕೆಗಳು ಎಲ್ಲಿಯವರೆಗೆ ವ್ಯಕ್ತಿಯ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲವೋ ಅಲ್ಲಿಯವರೆಗೆ ಅವುಗಳನ್ನು ಪಾಲಿಸುವ ಹೊಣೆಗಾರಿಕೆ ಇದೆ ಎಂದ ಪೀಠ.
Child Monks
Child MonksUnsplash

ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶಿರೂರು ಮಠಕ್ಕೆ ಬಾಲ ಸನ್ಯಾಸಿ ನೇಮಕ ಮಾಡಿರುವುದನ್ನು ಬುಧವಾರ ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಅಪ್ರಾಪ್ತರು ಸ್ವಾಮಿಯಾಗಬಾರದು ಎಂಬುದಕ್ಕೆ ಕಾನೂನಿನ ತೊಡಕು ಇಲ್ಲ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.

ಶಿರೂರು ಮಠದ ಪೀಠಾಧಿಪತಿಯನ್ನಾಗಿ 16 ವರ್ಷದ ಅನಿರುದ್ಧ ಸರಳತ್ತಾಯ (ಈಗ ವೇದವರ್ಧನ ತೀರ್ಥ) ಅವರನ್ನು ನೇಮಕ ಮಾಡಿದ್ದರ ಸಿಂಧುತ್ವ ಪ್ರಶ್ನಿಸಿ ಶಿರೂರು ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ ಲಾತವ್ಯ ಆಚಾರ್ಯ ಸೇರಿ ನಾಲ್ವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು ತೀರ್ಪು ನೀಡಿದೆ.

“ಬೌದ್ಧ ಧರ್ಮದಲ್ಲಿ ಅತ್ಯಂತ ಚಿಕ್ಕ ವಯಸ್ಸಿಗೆ ಮಕ್ಕಳು ಭಿಕ್ಕುಗಳಾಗುತ್ತಾರೆ. ಯಾವ ವಯಸ್ಸಿನಲ್ಲಿ ಸನ್ಯಾಸಿಯಾಗಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ನಿಯಮವಿಲ್ಲ. 18 ವರ್ಷಕ್ಕಿಂತ ಚಿಕ್ಕವರು ಸನ್ಯಾಸಿಗಳಾಗಬಾರದು ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಶಾಸನಬದ್ಧ ಕಾನೂನು ಇಲ್ಲ. 18 ವರ್ಷವಾಗುವುದಕ್ಕೂ ಮುಂಚಿತವಾಗಿ ಸನ್ಯಾಸಿಯಾಗಲು ಧರ್ಮದಲ್ಲಿ ಅವಕಾಶವಿದೆ ಎಂಬುದನ್ನು ಅಮಿಕಸ್‌ ಕ್ಯೂರಿ ಎಸ್‌ ಎಸ್‌ ನಾಗಾನಂದ್‌ ಅವರು ವಿಸ್ತೃತವಾಗಿ ವಿವರಿಸಿದ್ದಾರೆ. ಹೀಗಾಗಿ, ಅದಕ್ಕೆ ಯಾವುದೇ ನಿರ್ಬಂಧವಿಲ್ಲ. ಪ್ರಮುಖವಾದ ಧಾರ್ಮಿಕ ಚಟುವಟಿಕೆಗಳ ದೃಷ್ಟಿಯಿಂದ ಶಿರೂರುಮಠಕ್ಕೆ ಪೀಠಾಧಿಪತಿ ನೇಮಕ ಮಾಡುವ ಅಧಿಕಾರ ಸೋದೆ ವಾದಿರಾಜ ಮಠದ ಪೀಠಾಧಿಪತಿಗೆ ಇದೆ. ಈ ವಿಚಾರದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಲಾಗದು. ಅದಾಗ್ಯೂ, ಧಾರ್ಮಿಕ ವಿಧಿವಿಧಾನ ಮತ್ತು ಧರ್ಮದಲ್ಲಿ ಅಸ್ತಿತ್ವದಲ್ಲಿರುವ ನಂಬಿಕೆಗಳು ಎಲ್ಲಿಯವರೆಗೆ ವ್ಯಕ್ತಿಯ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲವೋ ಅಲ್ಲಿಯವರೆಗೆ ಅವುಗಳನ್ನು ಪಾಲಿಸುವ ಹೊಣೆಗಾರಿಕೆ ಇದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

