ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆ ಕೋರಿದ ರಾಜ್ಯ ಸರ್ಕಾರ; ಸಿಜೆ ನಿರ್ಧರಿಸಬೇಕು ಎಂದ ಹೈಕೋರ್ಟ್‌

ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಅವರು “ಸಂತ್ರಸ್ತೆಯರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆ ನಡೆಸಬೇಕು” ಎಂದರು.
Prajwal Revanna & Karnataka HC
Prajwal Revanna & Karnataka HC
Published on

ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳನ್ನು ಸಂತ್ರಸ್ತೆಯರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಗೌಪ್ಯವಾಗಿ (ಇನ್‌ ಕ್ಯಾಮೆರಾ) ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರವು ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮೌಖಿಕವಾಗಿ ಮನವಿ ಮಾಡಿತು.

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಬೆಂಗಳೂರಿನ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರಜ್ವಲ್‌ ಪರವಾಗಿ ಹಾಜರಾಗಿದ್ದ ವಕೀಲ ಜಿ ಅರುಣ್‌ ಅವರು ಆರೋಪ ಪಟ್ಟಿ ಸಲ್ಲಿಕೆಯಾಗಿದೆ ಎಂದರು. ಆ ಮೂಲಕ ಜಾಮೀನು ನೀಡಲು ಅವಕಾಶವಿದೆ ಎಂದು ತಿಳಿಸಲು ಪ್ರಯತ್ನಿಸಿದರು. ಆಗ ನ್ಯಾಯಾಲಯವು, ಅನುಗ್ರಹ ತೋರುವ ಪ್ರಕರಣ ಇದಲ್ಲ ಎಂದಿತು.

Also Read
ಅತ್ಯಾಚಾರ ಪ್ರಕರಣ: ರೇವಣ್ಣ ವಿರುದ್ಧ ಒಂದು, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮೂರು ಆರೋಪ ಪಟ್ಟಿ ಸಲ್ಲಿಕೆ

ಕೊನೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಅವರು “ಸಂತ್ರಸ್ತೆಯರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಜಾಮೀನು ಅರ್ಜಿಗಳನ್ನು ಗೌಪ್ಯ ವಿಚಾರಣೆ ನಡೆಸಬೇಕು” ಎಂದರು.

ಆಗ ಪೀಠವು “ಮುಖ್ಯ ನ್ಯಾಯಮೂರ್ತಿಗಳು ಈ ಸಂಬಂಧ ಆದೇಶ ಮಾಡಬೇಕು. ಮುಂದಿನ ವಿಚಾರಣೆಯಲ್ಲಿ ನೋಡೋಣ” ಎಂದರು.

ಅಂತಿಮವಾಗಿ ವಿಚಾರಣೆಯನ್ನು ಸೆಪ್ಟೆಂಬರ್‌ 5ಕ್ಕೆ ಮುಂದೂಡಿತು.

Kannada Bar & Bench
kannada.barandbench.com