

ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ ಆರ್ ಪುರ ಶಾಸಕ ಬೈರತಿ ಬಸವರಾಜ್ಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಮಾರ್ಚ್ 12ರಂದು ಹೊರಡಿಸಿದ ಆದೇಶ ರದ್ದು ಕೋರಿ ಸಿಐಡಿ ತನಿಖಾಧಿಕಾರಿಯು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ ಆರ್ ಪುರ ಶಾಸಕ ಬಿ ಎ ಬಸವರಾಜ್ ಅವರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಪ್ರಕರಣ ಸಂಬಂಧ ಅರ್ಜಿದಾರರನ್ನು ಈಗಾಗಲೇ ಪೊಲೀಸ್ ವಶದಲ್ಲಿಟ್ಟುಕೊಂಡು ನಡೆಸಿರುವ ವಿಚಾರಣೆ ಪೂರ್ಣಗೊಂಡಿದೆ. ಮತ್ತೆ ಪೊಲೀಸ್ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂಬ ಅಂಶ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಿಂದ ತಿಳಿಯಲಿದೆ. ಆದ್ದರಿಂದ, ಅರ್ಜಿದಾರರಿಗೆ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾರ್ಚ್ 12ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಿತ್ತು.
ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ನಡೆದಿತ್ತು. ಮೃತನ ತಾಯಿ ವಿಜಯಲಕ್ಷ್ಮಿ ನೀಡಿದ್ದ ದೂರು ಆಧರಿ ಭಾರತೀನಗರ ಠಾಣೆಯಲ್ಲಿ ಕೊಲೆ ಅಪರಾಧ ಸಂಬಂಧ ಎಫ್ಐಆರ್ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯು ಸಿಐಡಿ ಪೊಲೀಸರಿಗೆ ವರ್ಗಾವಣೆಯಾಗಿತ್ತು.
ತನಿಖೆ ನಡೆಸಿದ್ದ ಐದನೇ ಆರೋಪಿ ಬೈರತಿ ಬಸವರಾಜ್ ಮತ್ತು 18ನೇ ಆರೋಪಿಯನ್ನು ಹೊರತುಪಡಿಸಿ, 4,236 ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನಂತರ ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ 2026ರ ಫೆಬ್ರವರಿ 10ರಂದು ಹೈಕೊರ್ಟ್ ತೀರ್ಪು ನೀಡಿತ್ತು. ಫೆಬ್ರವರಿ 12ರಂದು ಸುಪ್ರಿಂ ಕೋರ್ಟ್ ಸಹ ಬೈರತಿ ಬಸವರಾಜ್ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರಿಂದ ಅಂದೇ ಬೈರತಿ ಬಸವರಾಜ್ ಬಂಧನವಾಗಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾರ್ಚ್ 12ರಂದು ಜಾಮೀನು ಮಂಜೂರು ಮಾಡಿತ್ತು.