
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ಪ್ರಕಟಿಸಿದ್ದು, ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಇದರೊಂದಿಗೆ ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಬುಧವಾರ ತೀರ್ಪು ಪ್ರಕಟಿಸಬೇಕಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಕೆಲವು ಸ್ಪಷ್ಟನೆ ಕೇಳಿ ತೀರ್ಪನ್ನು ಇಂದಿಗೆ ಮುಂದೂಡಿದ್ದರು.
ತೀರ್ಪು ಪ್ರಕಟಗೊಳ್ಳುತ್ತಿದ್ದಂತೆ ಪ್ರಜ್ವಲ್ ತಲೆ ತಗ್ಗಿಸಿ, ಕಣ್ಣೀರು ಹಾಕಿದರು. ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಾಸಿಕ್ಯೂಷನ್ ಪರ ಬಿ ಎನ್ ಜಗದೀಶ್, ಅಶೋಕ್ ನಾಯಕ್ ಮತ್ತು ಪ್ರಜ್ವಲ್ ಪರ ಅರುಣ್ ಹಾಗೂ ವಿಪುಲ್ ಜೈನ್ ಹಾಜರಿದ್ದರು.
ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷದ ಅಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು. ಪ್ರಜ್ವಲ್ ರೇವಣ್ಣ ವಿದೇಶದಿಂದ ಮರಳುತ್ತಿದ್ದಂತೆ 2024ರ ಮೇ 21ರಂದು ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಅಂದಿನಿಂದ ಇಂದಿನವರೆಗೂ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮನೆಕೆಲಸದಾಕೆಯು ಎರಡು ದೂರು ನೀಡಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮತ್ತು ಮಗನ ಶಾಲೆಗೆ ಸೇರಿಸಲು ಸಹಾಯ ಮಾಡುವುದಾಗಿ ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸೇರಿದಂತೆ ಪ್ರಜ್ವಲ್ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗಿವೆ.