ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌: ಜುಬೈರ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್‌

ಜುಬೈರ್‌ ಟ್ವೀಟ್‌ ಮಾಡುವಂತಿಲ್ಲ ಎಂಬ ಷರತ್ತು ವಿಧಿಸಿ ಸರ್ವೋಚ್ಚ ನ್ಯಾಯಾಲಯವು ಜುಬೈರ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Mohammad Zubair and SC
Mohammad Zubair and SCTwitter

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಆಲ್ಟ್‌ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೈರ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಎಫ್‌ಐಆರ್‌ ರದ್ದತಿ ಕೋರಿ ಜುಬೈರ್‌ ಸಲ್ಲಿಸಿರುವ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ ಕೆ ಮಹೇಶ್ವರಿ ಅವರ ನೇತೃತ್ವದ ವಿಭಾಗೀಯ ಪೀಠವು ಜುಬೈರ್‌ಗೆ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಹೆಚ್ಚಿನ ವಿಚಾರಣೆಗೆ ಸಾಮಾನ್ಯ ಪೀಠಕ್ಕೆ ವರ್ಗಾಯಿಸಿದೆ.

“ಸೀತಾಪುರ ಜೆಎಂಎಫ್‌ಸಿ ನ್ಯಾಯಾಲಯವು ಜುಲೈ 7ರಂದು ಮಾಡಿರುವ ಆದೇಶವನ್ನು ಇಂಗ್ಲಿಷ್‌ಗೆ ಭಾಷಾಂತರಿಸಿ, ಜಾಮೀನು ಮನವಿಯ ಕೋರಿಕೆಗಳನ್ನು ತಿರಸ್ಕರಿಸಿರುವ ಆದೇಶದ ಜೊತೆಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಜೆಎಂಎಫ್‌ಸಿ ವಿಧಿಸುವ ಷರತ್ತುಗಳಿಗೆ ಒಳಪಟ್ಟು ಆರೋಪಿಗೆ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.

ಸೀತಾಪುರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ವಿಧಿಸುವ ಷರತ್ತುಗಳ ಜೊತೆಗೆ ಆರೋಪಿಯು ಟ್ವೀಟ್‌ ಮಾಡುವಂತಿಲ್ಲ. ವ್ಯಾಪ್ತಿ ಹೊಂದಿರುವ ನ್ಯಾಯಾಲಯದ ಸರಹದ್ದಿನಿಂದ ಹೊರಹೋಗುವಂತಿಲ್ಲ ಎಂಬ ಷರತ್ತುಗಳನ್ನು ಸುಪ್ರೀಂ ಕೋರ್ಟ್‌ ವಿಧಿಸಿದೆ.

ದೆಹಲಿ ಪೊಲೀಸರು ದಾಖಲಿಸಿರುವ ಮತ್ತೊಂದು ಪ್ರಕರಣದಲ್ಲಿ ಸಿಲುಕಿರುವ ಜುಬೈರ್‌ ಅವರು ದೆಹಲಿ ಪೊಲೀಸರಿಗೆ ಶರಣಾಗಬೇಕಿದೆ. ಮಹಾಂತ ಬಜರಂಗ ಮುನಿ, ಯತಿ ನರಸಿಂಗಾನಂದ ಮತ್ತು ಸ್ವಾಮಿ ಆನಂದ್‌ ಸ್ವರೂಪ್‌ ಅವರನ್ನು ದ್ವೇಷ ಹರಡುವವರು ಎಂದು ಟ್ವೀಟ್‌ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಉತ್ತರ ಪ್ರದೇಶದ ಸೀತಾಪುರ ಪೊಲೀಸರು ಜುಬೈರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಜುಬೈರ್‌ ವಿರುದ್ಧ ಐಪಿಸಿ ಸೆಕ್ಷನ್‌ 295A (ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿ ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕಾಗಿ ಕೆರಳಿಸುವ ಕೆಲಸ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 67 (ವಿದ್ಯುನ್ಮಾನ ಮಾದರಿಯಲ್ಲಿ ಆಕ್ಷೇಪಾರ್ಹ ವಿಚಾರಗಳ ವರ್ಗಾವಣೆ) ಅಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ ರದ್ದುಪಡಿಸುವಂತೆ ಜುಬೈರ್‌ ಅವರು ಅಲಾಹಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಇದಕ್ಕೆ ಹೈಕೋರ್ಟ್‌ ನಿರಾಕರಿಸಿದ್ದರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಇದೇ ಪ್ರಕರಣದಲ್ಲಿ ಗುರುವಾರ ಜುಬೈರ್‌ ಅವರಿಗೆ ಜಾಮೀನು ನಿರಾಕರಿಸಿದ್ದ ಸೀತಾಪುರ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಆರೋಪಿಯು ಸಾಕ್ಷಿಗಳನ್ನು ಪ್ರಭಾವಿಸುವ ಸಾಧ್ಯತೆಯ ಜೊತೆಗೆ ಅಪರಾಧಗಳನ್ನು ಪುನರಾವರ್ತಿಸುವ ಸಾಧ್ಯತೆಯಿಂದ ಜಾಮೀನು ನೀಡಲಾಗದು ಎಂದು ನ್ಯಾಯಾಧೀಶ ಅಭಿನವ್‌ ಶ್ರೀವಾಸ್ತವ ಹೇಳಿದ್ದರು.

ಸ್ಥಳೀಯ ನ್ಯಾಯಾಲಯವು ಜುಬೈರ್‌ಗೆ ಜಾಮೀನು ತಿರಸ್ಕರಿಸಿದೆ. ಆದರೆ, ಈ ಅಂಶವನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಪ್ರಾಥಮಿಕ ಆಕ್ಷೇಪಣೆಯನ್ನು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಎತ್ತಿದರು.

Related Stories

No stories found.
Kannada Bar & Bench
kannada.barandbench.com