
ಲಡಾಖ್ಗೆ ಪ್ರತ್ಯೇಕ ರಾಜ್ಯ ಸ್ಥಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಚಿಂತಕ, ಪರಿಸರವಾದಿ, ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ವಕೀಲ ಸರ್ವಂ ರಿತಮ್ ಖರೆ ಅವರ ಮೂಲಕ ಅಕ್ಟೋಬರ್ 2 ರಂದು ಅರ್ಜಿ ಸಲ್ಲಿಸಲಾಗಿದೆ.
ದಸರಾ ಹಬ್ಬದ ನಿಮಿತ್ತ ಸುಪ್ರೀಂ ಕೋರ್ಟ್ಗೆ ಈ ವಾರ ರಜೆ ಇರುವುದರಿಂದ ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಸ್ಪಷ್ಟವಾಗಿಲ್ಲ.
ಸೆಪ್ಟೆಂಬರ್ 26 ರಂದು ಲಡಾಖ್ನಲ್ಲಿ ಬಂಧಿತರಾದ ವಾಂಗ್ಚುಕ್ ಪ್ರಸ್ತುತ ಜೋಧ್ಪುರದ ಜೈಲಿನಲ್ಲಿದ್ದಾರೆ.
ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ನೀಡುವಂತೆ ಬೇಡಿಕೆ ಇಟ್ಟು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ.