ಟ್ವಿಟರ್‌ ಖಾತೆ ನಿರ್ಬಂಧ ಪ್ರಕರಣ: ಆದೇಶ ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್‌

2021ರ ಫೆಬ್ರವರಿಯಿಂದ 2022ರ ಫೆಬ್ರವರಿಯ ನಡುವೆ ಹತ್ತು ನಿರ್ಬಂಧ ಆದೇಶಗಳನ್ನು ಮಾಡಲಾಗಿದ್ದು, ಸಾರ್ವಜನಿಕರಿಗೆ ಮಾಹಿತಿ ದೊರೆಯದಂತೆ ಕೆಲವು ಮಾಹಿತಿ ನಿರ್ಬಂಧಿಸುವಂತೆ ಮತ್ತು ಕೆಲವು ಖಾತೆಗಳನ್ನು ಅಮಾನತು ಮಾಡುವಂತೆ ಕೋರಲಾಗಿತ್ತು.
Twitter
Twitter

ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶ ಕಾಯ್ದಿರಿಸಿದೆ.

ಕೇಂದ್ರ ಸರ್ಕಾರದ ಹತ್ತು ನಿರ್ಬಂಧ ಆದೇಶ ಮತ್ತು 2021ರ ಫೆಬ್ರವರಿಯಿಂದ 2022ರ ಫೆಬ್ರವರಿಯ ನಡುವೆ 39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ನಿರ್ದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಟ್ವಿಟರ್‌ ಮತ್ತು ಕೇಂದ್ರ ಸರ್ಕಾರದ ವಾದವನ್ನು ವಿಸ್ತೃತವಾಗಿ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತು. ಒಟ್ಟು 1,474 ಖಾತೆಗಳು ಮತ್ತು 175 ಟ್ವೀಟ್‌ಗಳ ಪೈಕಿ 39 ಯುಆರ್‌ಎಲ್‌ಗಳನ್ನು ನಿರ್ಬಂಧಿಸಿರುವ ಆದೇಶವನ್ನು ಮಾತ್ರ ಟ್ವಿಟರ್‌ ಪ್ರಶ್ನಿಸಿದೆ.  

ಟ್ವಿಟರ್‌ ಅರ್ಜಿಯನ್ನು ವಿರೋಧಿಸಿದ ಕೇಂದ್ರ ಸರ್ಕಾರದ ಪರ ವಕೀಲರು “ಟ್ವಿಟರ್ ತನ್ನ ಬಳಕೆದಾರರ ಪರವಾಗಿ ಸಮರ್ಥಿಸುವ ಹಕ್ಕನ್ನು ಹೊಂದಿಲ್ಲ. ಹೀಗೆ ಮಾಡಲು ಶಾಸನದ ಬೆಂಬಲ ಅಗತ್ಯವಿದೆ. ದಾವೆಯಲ್ಲಿ ಹಾಜರಾಗುವ ಹಕ್ಕಿನ ವಿಷಯವನ್ನು ಪರಿಗಣಿಸುವುದಾದರೆ ಟ್ವಿಟರ್‌ ಪ್ರಕರಣದಲ್ಲಿ ಬಾದಿತ ಪಕ್ಷಕಾರನೇ? ಎಲ್ಲ ಬಳಕೆದಾರರನ್ನು ಅದು ಬೆಂಬಲಿಸುತ್ತದೆಯೇ? ಟ್ವಿಟರ್‌ ಮತ್ತು ಅದರ ಬಳಕೆದಾರರ ನಡುವೆ ಯಾವುದೇ ಸದಸ್ಯತ್ವ ಅಥವಾ ಸಂಬಂಧದ ಪ್ರಶ್ನೆ ಉದ್ಭವಿಸುವುದಿಲ್ಲ. ಕೇಂದ್ರ ಸರ್ಕಾರವು ಸ್ವೇಚ್ಛೆಯಿಂದ ನಡೆದುಕೊಂಡರೆ ಮಾತ್ರ ಸಂವಿಧಾನದ 14ನೇ ವಿಧಿ ಅಡಿ ಹಕ್ಕು ಉಲ್ಲಂಘನೆ ಉಲ್ಲೇಖಿಸಿ ಟ್ವಿಟರ್‌ ನ್ಯಾಯಾಲಯದ ಕದತಟ್ಟಬಹುದು” ಎಂದು ವಾದಿಸಿದ್ದರು.

“ಸುಳ್ಳು ಸುದ್ದಿ ಮತ್ತು ಉದ್ದೇಶಪೂರ್ವಕ ಅಸಂಬದ್ಧ ಮಾಹಿತಿ ಹಂಚಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಟ್ವಿಟರ್‌ನಂಥ ವೇದಿಕೆಗಳು ಪರಿಣಾಮಕಾರಿ ಕ್ರಮಕೈಗೊಳ್ಳುತ್ತಿಲ್ಲ. ದೇಶದ ಸಮಗ್ರತೆ ಮತ್ತು ಸಾರ್ವಭೌಮತೆ, ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯು ಹೆಚ್ಚಳವಾಗುತ್ತಿದೆ” ಎಂದು ವಾದಿಸಿದ್ದರು.

“ಸೂಕ್ಷ್ಮ ವಿಚಾರಗಳು ಹಾಗೂ ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಅಭಿಪ್ರಾಯ ಹಂಚಿಕೊಳ್ಳಲಾಗುತ್ತದೆ. ನ್ಯಾಯಸಮ್ಮತ ಅಭಿಪ್ರಾಯಕ್ಕೆ ಪ್ರಜಾಪ್ರಭುತ್ವದಲ್ಲಿ ಒಪ್ಪಿಗೆ ಇದ್ದರೂ ವ್ಯಂಗ್ಯದ ರೂಪದಲ್ಲಿನ ಟ್ವೀಟ್‌ಗಳು ಮತ್ತು ಮಾಹಿತಿಗಳು ಟ್ವಿಟರ್‌ನಲ್ಲಿ ವ್ಯಾಪಕವಾಗಿವೆ. ಇತರೆ ಸಾಮಾಜಿಕ ಮಾಧ್ಯಮಗಳಿಗೆ ಹೋಲಿಕೆ ಮಾಡಿದರೆ ಸೀಮಿತ ಪದ ಮಿತಿ ಹೊಂದಿರುವ ಟ್ವಿಟರ್‌ ವ್ಯಾಪಕವಾಗಿ ತಪ್ಪು ಮಾಹಿತಿ ಪಸರಿಸಿರುವ ಶಕ್ತಿ ಹೊಂದಿದೆ” ಎಂದಿದ್ದರು.

ಟ್ವಿಟರ್‌ ಪರ ವಕೀಲರು “ಟ್ವಿಟರ್‌ನಲ್ಲಿ ವ್ಯಕ್ತಿಗತವಾಗಿ ಹೊಂದಿರುವ ನೂರಾರು, ಸಾವಿರಾರು ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಮಾಡಿದೆ. ಕಾನೂನಿನ ಅನ್ವಯ ನಾವು ಸರ್ಕಾರದ ಆದೇಶವನ್ನು ಪಾಲಿಸಬೇಕಿದೆ. ಆದರೆ, ತಮ್ಮ ಟ್ವಿಟರ್‌ ಹ್ಯಾಂಡಲ್‌ ನಿರ್ಬಂಧವಾದುದ್ದಕ್ಕೆ ವ್ಯಕ್ತಿಗತವಾಗಿ ಬಳಕೆದಾರರಿಗೆ ಯಾವುದೇ ಆಶ್ರಯ ಅಥವಾ ಪರಿಹಾರ ಇರುವುದಿಲ್ಲ. ಇದು ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ನಿರ್ಬಂಧ ಆದೇಶ ಮತ್ತು ಜಾರಿಯು ಗೌಪ್ಯವಾಗಿರಬೇಕು ಎಂದು ಹೇಳಲಾಗಿರುವುದರಿಂದ ನಾವು ಅದನ್ನು ಬಹಿರಂಗಪಡಿಸಿಲ್ಲ. ಈ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ. 1000ಕ್ಕೂ ಅಧಿಕ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸರ್ಕಾರ ಆದೇಶ ಮಾಡಿದೆ. ಇದಕ್ಕೆ ಯಾವುದೇ ಸಕಾರಣ ನೀಡಿಲ್ಲ" ಎಂದು ವಾದಿಸಿದ್ದರು.

Also Read
ವೈಯಕ್ತಿಕ ಖಾತೆ ನಿರ್ಬಂಧ: ಟ್ವಿಟರ್‌ ಮರುಪರಿಶೀಲನಾ ಸಮಿತಿಯ ಮುಂದೆ ಹಾಜರಾಗಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ

“ಟ್ವಿಟರ್‌ ಖಾತೆಯನ್ನು ನಿರ್ಬಂಧಿಸಿದರೆ ನಾವು ಬಳಕೆದಾರರಿಗೆ ಉತ್ತರಿಸಬೇಕಾಗುತ್ತದೆ. ಸ್ವಾಭಾವಿಕ ನ್ಯಾಯದ ಅನ್ವಯ ಬಳಕೆದಾರರೊಬ್ಬರು ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದರೆ ಅವರಿಗೆ ಅದನ್ನು ತಿಳಿಸಿದ ಬಳಿಕ ಅವರ ಖಾತೆಯನ್ನು ನಿರ್ಬಂಧಿಸಬೇಕಾಗುತ್ತದೆ. ಹೀಗಾಗಿ, ಏತಕ್ಕಾಗಿ ನಿರ್ದಿಷ್ಟ ಬಳಕೆದಾರರ ಖಾತೆಗಳನ್ನು ನಿರ್ಬಂಧಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕಾರಣ ನೀಡಬೇಕು. ಸದ್ಯದ ಕೇಂದ್ರ ಸರ್ಕಾರ ಆದೇಶ ಪಾಲಿಸಿದರೆ ಟ್ವಿಟರ್‌ ಉದ್ಯಮಕ್ಕೆ ಹಾನಿಯಾಗುತ್ತದೆ. ಹೀಗಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿರುವ ಒಂದು ಮಾದರಿಯನ್ನು ನ್ಯಾಯಾಲಯ ಪರಿಶೀಲಿಸಬಹುದು” ಎಂದು ವಾದಿಸಿದ್ದರು.

Related Stories

No stories found.
Kannada Bar & Bench
kannada.barandbench.com