ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು: ಡಿಸಿ ವಿಚಾರಣಾ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಸೆಪ್ಟೆಂಬರ್‌ 6ರಂದು ಪರಿಹಾರ ಹೆಚ್ಚಳ ಮಾಡುವ ಕುರಿತು ನ್ಯಾಯಾಲಯ ನೀಡಿದ್ದ ಆದೇಶದ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠವು ನಿರ್ದೇಶಿಸಿದೆ.
Karnataka High Court, students with national flag
Karnataka High Court, students with national flag

ತುಮಕೂರು ತಾಲೂಕಿನ ಕರೀಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಧ್ವಜಸ್ತಂಭ ನೆಡುವಾಗ ಸಂಭವಿಸಿದ ವಿದ್ಯುತ್ ಅವಘಡದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಡೆಸಿರುವ ವಿಚಾರಣೆಯ ವರದಿ ಸಲ್ಲಿಸಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಎರಡು ವಾರ ಕಾಲಾವಕಾಶ ನೀಡಿದೆ.

ಅಲ್ಲದೇ, ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ಚಂದನ್ ಪಾಲಕರಿಗೆ ಈಗಾಗಲೇ ನೀಡಿರುವ 1 ಲಕ್ಷ ರೂಪಾಯಿ ಪರಿಹಾರ ಹೆಚ್ಚಳ ಮಾಡುವ ಕುರಿತು ಕಳೆದ ಸೆಪ್ಟೆಂಬರ್‌ 6ರಂದು ನ್ಯಾಯಾಲಯ ನೀಡಿದ್ದ ಆದೇಶದ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೊಪ್ಪಳ ನಗರದ ಬನ್ನಿಕಟ್ಟಿ ಬಳಿಯ ಬಿಸಿಎಂ ಹಾಸ್ಟೆಲ್‌ನಲ್ಲಿ 2019ರ ಆಗಸ್ಟ್‌ 15ರಂದು ಧ್ಜಜಸ್ತಂಭ ತೆರವುಗೊಳಿಸುವ ವೇಳೆ ವಿದ್ಯುತ್ ತಂತಿ ತಗುಲಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಕರೀಕೆರೆ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ವಿದ್ಯಾರ್ಥಿ ಚಂದನ್ ಪಾಲಕರಿಗೆ ಪರಿಹಾರ ಪಾವತಿಸಲಾಗಿದೆಯೇ ಎಂಬ ಪೀಠದ ಪ್ರಶ್ನೆಗೆ ಮೃತ ವಿದ್ಯಾರ್ಥಿಯ ಪಾಲಕರಿಗೆ 1 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ ಎಂದು ಸರ್ಕಾರಿ ವಕೀಲರು ಉತ್ತರಿಸಿದರು.

Also Read
ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು ಪ್ರಕರಣ: ಪರಿಹಾರ ವಿತರಿಸಲು ಸರ್ಕಾರಕ್ಕೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್‌

ಕೊಪ್ಪಳದ ದುರ್ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಈ ಪ್ರಕರಣದಲ್ಲೂ ಅದೇ ರೀತಿ ಪರಿಹಾರ ಪಾವತಿಸಬೇಕು. ಗಾಯಗೊಂಡಿರುವ ಶಶಾಂಕ್ ಹಾಗೂ ಪವನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಘಟನೆ ಕುರಿತು ಜಿಲ್ಲಾಧಿಕಾರಿಯಿಂದ ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಹೈಕೋರ್ಟ್ ಆದೇಶಿಸಿದೆ. ಈ ಆದೇಶ ಪಾಲನೆ ಮಾಡಲಾಗಿದೆಯೇ ಎಂದು ಪ್ರಶ್ನಿಸಿತು. ಸರ್ಕಾರದ ಪರ ವಕೀಲರು, ಜಿಲ್ಲಾಧಿಕಾರಿ ವಿಚಾರಣೆ ಪೂರ್ಣಗೊಂಡಿದ್ದು, ಎರಡು ವಾರ ಕಾಲಾವಕಾಶ ನೀಡಿದರೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದರು.

ಇದನ್ನು ಪರಿಗಣಿಸಿದ ಪೀಠವು ಘಟನೆ ಕುರಿತು ಜಿಲ್ಲಾಧಿಕಾರಿ ನಡೆಸಿರುವ ವಿಚಾರಣೆಯ ವರದಿ ಹಾಗೂ ಕೈಗೊಂಡ ಕ್ರಮಗಳ ವರದಿಯ ಜತೆಗೆ ಮೃತ ವಿದ್ಯಾರ್ಥಿಯ ಪಾಲಕರಿಗೆ ಪರಿಹಾರ ಮೊತ್ತ ಹೆಚ್ಚಳ ಮಾಡಿದ ಬಗ್ಗೆ ಮತ್ತು ಗಾಯಗೊಂಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಿರುವ ಕುರಿತ ಮಾಹಿತಿ ಒಳಗೊಂಡ ಸಮಗ್ರ ವರದಿಯನ್ನು ಎರಡು ವಾರಗಳ ಒಳಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು

Related Stories

No stories found.
Kannada Bar & Bench
kannada.barandbench.com