ಕನ್ನಡಾಭಿಮಾನಕ್ಕೆ ಪಹಲ್ಗಾಮ್‌ ಘಟನೆ ಹೋಲಿಕೆ: ಪ್ರಕರಣ ರದ್ದತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಗಾಯಕ ಸೋನು ನಿಗಮ್‌

ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್‌ ಸಲ್ಲಿಸಿರುವ ಅರ್ಜಿಯು ನಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರ ರಜಾಕಾಲೀನ ಏಕಸದಸ್ಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ನಿಗದಿಯಾಗಿದೆ.
Sonu Nigam & Karnataka HC
Sonu Nigam & Karnataka HC
Published on

ಕನ್ನಡಾಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ದೂರು ಮತ್ತು ಆನಂತರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್‌ ಸಲ್ಲಿಸಿರುವ ಅರ್ಜಿಯು ನಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರ ರಜಾಕಾಲೀನ ಏಕಸದಸ್ಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ನಿಗದಿಯಾಗಿದೆ.

ಸೋನು ನಿಗಮ್‌ ಅರ್ಜಿಯಲ್ಲಿ ದೂರುದಾರ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ ಎ ಧರ್ಮರಾಜ ಮತ್ತು ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಲಾಗಿದೆ.

ಮೇ 5ರಂದು ಎಫ್‌ಐಆರ್‌ ಸಂಬಂಧ ತನಿಖೆಗೆ ಹಾಜರಾಗುವಂತೆ ಗಾಯಕ ಸೋನು ನಿಗಮ್‌ಗೆ ಅವಲಹಳ್ಳಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋನು ನಿಗಮ್‌ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಏಪ್ರಿಲ್‌ 25 ಮತ್ತು 26ರಂದು ಸೋನು ನಿಗಮ್‌ ಅವರು ಈಸ್ಟ್‌ ಪಾಯಿಂಟ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಅಂಡ್‌ ಟೆಕ್ನಾಲಜಿಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಕನ್ನಡಿಗರ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಮೇ 2ರಂದು ದೂರು ನೀಡಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಮೇ 3ರಂದು ಎಫ್‌ಐಆರ್‌ ದಾಖಲಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳಾದ 351 (2) (ಕ್ರಿಮಿನಲ್‌ ಬೆದರಿಕೆ), 353 (ಸಾರ್ವಜನಿಕವಾಗಿ ಕಿರಿಕಿರಿ ಉಂಟು ಮಾಡುವ ಹೇಳಿಕೆ), 352(1) (ಉದ್ದೇಶಪೂರ್ವಕವಾಗಿ ಅವಮಾನ) ಅಡಿ ಧರ್ಮರಾಜ ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ.

Kannada Bar & Bench
kannada.barandbench.com