

ವ್ಯಕ್ತಿಯೊಬ್ಬರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಉದ್ದೇಶದಿಂದ ಮಾದಕ ವಸ್ತು ಇರಿಸಿದ್ದ ಆರೋಪದಡಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.1990ರ ಕಸ್ಟಡಿ ಸಾವಿನ ಪ್ರಕರಣದಲ್ಲಿ ಭಟ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ , ಈ ಹಿಂದೆ ಅವರು ಈ ಪ್ರಕರಣದಲ್ಲಿ 7 ವರ್ಷಗಳಿಗೂ ಹೆಚ್ಚು ಕಾಲ ಸೆರೆವಾಸ ಅನುಭವಿಸಿದ್ದು ವಾಣಿಜ್ಯೇತರ ಪ್ರಮಾಣದಲ್ಲಿ ಮಾದಕ ವಸ್ತು ಇರಿಸಿದ ಆರೋಪವಿದ್ದರೂ ಶಿಕ್ಷೆ ವಿಧಿಸಲಾಗಿದೆ ಎಂದರು
ಆದರೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್ ಅರ್ಜಿಗೆ ವಿರೋಧ ವ್ಯಕ್ತಪಡಿಸಿದರು. “ಸಂಚು ನಡೆಸಲಾಗಿತ್ತು. ಅಫೀಮು ಇರಿಸಿದ್ದರು. ವಶಪಡಿಸಿಕೊಂಡ ಅಫೀಮಿನ ಪ್ರಮಾಣ 1 ಕೆಜಿಗೂ ಹೆಚ್ಚು" ಎಂದರು.
ಮಾದಕವಸ್ತು ಹೊಂದಿದ್ದ ಆರೋಪದಡಿ ರಾಜಸ್ಥಾನ ಮೂಲದ ವಕೀಲರೊಬ್ಬರನ್ನು 1996ರಲ್ಲಿ ಬನಾಸ್ಕಾಂಠ ಪೊಲೀಸರು ಬಂಧಿಸಿದ್ದರು. ಈ ವೇಳೆ ಭಟ್ ಅವರು ಬನಾಸ್ಕಾಂಠ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.
ಆದರೆ ಇದೊಂದು ಸುಳ್ಳು ಪ್ರಕರಣವಾಗಿದ್ದು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಕೀಲರನ್ನು ಬೆದರಿಸುವ ಉದ್ದೇಶದಿಂದ ಕೇಸ್ ದಾಖಲಿಸಲಾಗಿತ್ತು ಎಂದು ರಾಜಸ್ಥಾನ ಪೊಲೀಸರು ನಂತರ ಹೇಳಿದ್ದರು. ಭಟ್ ಅವರನ್ನು ಸೆಪ್ಟೆಂಬರ್ 2018ರಲ್ಲಿ ಬಂಧಿಸಲಾಗಿದ್ದು ಅಂದಿನಿಂದ ಅವರು ಜೈಲಿನಲ್ಲಿದ್ದಾರೆ. ಭಟ್ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ತೀವ್ರ ರೀತಿಯಲ್ಲಿ ಟೀಕಿಸುವ ಮೂಲಕ ದೇಶದ ಗಮನ ಸೆಳೆದಿದ್ದರು.
2018ರ ಮಾದಕವಸ್ತು ಪ್ರಕರಣದಲ್ಲಿ ಬಂಧಿತರಾಗಿದ್ದ ಭಟ್, 1990ರಲ್ಲಿ ಪ್ರಭುದಾಸ್ ವೈಷ್ಣಾನಿ ಎಂಬವರ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಕಸ್ಟಡಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.