‘ಸಂತ್ರಸ್ತರ ಪರಿಹಾರ ಯೋಜನೆ’ ಜಾರಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಸ್ಎಲ್ಎಸ್ಎ) 2022-23ನೇ ಸಾಲಿಗೆ ₹10 ಕೋಟಿ ಹಣವನ್ನು ಬಜೆಟ್ನಲ್ಲಿ ಮೀಸಲಿಡಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ಗೆ ಸೋಮವಾರ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಅತ್ಯಾಚಾರ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಕ್ತ ಮಾರ್ಗಸೂಚಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ‘ಪೀಪಲ್ಸ್ ಮೂವ್ಮೆಂಟ್ ಅಗೇನ್ಸ್ಟ್ ಸೆಕ್ಷ್ಯುಯಲ್ ಅಸಾಲ್ಟ್’ (ಪಿಎಂಎಎಸ್ಎ) ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದ ಸರ್ಕಾರದ ವಕೀಲರು, 2022-23ನೇ ಸಾಲಿಗೆ ಸಂತ್ರಸ್ತರ ಪರಿಹಾರ ಯೋಜನೆ ಜಾರಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಸ್ಎಲ್ಎಸ್ಎ) ನೀಡಲು ಬಜೆಟ್ನಲ್ಲಿ ₹10 ಕೋಟಿ ಮೀಸಲಿಡಲಾಗಿದೆ. ಪ್ರಾಧಿಕಾರದಿಂದ ಪ್ರಸ್ತಾವನೆ ಬಂದ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು ಎಂದು ಪೀಠಕ್ಕೆ ತಿಳಿಸಿದರು.
ಇದನ್ನು ಪರಿಗಣಿಸಿದ ನ್ಯಾಯಾಲಯವು ಕಾನೂನು ಸೇವೆಗಳ ಪ್ರಾಧಿಕಾರವು ಹಣ ಬಿಡುಗಡೆಗಾಗಿ ಕೆಎಸ್ಎಲ್ಎಸ್ಎ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆ ಸಲ್ಲಿಕೆಯಾದರೆ, ಅದನ್ನು ಪರಿಗಣಿಸಿ ಸರ್ಕಾರ ಹಣ ಬಿಡುಗಡೆ ಮಾಡಬೇಕು” ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.