
ಟೆಲಿಫೋನ್ ಕದ್ದಾಲಿಕೆ ಆರೋಪ ಸಂಬಂಧ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖಾವಾರು ತನಿಖೆಯನ್ನು ಕೇಂದ್ರ ಆಡಳಿತಾತ್ಮ ನ್ಯಾಯ ಮಂಡಳಿ (ಸಿಎಟಿ) ರದ್ದುಪಡಿಸಿ ಆದೇಶಿಸಿದೆ. ಅಲೋಕ್ ಕುಮಾರ್ಗೆ ಸಲ್ಲಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ಲಭ್ಯವಾಗುವಂತೆ ಮಾಡಬೇಕು ಎಂದು ಪೀಠ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.
ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ತನ್ನ ವಿರುದ್ಧ ಇಲಾಖಾವಾರು ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಆಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಎಟಿಯ ಅಧ್ಯಕ್ಷರಾದ ನ್ಯಾಯಮೂರ್ತಿ ರಂಜಿತ್ ವಸಂತರಾವ್ ಮೋರೆ ಅವರ ಅವರಿದ್ದ ಪೀಠ ಈ ಆದೇಶ ನೀಡಿದೆ.
2019ರಲ್ಲಿ ನಡೆದಿದ್ದ ಕದ್ದಾಲಿಕೆ ಪ್ರಕರಣ ಬಯಲಾಗಿತ್ತು. ಈ ಆರೋಪದ ಸಂಬಂಧ ತನಿಖೆ ನಡೆಸಿದ್ದ ಸಿಬಿಐ, ಅಲೋಕ್ ಕುಮಾರ್ ವಿರುದ್ಧ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಹೆಚ್ಚುವರಿ ಪಟ್ಟಿಯಲ್ಲಿ ಇಲಾಖಾ ತನಿಖೆಗೆ ಶಿಫಾರಸ್ಸು ಮಾಡಿತ್ತು. ಈ ವರದಿಯ ಅನ್ವಯ ರಾಜ್ಯ ಸರ್ಕಾರ ಇಲಾಖಾವಾರು ತನಿಖೆಗೆ ಆದೇಶಿಸಿತ್ತು. ಅಲ್ಲದೆ, ಅರ್ಜಿದಾರರಿಗೆ ಸಿಗಬೇಕಾದ ಬಡ್ತಿ ಸೇರಿದಂತೆ ಇತರೆ ಸೌಲಭ್ಯಗಳಿಗೆ ತಡೆ ನೀಡಿತ್ತು.
ಇದನ್ನು ಪ್ರಶ್ನಿಸಿದ್ದ ಅರ್ಜಿದಾರ ಆಲೋಕ್ ಕುಮಾರ್ ಅವರು, ತಮ್ಮ ವಿರುದ್ದ ಇಲಾಖಾವಾರು ತನಿಖೆ ಕೈಗೊಳ್ಳುವಂತೆ ಸಿಬಿಐ ಸಲ್ಲಿಸಿರುವ ವರದಿ ಮತ್ತು ತಮ್ಮ ವಿರುದ್ಧದ ಇಲಾಖಾವಾರು ತನಿಖೆಗೆ ಆದೇಶಿಸಿರುವ ಸರ್ಕಾರ ಕ್ರಮ ರದ್ದುಪಡಿಸಬೇಕು ಎಂದು ಸಿಎಟಿಗೆ ಮನವಿ ಮಾಡಿದ್ದರು.
ಅರ್ಜಿಯ ಕುರಿತಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬಿ ಕೆ ಶ್ರೀವಾಸ್ತವ ಮತ್ತು ಆಡಳಿತಾತ್ಮಕ ಸದಸ್ಯ ಸಂತೋಷ್ ಮೆಹ್ರಾ ಅವರಿದ್ದ ಪೀಠವು ಅರ್ಜಿಯ ಸಂಬಂಧ ಭಿನ್ನ ತೀರ್ಪು ನೀಡಿತ್ತು. ಹೀಗಾಗಿ, ಪ್ರಕರಣವನ್ನು ಮೂರನೇ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಲಾಗಿತ್ತು.