ಗ್ರೂಪ್-ಬಿ, ಗ್ರೂಪ್-ಸಿ ಕೇಡರ್‌ ಖಾಲಿ ಹುದ್ದೆಗಳ ತಾತ್ಕಾಲಿಕ ಭರ್ತಿ: ಹೈಕೋರ್ಟ್‌ನಿಂದ ಸರ್ಕಾರಕ್ಕೆ 6 ತಿಂಗಳ ಕಾಲಾವಕಾಶ

ವಿವಿಧ ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಗ್ರೂಪ್-ಸಿ’ ಸಿಬ್ಬಂದಿಯನ್ನು ‘ಗ್ರೂಪ್-ಬಿ’ಗೆ ವಿಲೀನಗೊಳಿಸಲು ವೃಂದ & ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. 2 ತಿಂಗಳಲ್ಲಿ ಕರಡು ನಿಯಮ ಪ್ರಕಟಿಸಬೇಕು ಎಂದಿದ್ದ ಹೈಕೋರ್ಟ್‌.
Karnataka High Court
Karnataka High Court

ರಾಜ್ಯದ ವಿವಿಧ ಪೌರ ಸಂಸ್ಥೆಗಳಲ್ಲಿನ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಕೇಡರ್‌ನಲ್ಲಿ ಖಾಲಿಯಿರುವ ಹುದ್ದೆಗಳ ತಾತ್ಕಾಲಿಕ ಭರ್ತಿ ಸೇರಿದಂತೆ ನ್ಯಾಯಾಲಯದ ಆದೇಶ ಪಾಲಿಸಲು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ಸೋಮವಾರ ಆರು ತಿಂಗಳ ಕಾಲಾವಕಾಶ ನೀಡಿದೆ.

ಕರ್ನಾಟಕ ನಗರ ಪಾಲಿಕೆಗಳ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಮೇಲಿನ ಆದೇಶ ಮಾಡಿದೆ.

ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು ರಾಜ್ಯದ ವಿವಿಧ ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ ಸಿಬ್ಬಂದಿಯನ್ನು ಗ್ರೂಪ್ ಬಿಗೆ ವಿಲೀನಗೊಳಿಸುವ ವಿಚಾರದಲ್ಲಿ ಕರಡು ನಿಯಮಗಳು ಸಿದ್ಧವಾಗಿದ್ದವು. ಸಚಿವ ಸಂಪುಟದಿಂದ ಅನುಮೋದನೆ ಪಡೆಯುವುದು ತಡವಾದ ಕಾರಣ ಅಧಿಸೂಚನೆ ಹೊರಡಿಸಲಾಗಲಿಲ್ಲ. ಸದ್ಯ ಕರಡು ನಿಯಮಗಳನ್ನು ಜೂನ್‌ 3ರಂದು ಪ್ರಕಟಿಸಿದ್ದು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ ಎಂದರು.

“ಗ್ರೂಪ್-ಬಿ ಮತ್ತು ಗ್ರೂಪ್-ಸಿ ಕೇಡರ್‌ನಲ್ಲಿ ಖಾಲಿಯಿರುವ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಕ್ರಮ ಜರುಗಿಸಬೇಕೆಂಬ ಏಕ ಸದಸ್ಯ ನ್ಯಾಯಪೀಠದ ಆದೇಶದ ಉಳಿದ ಭಾಗವನ್ನು ಒಂದು ತಿಂಗಳಲ್ಲಿ ಪಾಲಿಸಲಾಗುವುದು” ಎಂದು ಪೀಠಕ್ಕೆ ಭರವಸೆ ನೀಡಿದರು.

ಅದಕ್ಕೆ ಸಮ್ಮತಿಸಿದ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್. ಅರ್ಚನಾ ಅವರು ಮುಂದಿನ ವಿಚಾರಣೆಗೂ ಹಾಜರಾಗಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಇದೇ ವೇಳೆ ಅಧಿಕಾರಿಗಳ ಕಾರ್ಯನಿರ್ವಹಣೆಯ ಬಗ್ಗೆ ನ್ಯಾಯಾಲಯವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ನ್ಯಾಯಾಲಯದ ಆದೇಶದ ಹೊರತಾಗಿಯೂ ರಾಜ್ಯದ ವಿವಿಧ ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ ಸಿಬ್ಬಂದಿಯನ್ನು ಗ್ರೂಪ್ ಬಿಗೆ ವಿಲೀನಗೊಳಿಸುವ ವಿಚಾರದಲ್ಲಿ ಕರಡು ನಿಯಮಗಳನ್ನು ಪ್ರಕಟಿಸದ ಬಗ್ಗೆ ವಿವರಣೆ ನೀಡಲು ವಿಚಾರಣೆಗೆ ಖುದ್ದು ಹಾಜರಾಗುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಮೇ 30ರಂದು ಪೀಠ ನಿರ್ದೇಶಿಸಿತ್ತು.

Also Read
ಗ್ರೂಪ್ ಸಿ ಸಿಬ್ಬಂದಿ ಗ್ರೂಪ್ ಬಿಗೆ ವಿಲೀನ: ಕರಡು ನಿಯಮ ಪ್ರಕಟಿಸದ ಸರ್ಕಾರ, ಅಧಿಕಾರಿಗಳ ಹಾಜರಾತಿಗೆ ಹೈಕೋರ್ಟ್‌ ಆದೇಶ

ರಾಜ್ಯದ ವಿವಿಧ ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಗ್ರೂಪ್-ಸಿ’ ಸಿಬ್ಬಂದಿಯನ್ನು ‘ಗ್ರೂಪ್-ಬಿ’ಗೆ ವಿಲೀನಗೊಳಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಈ ನಿಟ್ಟಿನಲ್ಲಿ ಎರಡು ತಿಂಗಳಲ್ಲಿ ಕರಡು ನಿಯಮ ಪ್ರಕಟಿಸಬೇಕು ಎಂದು 2021ರ ಜುಲೈ 19ರಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿತ್ತು. ಈ ಆದೇಶ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಕರ್ನಾಟಕ ನಗರ ಪಾಲಿಕೆಗಳ ಉದ್ಯೋಗಿಗಳ ಸಂಘ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

Related Stories

No stories found.
Kannada Bar & Bench
kannada.barandbench.com