V K Sasikala and Karnataka HC
V K Sasikala and Karnataka HC

ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಪ್ರಕರಣ: ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್‌ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ಒದಗಿಸಲು ಎರಡು ಕೋಟಿ ಲಂಚ ಪಡೆಯಲಾಗಿದೆ ಎಂದು 2017ರಲ್ಲಿ ಅಂದಿನ ರಾಜ್ಯ ಬಂಧೀಖಾನೆ ಇಲಾಖೆ ಡಿಐಜಿಯಾಗಿದ್ದ ಡಿ ರೂಪ ಆರೋಪಿಸಿದ್ದರು.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಶಶಿಕಲಾ ಅವರಿಗೆ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂಪಾಯಿ ಲಂಚ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿದ್ದ ಎಫ್‌ಐಆರ್ ರದ್ದು ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ.

ಸತ್ಯನಾರಾಯಣ ರಾವ್ 2018ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ರಾಜ್ಯ ಸರ್ಕಾರವು 2021ರ ಡಿಸೆಂಬರ್‌ 30ರಂದು ಹೊರಡಿಸಿದ ಆದೇಶದಲ್ಲಿ ಅರ್ಜಿದಾರರನ್ನು ನಿರಪರಾಧಿ ಎಂಬುದಾಗಿ ಹೇಳಲಾಗಿದೆ. ತನಿಖಾಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಅರ್ಜಿದಾರರ ಹೆಸರಿಲ್ಲ. ಇತರೆ ಇಬ್ಬರ ವಿರುದ್ಧ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಹೀಗಾಗಿ, ಈ ತಕರಾರು ಅರ್ಜಿಯನ್ನು ಬಾಕಿಯಿಟ್ಟುಕೊಳ್ಳುವ ಅಗತ್ಯವಿಲ್ಲ. ಅದರಂತೆ ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಪೀಠ ತಿಳಿಸಿದೆ.

ಅಲ್ಲದೆ, ತಮ್ಮ ವಿರುದ್ಧ ಸರ್ಕಾರ ಯಾವುದಾದರೂ ಕ್ರಮ ಜರುಗಿಸಿದ ಪಕ್ಷದಲ್ಲಿ ಅರ್ಜಿದಾರರು ಸೂಕ್ತ ನ್ಯಾಯಾಲಯದ ಮೊರೆ ಹೋಗಲು ಸ್ವತಂತ್ರರಿದ್ದಾರೆ ಎಂದು ಆದೇಶದಲ್ಲಿ ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ಒದಗಿಸಲು ಎರಡು ಕೋಟಿ ಲಂಚ ಪಡೆಯಲಾಗಿದೆ ಎಂದು 2017ರಲ್ಲಿ ಅಂದಿನ ರಾಜ್ಯ ಬಂಧೀಖಾನೆ ಇಲಾಖೆ ಡಿಐಜಿಯಾಗಿದ್ದ ಡಿ ರೂಪ ಆರೋಪಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರನ್ನು ಸರ್ಕಾರ ನೇಮಿಸಿತ್ತು. ವಿಚಾರಣೆ ಪೂರ್ಣಗೊಳಿಸಿದ್ದ ವಿನಯ್ ಕುಮಾರ್‌ ಅವರು 2017ರ ಅಕ್ಟೋಬರ್‌ 21ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು.

Also Read
[ಶಶಿಕಲಾ ಐಷಾರಾಮಿ ಸೆರೆವಾಸ] ಇಬ್ಬರು ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಹೈಕೋರ್ಟ್‌ಗೆ ಮಾಹಿತಿ

ಆ ವರದಿಯನ್ನು 2018ರ ಫೆಬ್ರವರಿ 26ರಂದು ಸಮ್ಮತಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಕರಣ ಕುರಿತು ತನಿಖೆ ನಡೆಸುವಂತೆ ಎಸಿಬಿಗೆ ನಿರ್ದೇಶಿಸಿದ್ದರು. ಅದರಂತೆ ಎಸಿಬಿ ಪೊಲೀಸರು ಮಾರ್ಚ್‌ 3ರಂದು ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2018ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಸತ್ಯನಾರಾಯಣ ರಾವ್ ಅವರು ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ತಾನು ಯಾವುದೇ ಲಂಚ ಪಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

Related Stories

No stories found.
Kannada Bar & Bench
kannada.barandbench.com