ಪ್ರಧಾನಿ ಮೋದಿ ಹೆಸರು ತಿರುಚಿದ ಆರೋಪ: ಕಾಂಗ್ರೆಸ್ ನಾಯಕ ಖೇರಾ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ

ಉಳಿದ ಮಾನಹಾನಿ ಪ್ರಕರಣಗಳಲ್ಲೂ ಖೇರಾ ಪದೇ ಪದೇ ಕ್ಷಮೆ ಯಾಚಿಸಿರುವುದನ್ನು ಗಮನಿಸಿದ ಪೀಠ ಅಪರಾಧದಿಂದ ನುಣುಚಿಕೊಳ್ಳಲು ಆಗದು ಎಂದಿತು.
ಪವನ್ ಖೇರಾ ಮತ್ತು ಸುಪ್ರೀಂ ಕೋರ್ಟ್
ಪವನ್ ಖೇರಾ ಮತ್ತು ಸುಪ್ರೀಂ ಕೋರ್ಟ್ಫೇಸ್ ಬುಕ್

ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ [ಪವನ್ ಖೇರಾ ಮತ್ತು ಉತ್ತರಪ್ರದೇಶ ಸರ್ಕಾರ ನಡುವಣ ಪ್ರಕರಣ].

ಉಳಿದ ಮಾನಹಾನಿ ಪ್ರಕರಣಗಳಲ್ಲೂ ಖೇರಾ ಪದೇ ಪದೇ ಕ್ಷಮೆ ಯಾಚಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಅಪರಾಧವನ್ನು ಕಡೆಗಣಿಸಲು ಆಗದು ಎಂದಿತು.

ಇಂದು ಸಂಕ್ಷಿಪ್ತ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಗವಾಯಿ, "ನೀವು ಕ್ಷಮೆಯಾಚಿಸುತ್ತಲೇ ಇರುತ್ತೀರಿ" ಎಂದರು. ಆಗ ನ್ಯಾಯಮೂರ್ತಿ ಮೆಹ್ತಾ ಅವರು "ಅಪರಾಧದಿಂದ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ" ಎಂದು ತಿಳಿಸಿದರು

ಖೇರಾ ಅವರ ವಕೀಲ, ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ಅವರು ಪ್ರತಿಕ್ರಿಯೆ ಸಲ್ಲಿಸಲು ಸಮಯ ಕೋರಿದಾಗ, ಪೀಠವು ಪ್ರಕರಣ ಪರಿಗಣಿಸಲು ಒಲವು ಹೊಂದಿಲ್ಲ ಎಂದಿತು.

ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಪಟ್ಟಿ ಸಿದ್ಧವಾಗಿರುವುದರಿಂದ ವಿಚಾರಣೆ ಮುಂದುವರೆಯಬೇಕು ಎಂದು ಹೇಳಿದರು.

ಪ್ರಸ್ತುತ ಮನವಿಯ ಬಗ್ಗೆ ಸುಪ್ರೀಂ ಕೋರ್ಟ್ 2023ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು.  ಅಲಾಹಾಬಾದ್ ಹೈಕೋರ್ಟ್ ಆಗಸ್ಟ್ 17ರಂದು ಖೇರಾ ಅವರ ಮನವಿಯನ್ನು ವಜಾಗೊಳಿಸಿತ್ತು.

ಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗೌತಮ್ ಅದಾನಿ- ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ಜಂಟಿ ಸಂಸದೀಯ ತನಿಖೆ ನಡೆಸುವಂತೆ ಖೇರಾ ಅವರು ಒತ್ತಾಯಿಸಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ಉದ್ದೇಶಪೂರ್ವಕವಾಗಿ ಅವಮಾನ ಉಂಟುಮಾಡುವಂತಹ ಮಾತುಗಳನ್ನಾಡಿದ ಆರೋಪ ಅವರ ವಿರುದ್ಧ ಕೇಳಿಬಂದಿತ್ತು.

"(ಮಾಜಿ ಪ್ರಧಾನಿ) ನರಸಿಂಹರಾವ್ ಅವರು ಜೆಪಿಸಿ (ಜಂಟಿ ಸಂಸದೀಯ ಸಮಿತಿ) ರಚಿಸುವುದಾದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಜೆಪಿಸಿ ರಚನೆ ಮಾಡುವುದಾದರೆ, ನರೇಂದ್ರ ಗೌತಮ್‌ ದಾಸ್... ಕ್ಷಮಿಸಿ ದಾಮೋದರ ದಾಸ್ ಮೋದಿ ಅವರಿಗೆ ಜೆಪಿಸಿ ರಚಿಸಲು ಏನು ಸಮಸ್ಯೆ " ಎಂದು ಕೇಳಿದ್ದರು. 

ಪ್ರಧಾನಿ ಅವರ ತಂದೆ ದಾಮೋದರ್‌ ದಾಸ್‌ ಹೆಸರನ್ನು ಪ್ರಸ್ತಾಪಿಸುವ ಕಡೆ ಗೌತಮ್‌ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಸ್ತಾಪಿಸಲಾಗಿದೆ ಎಂದು ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.

ಕಳೆದ ವರ್ಷ ಫೆಬ್ರವರಿ 23ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಭೆಗೆ ತೆರಳಲು ಛತ್ತೀಸ್‌ಗಢದ ರಾಯ್‌ಪುರಕ್ಕೆ ವಿಮಾನವೇರಿದ್ದ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಿಂದ ಬಂಧಿಸಿ ಪೊಲೀಸರು ಕರೆದೊಯ್ದಿದ್ದರು.

ಅಸ್ಸಾಂನಲ್ಲಿಯೂ ಅವರ ವಿರುದ್ಧ ದಾಖಲಾದ ಎಫ್ಐಆರ್ ಆಧರಿಸಿ ಅಲ್ಲಿನ ಪೊಲೀಸರು ಅವರನ್ನು ವಿಮಾನದಿಂದ ಕೆಳಗಿಳಿಸಿ ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಅವರಿಗೆ ಮಧ್ಯಂತರ ರಕ್ಷಣೆ ದೊರೆತಿತ್ತು. ದೆಹಲಿ, ಉತ್ತರ ಪ್ರದೇಶ ಹಾಗೂ ಅಸ್ಸಾಂನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ಒಗ್ಗೂಡಿಸಿ ಲಖನೌಗೆ ವರ್ಗಾಯಿಸುವಂತೆ ಆದೇಶಿಸಿತ್ತು.

ನಂತರ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಮನವಿ ವಜಾಗೊಳಿಸಿದ ಹೈಕೋರ್ಟ್, ವಿಚಾರಣೆಯ ಸಮಯದಲ್ಲಿ ಪುರಾವೆಗಳನ್ನು ಪರಿಶೀಲಿಸಬೇಕಿದೆ ಎಂದಿತ್ತು.

Related Stories

No stories found.
Kannada Bar & Bench
kannada.barandbench.com