“ಹಾಲಿ ಪ್ರಕರಣದಲ್ಲಿ ಬಹುಮಖ್ಯ ಧಾರ್ಮಿಕ ನಂಬಿಕೆಗಳ ಪ್ರಕಾರ ಶಿರೂರು ಮಠವು ಧಾರ್ಮಿಕ ವರ್ಗವಾಗಿದ್ದು, ಏಳನೇ ಪ್ರತಿವಾದಿಯಾದ ಅನಿರುದ್ಧ ಸರಳತ್ತಾಯ ಅವರು ಸನ್ಯಾಸಿಯಾಗಿದ್ದಾರೆ. ಅವರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಿಸಲಾಗಿದೆ. ಹೀಗಿರುವಾಗ ಮಠದ ಬಹುಮುಖ್ಯ ಧಾರ್ಮಿಕ ನಂಬಿಕೆಗಳು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿವೆ ಎಂದು ಊಹಿಸಿಕೊಳ್ಳಲಾಗದು” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

“ಯಾವುದೇ ರೀತಿಯಲ್ಲಿಯೂ ಅನಿರುದ್ಧ ಸರಳತ್ತಾಯ ಅವರನ್ನು ಪೀಠಾಧಿಪತಿಯನ್ನಾಗಿ ನೇಮಿಸಿರುವುದನ್ನು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೇಳಲಾಗದು. ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂಬುದರತ್ತ ಬೊಟ್ಟು ಮಾಡುವಲ್ಲಿ ಅರ್ಜಿದಾರರು ವಿಫಲರಾಗಿದ್ದಾರೆ. ಈ ಪರಂಪರೆಯು 800 ವರ್ಷಗಳಿಂದ ನಡೆದುಕೊಂಡು ಬಂದಿದೆ. ಸ್ವಾಮೀಜಿ ನೇಮಕಾತಿ ಪರಂಪರೆ 800 ವರ್ಷಗಳಿಂದ ಅಸ್ತಿತ್ವದಲ್ಲಿದ್ದು, ಇದು ಶ್ರೀ ಮಧ್ವಾಚಾರ್ಯರ ತತ್ವ ಮತ್ತು ಬೋಧನೆಯ ಸೂಚಕಗಳಾಗಿವೆ” ಎಂದಿರುವ ಪೀಠವು ಪಿಐಎಲ್‌ ವಜಾ ಮಾಡಿದೆ.

“ಆರ್ಷ್‌ ಮಾರ್ಗ್‌ ಸೇವಾ ಟ್ರಸ್ಟ್‌ ಮತ್ತು ಇತರರು ವರ್ಸಸ್‌ ಮಧ್ಯಪ್ರದೇಶ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ವಿಭಾಗೀಯ ಪೀಠವು ಬಹುಮುಖ್ಯ ಧಾರ್ಮಿಕ ನಂಬಿಕೆಗಳ ಬಗ್ಗೆ ಚರ್ಚಿಸಿದ್ದು, ಈ ಪ್ರಕರಣದ 72ನೇ ಪ್ಯಾರಾದಲ್ಲಿ ಹೇಳಿರುವಂತೆ ಈ ನ್ಯಾಯಾಲಯವು ವೇದಶಾಸ್ತ್ರದ ಮಾಂತ್ರಿಕತೆ ಹೊಂದಿಲ್ಲ. ಕಳೆದ 800 ವರ್ಷಗಳಿಂದ ನಡೆದುಕೊಂಡು ಬಂದಿರುವ ಶ್ರೀ ಶಿರೂರು ಮಠದ ಬಹುಮುಖ್ಯ ಧಾರ್ಮಿಕ ಆಚರಣೆಯಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಾಂವಿಧಾನಿಕ ಸಂಸ್ಥೆಯಾಗಿ ತನ್ನ ಪಾತ್ರವನ್ನು ಮೀರುವ ಪರಿಸ್ಥಿತಿ ಉದ್ಭವವಾಗುವುದಿಲ್ಲ. ಹೀಗಾಗಿ ಮನಿವಿಯನ್ನು ವಜಾ ಮಾಡಲಾಗಿದೆ” ಎಂದು ಹೇಳಿದೆ.

ಕಳೆದ ಗುರುವಾರ ಸುದೀರ್ಘವಾಗಿ ನಾಲ್ಕು ತಾಸುಗಳ ವಾದ-ಪ್ರತಿವಾದ ಆಲಿಸಿದ್ದ ಪೀಠವು ತೀರ್ಪು ಕಾಯ್ದಿರಿಸಿತ್ತು. ಅರ್ಜಿದಾರರ ಪರವಾಗಿ ವಾದಿಸಿದ್ದ ವಕೀಲ ಡಿ ಆರ್‌ ರವಿಶಂಕರ್‌ ಅವರು “ಅಪ್ರಾಪ್ತರಿಗೆ ಸನ್ಯಾಸವನ್ನು ಹೇರುವುದರಿಂದ ಅವರು ಐಹಿಕ ಭೋಗಗಳನ್ನು ಪರಿತ್ಯಾಗ ಮಾಡಬೇಕಾಗುತ್ತದೆ. ಇದು ಸಂವಿಧಾನದ 21 ಮತ್ತು 39 (ಇ) ಮತ್ತು (ಎಫ್‌) ವಿಧಿಯ ಉಲ್ಲಂಘನೆಯಾಗುತ್ತದೆ” ಎಂದಿದ್ದರು.

ಅಮಿಕಸ್‌ ಕ್ಯೂರಿಯಾಗಿರುವ ಹಿರಿಯ ವಕೀಲ ಎಸ್‌ ಎಸ್‌ ನಾಗಾನಂದ್‌ ಅವರು “18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸನ್ಯಾಸ ದೀಕ್ಷೆ ನೀಡುವುದಕ್ಕೆ ಯಾವುದೇ ಶಾಸನಬದ್ಧ, ಸಂವಿಧಾನಬದ್ಧವಾದ ನಿರ್ಬಂಧವಿಲ್ಲ ಮತ್ತು ಅದು ಅಪಾಯಕರ ಅಭ್ಯಾಸವಲ್ಲ” ಎಂದು ಪೀಠಕ್ಕೆ ವಿವರಿಸಿದ್ದರು.

“ಉಡುಪಿಯ ಅಷ್ಟಮಠಗಳಲ್ಲಿ ಬ್ರಹ್ಮಚಾರಿ, ಅವಿವಾಹಿತರಿಗೆ ಮಾತ್ರ ಸನ್ಯಾಸ ದೀಕ್ಷೆ ನೀಡುವ ಪರಂಪರೆಯಿದೆ. ಇದರ ಜೊತೆಗೆ ಪೀಠಾಧಿಪತಿಯಾಗುವವರ ಕೌಟುಂಬಿಕ ಹಿನ್ನೆಲೆ, ಶಾಸ್ತ್ರೀಯ ಅಧ್ಯಯನದ ಕಡೆಗಿನ ಅವರ ಒಲವು, ಶ್ರೀ ಜಯತೀರ್ಥ ರಚಿಸಿರುವ ಶ್ರೀಮನ್‌ ನ್ಯಾಯಸುಧಾ ಅಧ್ಯಯನ ಮಾಡುವ ಶಕ್ತಿ ಹೊಂದಿರುವುದು ಮತ್ತು ಶ್ರೀ ಮಧ್ವಾಚಾರ್ಯರ ತತ್ವಗಳನ್ನು ಪ್ರತಿಪಾದಿಸುವುದನ್ನು ವಿಶೇಷವಾಗಿ ಗಮನಿಸಲಾಗುತ್ತದೆ. ಇದರ ಜೊತೆಗೆ ಪೀಠದ ಮಠಾಧಿಪತಿ ಸ್ಥಾನಕ್ಕೆ ಅವರು ಹೊಂದುತ್ತಾರೆಯೇ ಎಂಬುದನ್ನು ಅವರ ಜಾತಕ ಪರಿಶೀಲಿಸುವ ಮೂಲಕ ಖಾತರಿಪಡಿಸಕೊಳ್ಳಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಪೀಠಾಧಿಪತಿ ಸ್ಥಾನಕ್ಕೆ ಪರಿಗಣಿಸಲ್ಪಟ್ಟವರು 18 ವರ್ಷಕ್ಕಿಂತ ಚಿಕ್ಕವರಾದರೆ ಅದು ಕಾಕತಾಳೀಯವಷ್ಟೆ” ಎಂದಿದ್ದರು.

Also Read
ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ನಾಲ್ಕು ಗಂಟೆಗಳ ಸುದೀರ್ಘ ವಾದ ಆಲಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಶ್ರೀ ಶಿರೂರು ಮಠಕ್ಕೆ ಪೀಠಾಧಿಪತಿಯನ್ನು ನೇಮಿಸುವ ಅಧಿಕಾರ ಸೋದೆ ವಾದಿರಾಜ ಮಠಕ್ಕೆ ಇದೆಯೇ ಎಂಬ ಅರ್ಜಿದಾರರ ಪ್ರಶ್ನೆಗೆ ಅಮಿಕಸ್‌ ಕ್ಯೂರಿ ನಾಗಾನಂದ್‌ ಅವರು “1917ರಲ್ಲೇ ಮದ್ರಾಸ್‌ ಹೈಕೋರ್ಟ್‌ ದ್ವಂದ್ವ ಮಠ ವ್ಯವಸ್ಥೆಯನ್ನು ಪರಿಗಣಿಸಿದೆ. ಈ ಸಂಪ್ರದಾಯದ ಪ್ರಕಾರ ದ್ವಂದ್ವ ಮಠದ ಪೈಕಿ ಒಂದು ಮಠದ ಮುಖ್ಯ ಪೀಠಾಧಿಪತಿ ತಮ್ಮ ಉತ್ತರಾಧಿಕಾರಿಯನ್ನು ಗುರುತಿಸದೇ ನಿಧನರಾದರೆ ಮತ್ತೊಂದು ಮಠದ ಮುಖ್ಯ ಪೀಠಾಧಿಪತಿಯು ಸದರಿ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಅಧಿಕಾರ ಹೊಂದಿರುತ್ತಾರೆ” ಎಂದು ವಿವರಿಸಿದ್ದರು.

“ಭಾರತೀಯ ಪ್ರೌಢವಾಸ್ಥೆ ಕಾಯಿದೆ ಪ್ರಕಾರ 18 ವರ್ಷದವರನ್ನು ಪ್ರಾಪ್ತ ವಯಸ್ಕರು ಎನ್ನಲಾಗುತ್ತದೆ. ಆದರೆ, ಧಾರ್ಮಿಕ ವಿಷಯಗಳಿಗೆ ಬಂದಾಗ 14 ವರ್ಷ ವಯಸ್ಸನ್ನು ಪರಿಗಣಿಸಲಾಗುತ್ತದೆ. ಶಾಸ್ತ್ರಗಳು ಹಾಗೂ ಶ್ಲೋಕಗಳ ಪ್ರಕಾರ 14 ವರ್ಷದ ದಾಟಿದವರು ವೈರಾಗ್ಯ ನಿರ್ಧಾರ ಕೈಗೊಳ್ಳಬಹುದು. ಬೌದ್ಧ ಧರ್ಮದವರಲ್ಲಿ ಚಿಕ್ಕ ಮಕ್ಕಳಿಗೇ ಸನ್ಯಾಸ ನೀಡಲಾಗುತ್ತದೆ. ಶಿರೂರು ಮಠಕ್ಕೆ ಮಠಾಧಿಪತಿ ಆಗಿರುವವರಿಗೆ 17 ವರ್ಷ. ತಂದೆ ಡಾಕ್ಟರೇಟ್ ಪಡೆದಿದ್ದು, ತಾಯಿಯೂ ವಿದ್ಯಾವಂತೆ. ಮಗನಿಗೂ ವಿರಕ್ತಿಯಲ್ಲಿ ಆಸಕ್ತಿಯಿದೆ. ಆ ಪ್ರಕಾರವೇ ಸನ್ಯಾಸ ದೀಕ್ಷೆ ನೀಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಲೋಪವೇನೂ ಆಗಿಲ್ಲ” ಎಂದು ಹೇಳಿದ್ದರು.

Related Stories

No stories found.
Kannada Bar & Bench
kannada.barandbench.com