ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಇಂತಹ ಪ್ರಕರಣಗಳ ಬಗ್ಗೆ ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದ ಪೀಠ ಹಾಗೆ ಘೋಷಿಸದೇ ಇರುವುದರಿಂದ ಅರ್ಜಿದಾರರ ಯಾವ ಮೂಲಭೂತ ಹಕ್ಕಿನ ಮೇಲೆ ಪರಿಣಾಮ ಉಂಟಾಗಿದೆ ಎಂಬುದಾಗಿ ಪ್ರಶ್ನಿಸಿತು.
ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌
Published on

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ [ಗೋವಂಶ್ ಸೇವಾ ಸದನ್ ಮತ್ತಿತರರು ಹಾಗೂ ಭಾರತ ಒಕ್ಕೂಟ ನಡುವಣ ಪ್ರಕರಣ].

ಇಂತಹ ಪ್ರಕರಣಗಳ ಬಗ್ಗೆ ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಭಯ್ ಎಸ್ ಓಕಾ ಅವರಿದ್ದ ಪೀಠ ಹಾಗೆ ಘೋಷಿಸದೇ ಇರುವುದರಿಂದ ಅರ್ಜಿದಾರರ ಯಾವ ಮೂಲಭೂತ ಹಕ್ಕಿನ ಮೇಲೆ ಪರಿಣಾಮ ಉಂಟಾಗಿದೆ ಎಂಬುದಾಗಿ ಪ್ರಶ್ನಿಸಿತು.

Also Read
ಗೋ ಹತ್ಯೆ ನಿಷೇಧ ಕಾಯಿದೆ: ನವೆಂಬರ್‌ 15ಕ್ಕೆ ಅಂತಿಮ ವಿಚಾರಣೆ ನಿಗದಿಪಡಿಸಿದ ಕರ್ನಾಟಕ ಹೈಕೋರ್ಟ್‌

"ಇದು ನ್ಯಾಯಾಲಯದ ಕೆಲಸವೇ?... ದಂಡ ವಿಧಿಸಲು ನಮ್ಮನ್ನು ಒತ್ತಾಯಿಸುವಂತಹ ಇಂತಹ ಅರ್ಜಿಗಳನ್ನು ನೀವೇಕೆ ಸಲ್ಲಿಸುತ್ತೀರಿ? ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ? ನೀವು ನ್ಯಾಯಾಲಯಕ್ಕೆ ಬಂದಿದ್ದೀರಿ ಎಂದು ಕಾನೂನನ್ನು ಗಾಳಿಗೆ ತೂರಲಾಗುತ್ತದೆಯೇ?" ಎಂದು ನ್ಯಾಯಾಲಯ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ ಎಂದರು.

ಆದರೆ ನ್ಯಾಯಾಲಯ ಮನವಿ ಪುರಸ್ಕರಿಸಲು ಒಪ್ಪದೇ ಇದ್ದುದರಿಂದ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರು ನಿರ್ಧರಿಸಿದರು.

Kannada Bar & Bench
kannada.barandbench.com